ಬೆಂಗಳೂರು, ಜು.11 www.bengaluruwire.com : ಬೆಂಗಳೂರು-ಮೈಸೂರು ರಸ್ತೆಯಲ್ಲಿನ ಬ್ಯಾಟರಾಯನಪುರದಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವು ಸದಸ್ಯರು ಹುಂಡಿ ಹಣ ಎಣಿಸುವಾಗ ಹಣವನ್ನು ಎಗರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದುರುಪಯೋಗ :
ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ದುರುಪಯೋಗಪಡಿಸಿಕೊಂಡಿದ್ದು, ಈ ಕುರಿತು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿತ್ತು.
ಇತ್ತೀಚೆಗಷ್ಟೇ ಮುಜರಾಯಿ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿ, ದೇವಾಲಯದ ಆಡಳಿತದಲ್ಲಿನ ಲೋಪಗಳನ್ನು ಎತ್ತಿ ತೋರಿಸಿತ್ತು. ಧಾರ್ಮಿಕ ದತ್ತಿ ಆಯುಕ್ತರು 2024ರ ಅಕ್ಟೋಬರ್ನಲ್ಲಿಯೇ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟ ಅಭಿಪ್ರಾಯದ ವರದಿ ನೀಡಲಾಗಿತ್ತು.

ದಾಖಲೆ ಇಲ್ಲದ ವಹಿವಾಟು, ಭಕ್ತರ ಭಾವನೆಗೆ ಧಕ್ಕೆ :
“ಆದಾಯ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ನಿರ್ವಹಿಸಿರಲಿಲ್ಲ. ಮುಜರಾಯಿ ಇಲಾಖೆ ನೋಟಿಸ್ ನೀಡಿದ ಬಳಿಕವಷ್ಟೇ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ದೇವಾಲಯದ ಸಿಬ್ಬಂದಿ ಹುಂಡಿ ಹಣ ಕದ್ದಿರುವ ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿ ಭಕ್ತರ ಧಾರ್ಮಿಕ ಭಾವನೆಗೆ ಕುಂದುಂಟುಮಾಡಿದೆ” ಎಂದು ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬ್ಯಾಟರಾಯನಪುರದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು, ಹಣ ದುರುಪಯೋಗಪಡಿಸಿಕೊಂಡಿರುವುದು, ಮತ್ತು ಟ್ರಸ್ಟ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ’ದ ಅಡಿಯಲ್ಲಿ ‘ಘೋಷಿತ ಸಂಸ್ಥೆ’ ಎಂದು ಘೋಷಿಸಿ ಜು.8 ರಂದು ಆದೇಶ ಹೊರಡಿಸಲಾಗಿದೆ.
ಕಾಯ್ದೆಯ ಉದ್ದೇಶ ಸ್ಪಷ್ಟಪಡಿಸಿದ ಇಲಾಖೆ :
ದೇವಸ್ಥಾನದ ಆಡಳಿತದಲ್ಲಿ ಲೋಪಗಳು ಕಂಡುಬಂದಲ್ಲಿ ಅಥವಾ ಹಣದ ದುರ್ಬಳಕೆಯ ಆರೋಪಗಳು ದೃಢಪಟ್ಟರೆ, ಅಂತಹ ದೇವಸ್ಥಾನವನ್ನು ಘೋಷಿತ ಸಂಸ್ಥೆಯನ್ನಾಗಿ ಘೋಷಿಸಿ, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಈ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಇಲಾಖೆ ತಿಳಿಸಿದೆ.
ಈ ಕಾಯ್ದೆಯು ದೇವಾಲಯದ ಆಸ್ತಿಯ ರಕ್ಷಣೆ, ಹಣದ ಸಮರ್ಪಕ ನಿರ್ವಹಣೆ, ಮತ್ತು ಭಕ್ತರ ಹಿತಾಸಕ್ತಿಯನ್ನು ಕಾಪಾಡುವ ಗುರಿಯನ್ನು ಹೊಂದಿದೆ ಎಂದು ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಕ್ರಮವು ರಾಜ್ಯದ ಇತರ ದೇವಾಲಯಗಳ ಆಡಳಿತ ಮಂಡಳಿಗಳಿಗೂ ಒಂದು ಎಚ್ಚರಿಕೆಯ ಗಂಟೆಯಾಗಿದ್ದು, ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತದ ಅವಶ್ಯಕತೆಯನ್ನು ಒತ್ತಿಹೇಳುತ್ತದೆ.
ಮುಜರಾಯಿ ಇಲಾಖೆ ಆಯುಕ್ತರು ಏನಂತಾರೆ?:


“ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಆರ್ಥಿ ಅವ್ಯವಸ್ಥೆ, ಆಡಳಿತ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ಸಾಕಷ್ಟು ದೂರುಗಳು, ಸಿಸಿಟಿವಿ ದಾಖಲೆಗಳು, ಮಾಧ್ಯಮಗಳಲ್ಲೂ ವರದಿಯಾದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ಸೂಕ್ತ ತನಿಖೆ ನಡೆಸಿ, ಸಾರ್ವಜನಿಕರು, ಭಕ್ತರ ಹಿತದೃಷ್ಟಿಯಿಂದ ದೇವಸ್ಥಾನದ ಸುಗಮ ಕಾರ್ಯನಿರ್ವಹಣೆಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ”
- ಡಾ.ಎಂ.ವಿ.ವೆಂಕಟೇಶ್, ಮುಜರಾಯಿ ಇಲಾಖೆ ಆಯುಕ್ತರು





















