ಬೆಳಗಾವಿ, ಡಿ.12 www.bengaluruwire.com : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (87th All India Kannada Sahitya Sammelana) ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯ ಇಂದು ಅಧಿಕೃತವಾಗಿ ಆಹ್ವಾನಿಸಿದರು.
ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಅಧಿಕೃತವಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಇದೇ ವೇಳೆ ಹಾಜರಿದ್ದರು.
ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗುತ್ತಿದೆ. ಸಮ್ಮೇಳನಕ್ಕೆ ಬರುವ ಅತಿಥಿ ಗಣ್ಯರಿಗೆ, ಕಲಾವಿದರಿಗೆ ಮತ್ತು ಪ್ರತಿನಿಧಿಗಳಿಗೆ ಒಟ್ಟು 15 ಸಾವಿರ ವಸತಿ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ, ಮದ್ದೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕುಗಳ ಹೋಟೆಲ್, ಲಾಡ್ಜ್, ಕಲ್ಯಾಣ ಮಂಟಪ, ಸಮುದಾಯ ಭವನ, ವಿದ್ಯಾರ್ಥಿ ನಿಲಯಗಳನ್ನು ಒಂದೂವರೆ ತಿಂಗಳು ಮುಂಚಿತವಾಗಿಯೇ ಕಾಯ್ದಿರಿಸಲಾಗಿದೆ.

ವಿದೇಶಿ ಗಣ್ಯರು-250, ಹೊರ ರಾಜ್ಯಗಳ ಕನ್ನಡಿಗರು-250, ವಿವಿಧ ಜಿಲ್ಲೆಗಳ ಕಲಾತಂಡಗಳ ಕಲಾವಿದರು- 600, ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಗಾಗಿ 1,000, ಕವಿಗೋಷ್ಠಿ ಮತ್ತು ವಿಚಾರಗೋಷ್ಠಿಯ ಕವಿಗಳು ಮತ್ತು ಸಾಹಿತಿಗಳು, ಸನ್ಮಾನಿತರು ಹಾಗೂ ಅತಿಥಿ ಗಣ್ಯರಿಗೆ ವಿವಿಧ ಸ್ಥಳಗಳಲ್ಲಿ ವಸತಿ ವ್ಯವಸ್ಥೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಮ್ಮೇಳನದ ವಸತಿ ಸಮಿತಿ ತಿಳಿಸಿದೆ.
ಆರಂಭದಲ್ಲಿ 10 ಸಾವಿರ ಪ್ರತಿನಿಧಿಗಳ ನೋಂದಣಿ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ನಂತರ 6 ಸಾವಿರಕ್ಕೆ ಸೀಮಿತಗೊಳಿಸಲಾಯಿತು. ಅಷ್ಟು ಮಂದಿ ಆನ್ಲೈನ್ ನೋಂದಣಿ ಮಾಡಿಕೊಂಡಿದ್ದು, ಎಲ್ಲರೂ ಪರಿಷತ್ ಸದಸ್ಯರಾಗಿದ್ದಾರೆ. ಅವರಿಗೆ ‘ಸಮ್ಮೇಳನ ಕಿಟ್’ ಮತ್ತು ‘ವಸತಿ ಕಿಟ್’ ನೀಡಲಾಗುತ್ತದೆ. ‘ಪ್ರತಿನಿಧಿಗಳ ನೋಂದಣಿ ಮುಕ್ತಾಯಗೊಂಡಿದ್ದು, ಉಳಿದವರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು. ಸರ್ಕಾರಿ ನೌಕರರಿಗೆ ‘ಒಒಡಿ’ಯನ್ನು ಸ್ಥಳದಲ್ಲೇ ನೋಂದಾಯಿಸಲಾಗುತ್ತದೆ’ ಎಂದು ಕಸಾಪ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ಭರದಿಂದ ತಯಾರಿ ನಡೆದಿದೆ. ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊ.ರು ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ಮನೆ ಮನೆಗೆ ಬಾವುಟ ಅನ್ನುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ.




















