ಬೆಂಗಳೂರು: ಫೆ.19 www.bengaluruwire.com : ಬಿಬಿಎಂಪಿಯ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಪಾಲಿಕೆಯ ಒಡೆತನದಲ್ಲಿರುವ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಶಿಕ್ಷಣ ವಿಭಾಗದ ವಿಶೇಷ ಆಯಕ್ತರಾದ ಪ್ರೀತಿ ಗೆಹ್ಲೋಟ್ ಎಲ್ಲಾ ಪ್ರೌಢಶಾಲೆಗಳಿಗೂ ಅನಿರೀಕ್ಷಿತವಾಗಿ ಭೇಟಿ ನೀಡುತ್ತಿದ್ದಾರೆ.
ಈ ಅನಿರೀಕ್ಷಿತ ಭೇಟಿ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವ ರೀತಿ ಶಿಕ್ಷಣ ನೀಡಲಾಗುತ್ತಿದೆ ಎಂಬುದನ್ನು ಪರಿಶೀಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಬಿಬಿಎಂಪಿ ಒಡೆತನದಲ್ಲಿ 33 ಪ್ರೌಢಶಾಲೆಗಳು ಬರಲಿದ್ದು, 2024-25ನೇ ಸಾಲಿನಲ್ಲಿ 3148 ಬಾಲಕರು, 4248 ಬಾಲಕಿಯರು ಸೇರಿದಂತೆ ಒಟ್ಟು 7396 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿಯ ಅಂತಿಮ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿಯೂ ಬೆಳಗ್ಗೆ ಮತ್ತು ಸಂಜೆ ಎರಡೂ ವೇಳೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಸೇರಿ 3 ಗಂಟೆಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಶಿಕ್ಷಕರು ಸರಿಯಾದ ಅನುಕ್ರಮದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಸೂಚನೆ ನೀಡಲಾಗಿದೆ ಎಂದು ಪ್ರೀತಿ ಗೆಹ್ಲೋಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಲಸಿಗ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಹೆಚ್ಚು ಆದ್ಯತೆ :

ಪಾಲಿಕೆ ವ್ಯಾಪ್ತಿಯಲ್ಲಿರುವ ಶಾಲಾ/ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಾಲಿಕೆಯ ಶಾಲಾ/ಕಾಲೇಜುಗಳಲ್ಲಿ ಬೇರೆ ಜಿಲ್ಲೆ, ಬೇರೆ ರಾಜ್ಯಗಳಿಂದ ಬಂದಿರುವ ತೆಲುಗು, ಹಿಂದಿ, ತಮಿಳು ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕನ್ನಡ ಭಾಷೆ ಕಲಿಯುವುದು ಕಷ್ಟವಾಗಿರುವ ನಿಟ್ಟಿನಲ್ಲಿ ಆ ಭಾಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಸಲುವಾಗಿ ಶಿಕ್ಷಕರಿಂದ ವಿಶೇಷ ತರಗತಿಗಳನ್ನು ಹಮ್ಮಿಕೊಂಡು ನುರಿತ ಶಿಕ್ಷಣವನ್ನು ನೀಡಲಾಗುತ್ತಿದೆ. ಅದಲ್ಲದೆ ಬೇರೆ ಯಾವ ವಿಷಯಗಳಲ್ಲಿ ಹಿನ್ನೆಡೆಯಿದ್ದಾರೆ ಎಂಬುದನ್ನು ಅರಿತು ಆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ.
ಶಾಲೆಗಳಿಗೆ ಅನಿರೀಕ್ಷಿತ ತಪಾಸಣೆ:
ಶಾಲಾ ಶಿಕ್ಷಕರು ತರಗತಿಗಳಲ್ಲಿ ನೀಡುತ್ತಿರುವ ಬೋಧನೆಯನ್ನು ಖುದ್ದು ಪರಿಶೀಲಿಸುವ ನಿಟ್ಟಿನಲ್ಲಿ ಅನಿರೀಕ್ಷಿತ ತಪಾಸಣೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಲಗ್ಗೆರೆ, ಶಕ್ತಿ ಗಣಪತಿ ನಗರ, ವಿಜಯನಗರ, ಮಾಗಡಿ ರಸ್ತೆಯಲ್ಲಿರುವ ಪ್ರೌಢಶಾಲೆ ಸೇರಿದಂತೆ 8 ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಎಲ್ಲಾ ಪ್ರೌಢಶಾಲೆಗಳಿಗೂ ಅನಿರೀಕ್ಷಿತವಾಗಿ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಚಟುವಟಿಗಳನ್ನು ಹೆಚ್ಚಿಸುವ ಸಂಬಂಧ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಪರಿಶೀಲಿಸಲಿದ್ದಾರೆ.
ಕಾಲೇಜುಗಳಿಗೂ ಶೀಘ್ರ ಭೇಟಿ :
ಎಸ್.ಎಸ್.ಎಲ್.ಸಿ ಪರೀಕ್ಷೆ ಸಮೀಪಿಸುತ್ತಿರುವ ಕಾರಣ ಎಲ್ಲಾ ಪ್ರೌಡಶಾಲೆಗಳಿಗೆ ಮೊದಲು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅನಂತರ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಶೇ. 100 ರಷ್ಟು ಫಲಿತಾಂಶದ ಗುರಿ :
ಪ್ರಸಕ್ತ ಸಾಲಿನ ಪಾಲಿಕೆ ಒಡೆತನದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ. 100ಕ್ಕೆ 100 ರಷ್ಟು ಫಲಿತಾಂಶ ಪಡೆಯುವ ಗುರಿಯನ್ನು ಪಾಲಿಕೆಯ ಶಿಕ್ಷಣ ವಿಭಾಗವು ಒಂದಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಸಕ್ತ ಸಾಲಿನ ಪಾಲಿಕೆ ಒಡೆತನದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಗುರಿಯನ್ನು ಪಾಲಿಕೆ ಶಿಕ್ಷಣ ವಿಭಾಗವು ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಾಲಿಕೆ ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.