ಬೆಂಗಳೂರು, ಜೂ.25 www.bengaluruwire.com : ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ವಿವಿಧ ಬೇಡಿಕೆಗಳಿಗೆ ನಗರಾಭಿವೃದ್ಧಿ ಇಲಾಖೆ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ, ಜುಲೈ 7 ರಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ನೌಕರರು ತೀರ್ಮಾನಿಸಿದ್ದಾರೆ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯಾದ್ಯಂತ ನೌಕರರು ಸಾಂಕೇತಿಕವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ಪಾಲಿಕೆ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ನೌಕರರ ಸಂಘಗಳ ಪರಿಷತ್ ಎಚ್ಚರಿಕೆ ನೀಡಿದೆ.
ಪಾಲಿಕೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ, ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ವೇತನ ತಾರತಮ್ಯ ನಿವಾರಣೆ, ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ, ಆರೋಗ್ಯ ಸೌಲಭ್ಯಗಳು ಮತ್ತು ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸುವುದು ಸೇರಿವೆ. ಈ ಬೇಡಿಕೆಗಳ ಕುರಿತು ಕಳೆದ ಹಲವು ತಿಂಗಳಿಂದ ಸರ್ಕಾರದೊಂದಿಗೆ ಚರ್ಚೆ ನಡೆಸಿದರೂ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಎ.ಅಮೃತರಾಜ, “ನಮ್ಮ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ. ನಾವು ನಿರಂತರವಾಗಿ ಮನವಿ ಸಲ್ಲಿಸಿದ್ದೇವೆ, ಪ್ರತಿಭಟನೆಗಳನ್ನೂ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಬೇರೆ ದಾರಿಯಿಲ್ಲದೆ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದೇವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ನಮಗೆ ಬೇಸರವಿದೆ. ಆದರೆ ಸರ್ಕಾರ ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಈ ಪ್ರತಿಭಟನೆಯು ರಾಜ್ಯದ ನಗರ ಪಾಲಿಕೆಗಳ ದೈನಂದಿನ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕಸ ವಿಲೇವಾರಿ, ನೀರು ಸರಬರಾಜು, ಬೀದಿ ದೀಪ ನಿರ್ವಹಣೆ, ತೆರಿಗೆ ಸಂಗ್ರಹ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಳ್ಳುವ ಸಂಭವವಿದೆ.






















