ಬೆಂಗಳೂರು, ಜು.15 www.bengaluruwire.com : ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ‘ಮಾಧ್ಯಮ ಸಂಜೀವಿನಿ’ ಎಂಬ ಉಚಿತ ಆರೋಗ್ಯ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಪ್ರಸ್ತುತ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಮಾತ್ರ ಸೀಮಿತವಾಗಿರುವ ಈ ಯೋಜನೆಯ ಕಠಿಣ ಷರತ್ತುಗಳನ್ನು ಸರಳೀಕರಣಗೊಳಿಸಬೇಕೆಂದು ಸಂಘ ಒತ್ತಾಯಿಸಿದೆ.
ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಪತ್ರಕರ್ತರಿಗೂ ಯೋಜನೆ ವಿಸ್ತರಣೆಯಾಗಬೇಕು ಎಂದು ಕೆಯುಡಬ್ಲ್ಯುಜೆ ಆಗ್ರಹಿಸಿದೆ. ಇದರಿಂದಾಗಿ ಯೋಜನೆಯಿಂದ ವಂಚಿತರಾಗಬಹುದಾದ ಬಹಳಷ್ಟು ಪತ್ರಕರ್ತರಿಗೆ ನ್ಯಾಯ ಸಿಗಲಿದೆ ಎಂಬುದು ಸಂಘದ ನಿಲುವು.
ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯುಜೆ ಮಾಡಿದ ಉಚಿತ ಆರೋಗ್ಯ ಯೋಜನೆಯ ಹಕ್ಕೊತ್ತಾಯಕ್ಕೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದ್ದರು. ಅಲ್ಲದೆ, ಬಜೆಟ್ನಲ್ಲಿಯೂ ಇದನ್ನು ಪ್ರಕಟಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ತಗಡೂರು ಸ್ಮರಿಸಿದ್ದಾರೆ.

ಈ ಯೋಜನೆಯ ಅನುಷ್ಠಾನದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪಾತ್ರವನ್ನೂ ಶಿವಾನಂದ ತಗಡೂರು ಶ್ಲಾಘಿಸಿದ್ದಾರೆ.






















