ಬೆಂಗಳೂರು, ಜು.14 www.bengaluruwire.com : ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತಿ ಪಡೆದಿದ್ದ ಬಿ. ಸರೋಜಾದೇವಿ ಅವರು ಇಂದು (ಜುಲೈ 14) ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಸರೋಜಾದೇವಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಸಮಸ್ತ ಕಲಾಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.
1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ ಬಿ. ಸರೋಜಾದೇವಿ, ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು. ಏಳು ದಶಕಗಳ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಸುಮಾರು 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು.
ಬಹುಭಾಷಾ ನಟಿ, ಚತುರ್ಭಾಷಾ ತಾರೆ
ಸರೋಜಾದೇವಿ ಅವರು ಕನ್ನಡದಲ್ಲಿ ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀ ಸರಸ್ವತಿ, ಕಥಾಸಂಗಮ ಮುಂತಾದ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ. ಪರಭಾಷೆಗಳಲ್ಲೂ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು.

ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲಯಾಳಂನ ಮುತ್ತುಮಿಂತ್ರೋ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮಿ ಕಪೂರ್, ಸುನಿಲ್ದತ್ ಅವರಂತಹ ಖ್ಯಾತ ನಟರೊಂದಿಗೆ ನಟಿಸುವ ಮೂಲಕ ‘ಚತುರ್ಭಾಷಾ ತಾರೆ’ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡದ ನಟಿ ಎನಿಸಿದ್ದಾರೆ. 2019ರಲ್ಲಿ ತೆರೆಕಂಡ ಪುನೀತ್ ರಾಜ್ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಅವರ ಕೊನೆಯ ಚಿತ್ರವಾಗಿತ್ತು.
ಗೌರವಗಳು ಮತ್ತು ವೈಯಕ್ತಿಕ ಜೀವನ :
ಸಿನಿಮಾ ಕ್ಷೇತ್ರದಲ್ಲಿನ ಅವರ ಅಮೋಘ ಸಾಧನೆಗಾಗಿ 2009ರಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದಲ್ಲದೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಫಿಲ್ಮ್ಫೇರ್ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಅವರನ್ನು ಅರಸಿ ಬಂದಿದ್ದವು.
ಸರೋಜಾದೇವಿ ಅವರು ಎಂಜಿನಿಯರ್ ಆಗಿದ್ದ ಶ್ರೀಹರ್ಷ ಅವರನ್ನು 1967ರ ಮಾರ್ಚ್ 1ರಂದು ವಿವಾಹವಾಗಿದ್ದರು. ಇವರಿಗೆ ಇಂದಿರಾ ಹಾಗೂ ಗೌತಮ್ ರಾಮಚಂದ್ರನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಆದರೆ ದುರದೃಷ್ಟವಶಾತ್, 1986ರಲ್ಲಿ ಪತಿ ಶ್ರೀಹರ್ಷ ಅವರು ಹೃದಯಾಘಾತದಿಂದ ನಿಧನರಾದರು.
ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ :
ಮೂಲಗಳ ಪ್ರಕಾರ, ಬಿ. ಸರೋಜಾದೇವಿ ಅವರ ಅಂತ್ಯಕ್ರಿಯೆಯು ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ, ಪತಿ ಶ್ರೀಹರ್ಷ ಅವರ ಸಮಾಧಿ ಪಕ್ಕದಲ್ಲೇ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ. ಸರೋಜಾದೇವಿ ಅವರ ನಿಧನವು ಕನ್ನಡ ಚಿತ್ರರಂಗದ ಪಾಲಿಗೆ ತುಂಬಲಾರದ ನಷ್ಟವಾಗಿದ್ದು, ಅವರ ನೆನಪು ಸದಾ ಹಸಿರಾಗಿರಲಿದೆ.






















