ಬೆಂಗಳೂರು, ಮೇ.25 www.bengaluruwire.com : ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, ಒಟ್ಟು 35 ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿಯೇ 32 ಪ್ರಕರಣಗಳು ವರದಿಯಾಗಿವೆ. ಆದರೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದರು.
ಮುನ್ನೆಚ್ಚರಿಕೆ ಕ್ರಮಗಳಿಗೆ ಒತ್ತು :

ಕೋವಿಡ್ ತಾಂತ್ರಿಕ ಸಮಿತಿಯು ಶುಕ್ರವಾರ ಸಭೆ ನಡೆಸಿ, ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತು ಚರ್ಚೆ ನಡೆಸಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದೆ. “ದೇಶದಲ್ಲಿ ಒಟ್ಟು 257 ಪ್ರಕರಣಗಳು ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಹೊರತು, ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ” ಎಂದು ಸಚಿವರು ವಿವರಿಸಿದರು.

ಕಡ್ಡಾಯ ಕೋವಿಡ್ ಟೆಸ್ಟ್ ಸೂಚನೆ :

ಉಸಿರಾಟದ ತೊಂದರೆ ಇರುವವರಿಗೆ (SARI ಪ್ರಕರಣಗಳು) ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಆಸ್ಪತ್ರೆಗಳಲ್ಲಿ ದಾಖಲಾದಾಗ, ಅವರ ಸ್ಯಾಂಪಲ್ಸ್ ಸಂಗ್ರಹಿಸಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ.
ಟೆಸ್ಟಿಂಗ್ ಕಿಟ್ಗಳ ಸಿದ್ಧತೆ :
ಒಂದು ತಿಂಗಳಿಗೆ ಬೇಕಾಗುವ 5 ಸಾವಿರ ಆರ್ ಟಿಪಿಸಿಆರ್ (RTPCR) ಹಾಗೂ 5 ಸಾವಿರ ವಿಡಿಆರ್ ಎಲ್ (VDRL) ಟೆಸ್ಟಿಂಗ್ ಕಿಟ್ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಅಗತ್ಯ ಟೆಸ್ಟಿಂಗ್ ಕಿಟ್ಗಳನ್ನು ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮಾಸ್ಕ್ ಬಳಕೆ ಮತ್ತು ಸ್ವಚ್ಛತೆ :
ಬಾಣಂತಿಯರು ಮತ್ತು ಗರ್ಭಿಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದು ಸಚಿವರು ಸಲಹೆ ನೀಡಿದ್ದಾರೆ. ಆದರೆ, ತಕ್ಷಣಕ್ಕೆ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಿಲ್ಲ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ, ಎಲ್ಲರೂ ಸಹಜ ಜೀವನ ನಡೆಸಬಹುದು ಎಂದು ಅವರು ಭರವಸೆ ನೀಡಿದರು.
ಮಾಧ್ಯಮಗಳಿಗೆ ಮನವಿ :
ಮಾಧ್ಯಮಗಳು ಆತಂಕ ಸೃಷ್ಟಿಸಬಾರದು, ಬದಲಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದರು. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಅವರು ಪುನರುಚ್ಚರಿಸಿದರು.