ಬೆಂಗಳೂರು, ಜೂ.19 www.bengaluruwire.com : ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಮತ್ತು ಅವರಿಗೆ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆಯು ಸರ್ಕಾರದ ಮೇಲೆ ಒತ್ತಡ ಹೇರಿದೆ.
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಈ ಬಗ್ಗೆ ತಕ್ಷಣಕ್ಕೆ ಸಾಧ್ಯವಾಗದಿದ್ದಲ್ಲಿ, ಸರ್ಕಾರಿ ನೌಕರರಿಗೆ ವೇತನ ಆಯೋಗ ನಿಗದಿಪಡಿಸಿರುವ ಸಂಬಳವನ್ನು ಸಾರಿಗೆ ನೌಕರರಿಗೂ ನೀಡಲು ಕ್ರಮ ಕೈಗೊಳ್ಳಬೇಕು. ಹಲವಾರು ವಿಷಯಗಳಲ್ಲಿ ಸರ್ಕಾರವು ನೌಕರರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ.
2020 ಮತ್ತು 2021 ರಲ್ಲಿ ಸಾರಿಗೆ ನೌಕರರು ನಡೆಸಿದ ಮುಷ್ಕರಗಳನ್ನು ಸ್ಮರಿಸಿದ ಅವರು, ಅಂದಿನ ಸರ್ಕಾರವು ನೌಕರರ ಬೇಡಿಕೆಗಳನ್ನು ಈಡೇರಿಸುವ ಬದಲು ಸಾವಿರಾರು ನೌಕರರನ್ನು ವಜಾ, ಅಮಾನತು ಮತ್ತು ವರ್ಗಾವಣೆ ಮಾಡಿದೆ. ಅನೇಕ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ಸಮಾನವಾದ ವೇತನ ಆಯೋಗವನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆ ಭರವಸೆಯಂತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ಎರಡು ವರ್ಷ ಕಳೆದರೂ ಈಡೇರಿಸಿಲ್ಲ ಎಂದು ಸೇನೆ ಆಕ್ಷೇಪ ವ್ಯಕ್ತಪಡಿಸಿದೆ.

ಸೇನೆಯ ಪ್ರಮುಖ ಬೇಡಿಕೆಗಳು ಸೇರಿವೆ:
* 2020ರ ಜನವರಿ 1 ರಿಂದ ಜಾರಿಯಾಗಿರುವ ಶೇ.15ರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣವನ್ನು ಒಂದೇ ಕಂತಿನಲ್ಲಿ ಪಾವತಿಸುವುದು.
* ಖಾಸಗಿ ಎಲೆಕ್ಟ್ರಿಕ್ ಬಸ್ಸುಗಳನ್ನು ನಿಲ್ಲಿಸುವುದು ಮತ್ತು ಸಂಸ್ಥೆಯಿಂದಲೇ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸುವುದು.
* 2021 ರ ಮುಷ್ಕರದಲ್ಲಿ ವಜಾ, ಅಮಾನತು ಮತ್ತು ವರ್ಗಾವಣೆಗಳನ್ನು ರದ್ದುಗೊಳಿಸುವುದು ಹಾಗೂ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.
* ಮುಷ್ಕರದಲ್ಲಿ ಮೃತರಾದ ನೌಕರರ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವುದು.
ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟಕ್ಕೆ ಸಿದ್ಧ ಎಂದು ಸೇನೆಯು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.






















