ಬೆಂಗಳೂರು, ಜೂ.18 www.bengaluruwire.com : ತಮಿಳು ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಲನಚಿತ್ರದ ಬಿಡುಗಡೆ ಮತ್ತು ಪ್ರದರ್ಶನವನ್ನು ವಿರೋಧಿಸಿ ಕರ್ನಾಟಕದ ವಿವಿಧ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸರು ಅವರ ಮನೆಗೆ ನೋಟಿಸ್ ಅಂಟಿಸಿ, ಬಿಗಿ ಭದ್ರತೆ ಒದಗಿಸಿದ್ದಾರೆ.
ಇಂದು (ಜೂನ್ 18) ಬೆಂಗಳೂರಿನ ಚಿತ್ರಮಂದಿರಗಳು ಮತ್ತು ಮಾಲ್ಗಳಲ್ಲಿ ‘ಥಗ್ ಲೈಫ್’ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಈ ಪ್ರತಿಭಟನೆಗೆ ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಬೆಂಬಲ ನೀಡಿರುವುದಾಗಿ ತಿಳಿದುಬಂದಿದೆ. ಇದರ ಬೆನ್ನಲ್ಲೇ, ಆರ್. ಟಿ. ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಪ್ರವೀಣ್ ಶೆಟ್ಟಿ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.
ಹೈಕೋರ್ಟ್ ಆದೇಶದ ಉಲ್ಲಂಘನೆ ಎಚ್ಚರಿಕೆ:
ನೋಟಿಸ್ನಲ್ಲಿ, ರಾಜ್ಯ ಉಚ್ಚನ್ಯಾಯಾಲಯದ ಆದೇಶದ ಅನ್ವಯ ಹಾಗೂ ಮಾರ್ಗಸೂಚಿಯಂತೆ “ಫ್ರೀಡಂ ಪಾರ್ಕ್” ನಲ್ಲಿ ಮಾತ್ರ ಪ್ರತಿಭಟನೆ, ಧರಣಿ, ಮೆರವಣಿಗೆಗಳಿಗೆ ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ, ರ್ಯಾಲಿ, ಭಿತ್ತಿಪತ್ರಗಳ ಪ್ರದರ್ಶನ, ವ್ಯಕ್ತಿಗಳ ಅಣುಕು ಪ್ರದರ್ಶನ ಇತ್ಯಾದಿಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪೊಲೀಸ್ ಸರ್ಪಗಾವಲು:

ಆರ್. ಟಿ. ನಗರ ಪೊಲೀಸರು ನಿನ್ನೆ ರಾತ್ರಿಯಿಂದಲೇ ಪ್ರವೀಣ್ ಶೆಟ್ಟಿ ಅವರ ಮನೆ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಕಾವಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರವೇ ಸಂಘಟನೆ, ಪೊಲೀಸರು ‘ಥಗ್ ಲೈಫ್’ ಸಿನಿಮಾ ವಿರುದ್ಧದ ತಮ್ಮ ಹೋರಾಟವನ್ನು ಹತ್ತಿಕ್ಕಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದೆ.
ಒಟ್ಟಾರೆ, ‘ಥಗ್ ಲೈಫ್’ ಸಿನಿಮಾ ಬಿಡುಗಡೆಯು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಮತ್ತು ಪೊಲೀಸರ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಪ್ರತಿಭಟನೆಗಳ ಭವಿಷ್ಯ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.