ಬೆಂಗಳೂರು, ಮಾ.24 www.bengaluruwire.com : “ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಿರ್ಮಾಣ ಕಟ್ಟಡವನ್ನು ಎಷ್ಟು ವಿಸ್ತೀರ್ಣದಲ್ಲಿ, ಎಷ್ಟು ಎತ್ತರದಲ್ಲಿ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ” ಎಂದು ಹೇಳುತ್ತಾ ಅಕ್ರಮ ನಿರ್ಮಾಣವನ್ನು ಎಐ ತಂತ್ರಜ್ಞಾನದ ಮೂಲಕ ಹಿಮ್ಮೆಟ್ಟಿಸುವ ಸುಳಿವನ್ನು ನೀಡಿದರು.
“ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ. ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು” ಎಂದರು.
“ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳ ಅಕ್ರಮ; ಗಮನಕ್ಕೆ ತರದೆಯೂ ಅಮಾನತು ಮಾಡಿ :

“ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ” ಎಂದು ತಿಳಿಸಿದರು.

“ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ” ಎಂದು ಹೇಳಿದರು.
ಮನೆ ಬಾಗಿಲಿಗೆ ಉಚಿತ ಖಾತೆ ಏಪ್ರಿಲ್ ನಿಂದ ಜಾರಿ :
“ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ”.
“ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು” ಎಂದರು.
ಕಾಂಗ್ರೆಸ್ ಸರ್ಕಾರದಿಂದ ದಾಖಲೆಯುತ ಅನುದಾನ :
“ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ. ಎಫ್ ಎಆರ್, ಜಾಹೀರಾತಿನಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು.
ನ್ಯಾಯಲಯ ಜಾಹೀರಾತು ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ ಕಾರಣ ಇದರಿಂದ ನಿರೀಕ್ಷಿತ ಆದಾಯ ಕಷ್ಟಸಾಧ್ಯ. ನ್ಯಾಯಲಯ ಈ ಹಿಂದೆ ಎರಡು- ಮೂರು ವಿಚಾರದಲ್ಲಿ ಹೀಗೆ ಮಧ್ಯಪ್ರವೇಶ ಮಾಡಿದ ಕಾರಣ ನಾವು ಜಾಗೃತರಾಗಿ ಬಜೆಟ್ ಮಂಡಿಸಬೇಕಾಗುತ್ತದೆ.
ಈ ಬಾರಿಯ ರಾಜ್ಯ ಬಜೆಟ್ ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಡಬಲ್ ಡೆಕ್ಕರ್, ಮೆಟ್ರೋ, ಮೇಲ್ಸೇತುವೆ, ಸುರಂಗ ರಸ್ತೆಗೆ ಹಣ ಕೊಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಯಾವುದೇ ಸರ್ಕಾರವೂ ಬೆಂಗಳೂರಿಗೆ ಇಷ್ಟು ಹೆಚ್ಚಿನ ಅನುದಾನ ನೀಡಿರಲಿಲ್ಲ. ಈಗ ಬೆಂಗಳೂರಿಗೆ ಅತಿಹೆಚ್ಚು ಅನುದಾನ ನೀಡಿದೆ” ಎಂದರು.
ಬೀದಿಬದಿ ವ್ಯಾಪಾರಕ್ಕೆ 3778 ತಳ್ಳುವ ಗಾಡಿಗಾಗಿ ಅರ್ಜಿ ಸಲ್ಲಿಕೆ :
“ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳಬೇಕು. ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ” ಎಂದರು.
ಬೀದಿಬದಿ ವ್ಯಾಪಾರಿಗಳ ನೋಂದಣಿ ಕಾಲಮಿತಿ ಏಪ್ರಿಲ್ ತನಕ ವಿಸ್ತರಣೆ :
“ಇದುವರೆಗೂ ಪಾಲಿಕೆಯಿಂದ 27,565 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ದಿನಾಂಕವನ್ನು ಏಪ್ರಿಲ್ ಕೊನೆಯವರೆಗೆ ವಿಸ್ತರಿಸಲಾಗುವುದು. ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳನ್ನು ಗಡವು ನಂತರ ತೆರವುಗೊಳಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು. ಆಟೋ, ಬೈಸಿಕಲ್, ಬೈಕ್ ಹಾಗೂ ಸಾಂಪ್ರದಾಯಿಕ ತಳ್ಳುವ ಗಾಡಿ ಹೀಗೆ ನಾಲ್ಕು ಮಾದರಿಯ ತಳ್ಳು ಗಾಡಿಗಳನ್ನು ಪಾಲಿಕೆ ಸಿದ್ಧಪಡಿಸಿದೆ.” ಎಂದರು.
“ಇವುಗಳನ್ನು ತಯಾರಿಸಲು ಟೆಂಡರ್ ಕರೆಯಲಾಗುತ್ತೆ. ನೋಂದಣಿ ಮಾಡಿಸಿಕೊಂಡವರ ಪೈಕಿ ಶೇಕಡವಾರು ಪ್ರಮಾಣದಲ್ಲಿ ಈ ಸೌಲಭ್ಯ ನೀಡಲಾಗುವುದು. ವ್ಯಾಪಾರ ಮುಗಿದ ನಂತರ ಗಾಡಿಗಳನ್ನು ಅಲ್ಲಿಯೇ ನಿಲ್ಲಿಸುವಂತಿಲ್ಲ. ಪ್ರತಿ ಬೀದಿ ಬದಿ ವ್ಯಾಪಾರಿಗಳ ಲೆಕ್ಕಾಚಾರ ಪಾಲಿಕೆ ಬಳಿ ಇರಬೇಕು. ಪೊಲೀಸರು, ಅಧಿಕಾರಿಗಳು, ಗೂಂಡಾಗಳು ತೊಂದರೆ ಕೊಡುತ್ತಾರೆ ಎನ್ನುವ ದೂರುಗಳನ್ನು ತಪ್ಪಿಸಲು ಈ ವ್ಯವಸ್ಥೆ ತರಲಾಗುತ್ತಿದೆ. ಒಂದು ಕುಟುಂಬಕ್ಕೆ ಒಂದೇ ಗಾಡಿ” ಎಂದು ತಿಳಿಸಿದರು.
ಶೀಘ್ರವೇ ಬಿಬಿಎಂಪಿ ಚುನಾವಣೆ :
ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಯದ ಬಗ್ಗೆ ಕೇಳಿದಾಗ, “ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. ಸಂವಿಧಾನದ 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ” ಎಂದರು.
“ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು” ಎಂದು ಮಾಹಿತಿ ನೀಡಿದರು.
ರಾಜಕೀಯ ಕಾರಣಕ್ಕೆ ಬಿಜೆಪಿಯವರು ಸಭೆಗೆ ಗೈರು :
“ಸದನದಿಂದ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಅನೇಕ ಬಿಜೆಪಿ ಶಾಸಕರು ಬಿಬಿಎಂಪಿ ಬಜೆಟ್ ಸಭೆಗೆ ಗೈರಾಗಿದ್ದಾರೆ. ಇದು ನನಗೆ ಸಂಬಂಧಪಟ್ಟ ವಿಚಾರವಲ್ಲ ಸಭಾಧ್ಯಕ್ಷರು ಹಾಗೂ ನೀವುಂಟು ಎಂದು ಹೇಳಿದ್ದೇನೆ. ಸಭೆಯಲ್ಲಿ ಹಾಜರಿರುವ ಶಾಸಕರು, ಮಂತ್ರಿಗಳ ಬಳಿ ಬಜೆಟ್ ಬಗ್ಗೆ ಸಲಹೆ ಸೂಚನೆಗಳನ್ನು ತೆಗೆದುಕೊಂಡಿದ್ದೇವೆ. ಬಿಬಿಎಂಪಿ ಆಡಳಿತಾಧಿಕಾರಿಗಳು ಸಮಯ ನೋಡಿ ವಾಸ್ತವವಾಗಿ ಎಷ್ಟು ಗಾತ್ರದ ಬಜೆಟ್ ಅನ್ನು ಮಂಡಿಸಲು ಸಾಧ್ಯವೋ ಅದನ್ನು ಮಂಡಿಸುತ್ತಾರೆ” ಎಂದು ತಿಳಿಸಿದರು.
“ಅಶೋಕ್, ಅಶ್ವಥ ನಾರಾಯಣ ಅವರ ಬಳಿ ಬಜೆಟ್ ಸಭೆ ದಿನಾಂಕದ ಬಗ್ಗೆ ಚರ್ಚೆ ಮಾಡಿಯೇ ನಿಗದಿ ಮಾಡಿದ್ದೆ. ಅವರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಂಡು ಬಜೆಟ್ ನಲ್ಲಿ ಬದಲಾವಣೆ ಮಾಡಲು ನಾವು ಬದ್ದರಾಗಿದ್ದೇವೆ. ಅನಧಿಕೃತವಾಗಿ ವಿರೋಧ ಪಕ್ಷಗಳ ನಾಯಕರು ಸಹ ನಮ್ಮ ಅನೇಕ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ. ರಾಜಕೀಯ ಕಾರಣಕ್ಕೆ ಸಭೆಗೆ ಗೈರಾಗಿದ್ದಾರೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಬಿಎಂಪಿ ಬಜೆಟ್ ಕುರಿತ ಬೆಂಗಳೂರು ನಗರದ ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿರುವ ಎಸ್.ಟಿ. ಸೋಮಶೇಖರ್ ಹೊರತುಪಡಿಸಿ ಉಳಿದ ಯಾವ ಶಾಸಕರು ಸಭೆಗೆ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್, ಎನ್.ಎ ಹ್ಯಾರಿಸ್, ಎ.ಸಿ ಶ್ರೀನಿವಾಸ್, ಎಂಎಲ್ಸಿ ನಾಗರಾಜ್ ಯಾದವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ ಡಿಎ ಕಮಿಷನರ್ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.