ಬೆಂಗಳೂರು, ಫೆ.16 www.bengaluruwire.com : ನಗರದಲ್ಲಿ ಹೊಂಡ ಬಿದ್ದ ವಾರ್ಡ್ ರಸ್ತೆ, ಪ್ರಮುಖ ರಸ್ತೆ, ಹೊರವರ್ತುಲ ರಸ್ತೆಗಳಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಾ ಹೈರಾಣಾಗಿದ್ದಾರೆ. ನಗರದಲ್ಲಿ ಪ್ರಮುಖ ಹೊರವರ್ತುಲ ರಸ್ತೆಗಳಲ್ಲಿ ಗ್ರೇಡ್ ಸಪರೇಟರ್, ಮೇಲ್ಸೇತುವೆ ಕಾಮಗಾರಿ ಕೆಲಸ ಅರ್ಧಕ್ಕೆ ನಿಂತು ಒಂದೂವರೆ ಎರಡು ವರ್ಷಗಳಾಗಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ತೀರ ಹದಗೆಟ್ಟ ರಸ್ತೆಗಳಿಗೆ ಕಾಯಕಲ್ಪ ಕಲ್ಪಿಸುವ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಹುತೇಕ ನಿಂತು ಹೋಗಿದೆ. ಈ ಮಧ್ಯೆ ನಗರಕ್ಕೆ ದುಬಾರಿಯಾಗಿರುವ ವೈಟ್ ಟಾಪಿಂಗ್ ಯೋಜನೆ (White topping project)ಯನ್ನು ನಗರದೆಲ್ಲೆಡೆ ವಿಸ್ತರಿಸುವ ಯೋಜನೆಗೆ ಬಿಬಿಎಂಪಿ ಈಗಾಗಲೇ ಕೈ ಹಾಕಿದೆ.
ಇನ್ನೊಂದೆಡೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ (Deputy Chief Minister and bangalore Development minister DK Shivakumar) 1700 ಕೋಟಿ ರೂ. ವೆಚ್ಚದ ತೆರಿಗೆದಾರರ ಹಣದಲ್ಲಿ 97 ರಸ್ತೆಗಳಲ್ಲಿ 14 ಪ್ಯಾಕೇಜ್ ಗಳಲ್ಲಿ ನಡೆಯುತ್ತಿರುವ 150 ಕಿ.ಮೀ ಉದ್ದದಲ್ಲಿ ಕೈಗೊಂಡಿರುವ ಯೋಜನೆಯನ್ನು ಕೇವಲ ಇಂದು ಒಂದೇ ದಿನದಲ್ಲಿ ಕೆಲವು ಗಂಟೆಗಳಲ್ಲಿ ಪರಿವೀಕ್ಷಣೆ ಮಾಡುವ ಶಾಸ್ತ್ರ ಮಾಡಿ ಮುಗಿಸಿದ್ದಾರೆ.
ರಾಜಾಜಿನಗರ 10ನೇ ಕ್ರಾಸ್ ನಿಂದ ಆರಂಭವಾದ ಡಿಸಿಎಂ ಡಿಕೆಶಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಮುನೀಷ್ ಮುದ್ಗಿಲ್, ಪಾಲಿಕೆ ಮುಖ್ಯ ಪ್ರಧಾನ ಎಂಜಿನಿಯರ್ ಹಾಗೂ ರಸ್ತೆ ಮೂಲ ಸೌಕರ್ಯ, ಬೃಹತ್ ನೀರುಗಾಲುವೆ ಎರಡೂ ವಿಭಾಗಗಳ ಚೀಫ್ ಎಂಜಿನಿಯರ್ ಕೂಡ ಆಗಿರುವ ಬಿ.ಎಸ್.ಪ್ರಹ್ಲಾದ್ ಅವರ ಟೀಮ್ ಜೊತೆಗೆ ಬಹುತೇಕ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಗಳು, ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಜೊತೆಗೆ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಯಿತು.


150 ಉದ್ದದ ಸುದೀರ್ಘ ಮಾರ್ಗದ ವೈಟ್ ಟಾಪಿಂಗ್ ಕಾಮಗಾರಿಯ ಪೈಕಿ ಜನಜಂಗುಳಿಯ ನಡುವೆ ಕೇವಲ ಕೆಲವೇ ಗಂಟೆಗಳಲ್ಲಿ ವಿವಿಧ 10 ಕಡೆಗಳಲ್ಲಿ ಸಾಗಿದ ಡಿಸಿಎಂ, ಕಾಮಗಾರಿ ಗುಣಮಟ್ಟ, ಸ್ಥಳ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಇದೊಂದು ಐವಾಷ್ ನಗರ ಪ್ರದಕ್ಷಿಣೆ ಎಂಬ ಟೀಕೆಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಹತ್ತಿರದಲ್ಲೇ ರಾಜ್ಯ ಬಜೆಟ್ ಮಂಡನೆಯಾಗಲಿದೆ, ಯಾವಾಗ ಬೇಕಾದರೂ ಕೋರ್ಟ್ ನಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸೂಚನೆ ಬರಬಹುದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಸಮಿತಿ ಜನರಿಂದ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.
ಇದೇ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಶೀಘ್ರದಲ್ಲಿ ಕಾಮಗಾರಿ ಮುಗಿಸಿದರೆ ರಾಜ್ಯ ಸರ್ಕಾರದ ಅನುದಾನವಾದ್ದರಿಂದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆದಷ್ಟು ಶೀಘ್ರದಲ್ಲಿ ಆಗಲಿದೆ. ಇದೆಲ್ಲದೆ ಹಲವು “ಲೆಕ್ಕಾಚಾರ”ಗಳನ್ನು ಗಮನದಲ್ಲಿಟ್ಟುಕೊಂಡು ಈ ನಗರ ಪ್ರದಕ್ಷಿಣೆ ಕಾರ್ಯ ನಡೆದಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಬಗ್ಗೆ ಭಾನುವಾರ ಪರಿಶೀಲನೆ ನಡೆಸಿದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ತಿಳಿಸಿದರು.
“ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ” ಎಂದು ಅವರು ಹೇಳಿದರು.
“ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು.
“ಇದರ ಜತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ” ಎಂದರು.
ಸುದ್ದಿಗಾರರು, ಇಂದು ನೀವೇ ಗುಣಮಟ್ಟ ಪರಿಶೀಲನೆ ಮಾಡಿದ್ದೀರಿ ಎಂದು ಕೇಳಿದಾಗ, “ಈ ಯೋಜನೆಗೆ ಮೀಸಲಿಟ್ಟಿರುವ ₹1700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ? ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂ ಎಸ್ ಎಸ್ ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ” ಎಂದು ತಿಳಿಸಿದರು.
ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ” ಎಂದು ತಿಳಿಸಿದರು.
ಬೇಸಿಗೆ ಆರಂಭವಾಗುತ್ತಿದ್ದು, ನೀರಿನ ಅಭಾವ ಎದುರಾಗದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದಾಗ, “ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು” ಎಂದು ಪ್ರತಿಕ್ರಿಯಿಸಿದರು.
ಪಾಲಿಕೆಯ ಆರ್ ಓ ಘಟಕಗಳು ದುರಸ್ತಿಗೆ ಬಂದಿವೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, “ಎಲ್ಲಾ ಘಟಕಗಳ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.