ಬೆಂಗಳೂರು, ಜೂ.17 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬರೋಬ್ಬರಿ 8 ವರ್ಷಗಳ ಬಳಿಕ ಮಹತ್ವದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಇಂದು 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನಿಯೋಜನಾ ಆದೇಶ ವಿತರಿಸಲಾಗಿದೆ.
ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಕೆಎಸ್ ಆರ್ ಟಿಸಿ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ (ವಾಸು) ಮತ್ತು ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ಸಾಂಕೇತಿಕವಾಗಿ 51 ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, “ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ಮಹಿಳಾ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಅಪಘಾತರಹಿತ ಸೇವೆ ನೀಡಬೇಕು” ಎಂದು ಕರೆ ನೀಡಿದರು. ಕೊರೋನಾ ನಂತರ ನಿಗಮವು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದು, ನೌಕರರಿಗೆ ಉಚಿತ ವೈದ್ಯಕೀಯ ಸೇವೆ, ₹1 ಕೋಟಿ ಅಪಘಾತ ವಿಮಾ ಯೋಜನೆ ಮತ್ತು ₹10 ಲಕ್ಷ ಕುಟುಂಬ ಕಲ್ಯಾಣ ಯೋಜನೆಯಂತಹ ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು.
ಕೆಎಸ್ ಆರ್ ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಸಚಿವರ ಪ್ರಯತ್ನದಿಂದ ಇದಕ್ಕೆ ಮತ್ತೆ ಚಾಲನೆ ದೊರೆತಿದೆ. ಆಯ್ಕೆಯಾದವರಿಗೆ ಅವರ ಆಯ್ಕೆಯಂತೆ ಘಟಕ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. 2023ರ ಅಕ್ಟೋಬರ್ 13ರಂದು ಸರ್ಕಾರದಿಂದ ಅನುಮತಿ ದೊರೆತ ಬಳಿಕ, 25,494 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹುಮ್ನಾಬಾದ್ ಮತ್ತು ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಯಿತು. ಮೆರಿಟ್ ಆಧಾರದ ಮೇಲೆ ಆಯ್ಕೆಯಾದ 2000 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜೂನ್ 12ರಂದು ಪ್ರಕಟಿಸಲಾಗಿದೆ.

ಜೂನ್ 16 ರಿಂದ 19ರವರೆಗೆ ಗಣಕೀಕೃತ ಕೌನ್ಸಿಲಿಂಗ್ ನಡೆಯುತ್ತಿದ್ದು, ಆಯ್ಕೆಯಾದವರು ಜುಲೈ 5, 2025ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ನಿಗಮದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದರಲ್ಲಿ 300 ತಾಂತ್ರಿಕ ಸಹಾಯಕರು ಮತ್ತು ಅನುಕಂಪದ ಆಧಾರದ ಮೇಲೆ 209 ಮೃತರ ಅವಲಂಬಿತರಿಗೆ ಉದ್ಯೋಗ ನೀಡಲಾಗಿದೆ.
ಶಕ್ತಿ ಯೋಜನೆ ಯಶಸ್ಸು:
ಕರ್ನಾಟಕ ಸರ್ಕಾರದ ಶಕ್ತಿ ಗ್ಯಾರಂಟಿ ಯೋಜನೆ ಎರಡು ವರ್ಷ ಪೂರೈಸಿದ್ದು, ಜೂನ್ 16, 2025ರವರೆಗೆ 478 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ಟಿಕೆಟ್ ಮೌಲ್ಯ ₹12,092 ಕೋಟಿ ಎಂದು ತಿಳಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿಗಮದ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ., ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಇಬ್ರಾಹಿಂ ಮೈಗೂರ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.