ಬೆಂಗಳೂರು, ಆ.18 www.bengaluruwire.com : ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ಅವಘಡಗಳು ಮತ್ತು ಕಟ್ಟಡ ಕುಸಿತದ ಪ್ರಕರಣಗಳಿಗೆ ಕಡಿವಾಣ ಹಾಕಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.
ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಮತ್ತು ದುರ್ಬಲಗೊಂಡಿರುವ ಕಟ್ಟಡಗಳನ್ನು ಗುರುತಿಸಿ ಕೂಡಲೇ ನೋಟಿಸ್ ಜಾರಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧರ್ಮರಾಯಸ್ವಾಮಿ ದೇವಸ್ಥಾನದ ಸಮೀಪದ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಹಲವು ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿಲ್ಲ. ಎರಡು-ಮೂರು ಮಹಡಿಗಳಿಗೆ ಅನುಮತಿ ಪಡೆದು ಎಂಟು-ಹತ್ತು ಮಹಡಿಗಳನ್ನು ನಿರ್ಮಿಸಲಾಗಿದೆ. ಇಂತಹ ಕಟ್ಟಡಗಳನ್ನು ಕೆಡವುವುದು ನಂತರದ ವಿಷಯ. ಆದರೆ, ಮೊದಲು ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದು ಒಂದೇ ದಿನದಲ್ಲಿ ಆಗುವ ಕೆಲಸವಲ್ಲ, ವರ್ಷಗಟ್ಟಲೆ ಸಮಯ ತೆಗೆದುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಕ್ರಿಮಿನಲ್ ಮೊಕದ್ದಮೆ, ಪರಿಹಾರ ಘೋಷಣೆ :

ನಗರ್ತಪೇಟೆ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಈ ಘಟನೆಗೆ ಕಾರಣರಾದ ನಿರ್ಲಕ್ಷ್ಯ ವಹಿಸಿದ ಕಟ್ಟಡ ಮಾಲೀಕರ ವಿರುದ್ಧ ಈಗಾಗಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು ಮಾಲೀಕರನ್ನು ಬಂಧಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
ಅಕ್ರಮ ಕಟ್ಟಡಗಳಿಗೆ ಕಡಿವಾಣ :
ನಗರದಲ್ಲಿ ಸುಮಾರು ಶೇ.70ರಷ್ಟು ಕಟ್ಟಡಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ ಎಂದು ಡಿಸಿಎಂ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ವಾಸಯೋಗ್ಯ ಪ್ರಮಾಣಪತ್ರ (Occupancy Certificate) ಇಲ್ಲದ ಕಟ್ಟಡಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇದರಿಂದಾಗಿ ನಗರದ 4 ಲಕ್ಷ ಕಟ್ಟಡಗಳ ಸಂಪರ್ಕವನ್ನು ನಿಲ್ಲಿಸಲಾಗಿದೆ. 30×40 ಅಳತೆಯ ಎರಡು ಮಹಡಿಗಳ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.
ನಗರ್ತಪೇಟೆ, ಚಿಕ್ಕಪೇಟೆಗಳಲ್ಲಿ ವ್ಯಾಪಾರ ಕೇಂದ್ರಗಳು :
ಚಿಕ್ಕಪೇಟೆ ಮತ್ತು ನಗರ್ತಪೇಟೆಯಂತಹ ಪ್ರದೇಶಗಳು ವಾಸಸ್ಥಳಗಳಾಗಿದ್ದರೂ, ಈಗ ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ. ಬೆಂಕಿ ಅವಘಡಗಳು ಹೆಚ್ಚಲು ಇದೂ ಒಂದು ಕಾರಣವಾಗಿದೆ ಎಂದು ಡಿಸಿಎಂ ತಿಳಿಸಿದರು. ಅಗ್ನಿಶಾಮಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾದರೆ ಇಂತಹ ಅನೇಕ ಕಟ್ಟಡಗಳನ್ನು ಕೆಡವಬೇಕಾಗುತ್ತದೆ ಎಂದರು. ಅಗ್ನಿ ದುರಂತದಲ್ಲಿ ಮೃತಪಟ್ಟವರು ರಾಜಸ್ಥಾನ ಮೂಲದವರು, ಬದುಕು ಕಟ್ಟಿಕೊಳ್ಳಲು ಇಲ್ಲಿಗೆ ಬಂದಿದ್ದರು. ಇಂತಹ ದುರಂತಗಳು ಸಂಭವಿಸಲು ಕೇವಲ ಬಾಡಿಗೆಗಾಗಿ ಅವೈಜ್ಞಾನಿಕ ಕಟ್ಟಡಗಳನ್ನು ನಿರ್ಮಿಸುವುದೇ ಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.























