ಬೆಂಗಳೂರು, ಆ.22 www.bengaluruwire.com : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದಾಗಿ ಮೃತಪಟ್ಟ ಅಥವಾ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರವು ₹5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಗುರುವಾರ ವಿಧಾನ ಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಯ ಕಾಟದಿಂದ ಆತ್ಮಹತ್ಯೆ ಅಥವಾ ದುರ್ಮರಣಕ್ಕೀಡಾದ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ಈ ನಿರ್ಧಾರವು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.
ಕಾನೂನು ಬಲದಿಂದ ಕಿರುಕುಳಕ್ಕೆ ಕಡಿವಾಣ :

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ತೆಗೆದುಕೊಂಡ ಕಾನೂನಾತ್ಮಕ ಕ್ರಮಗಳ ಬಗ್ಗೆಯೂ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. “ಫೆಬ್ರವರಿ ತಿಂಗಳಿನಲ್ಲಿ ನಾವು ಹೊಸ ಕಾನೂನು ಜಾರಿಗೆ ತಂದಿದ್ದೇವೆ. ಈ ಹೊಸ ಕಾಯ್ದೆಯಿಂದಾಗಿ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಕಾನೂನಿನ ಬಲದಿಂದ ಇಂತಹ ಕೃತ್ಯಗಳು ನಿಯಂತ್ರಣಕ್ಕೆ ಬಂದಿದ್ದು, ಆತ್ಮಹತ್ಯೆಗಳ ಪ್ರಮಾಣವೂ ತಗ್ಗಿದೆ” ಎಂದು ಸಿದ್ದರಾಮಯ್ಯ ಹೇಳಿದರು.
ಸಣ್ಣ ಮೊತ್ತದ ಸಾಲ ಪಡೆದವರನ್ನು ಮರುಪಾವತಿಗೆ ಬಲವಂತಪಡಿಸುವ, ಕಿರುಕುಳ ನೀಡುವ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಲೇ ಇದ್ದವು. ಇಂತಹ ಘಟನೆಗಳು ಮಾನವೀಯ ದೃಷ್ಟಿಯಿಂದ ಅತ್ಯಂತ ನೋವಿನ ಸಂಗತಿಯಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಈ ನಿರ್ಧಾರವು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ದುರ್ಬಲ ವರ್ಗದವರಿಗೆ ದೊಡ್ಡ ಭರವಸೆ ನೀಡಿದೆ.






















