ಬೆಂಗಳೂರು, ಸೆ.09 www.bengaluruwire.com : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಅನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯದಾದ್ಯಂತ ನಡೆಸಲು ಸಿದ್ಧತೆ ನಡೆಸಿದೆ. ಈ ಸಮೀಕ್ಷೆಯ ಪೂರ್ವಸಿದ್ಧತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪದವಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಿದೆ.
ಈ ವಿದ್ಯಾರ್ಥಿಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿದ್ದಾರೆ.
ಈ ಸಮೀಕ್ಷೆಯ ಮಹತ್ವ :
“ನಮ್ಮ ಸಮೀಕ್ಷೆ – ನಮ್ಮ ಜವಾಬ್ದಾರಿ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಸಮೀಕ್ಷೆಯು ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅರಿಯಲು ಸಹಾಯ ಮಾಡುತ್ತದೆ. ಈ ಮಾಹಿತಿಯು ರಾಜ್ಯದ ಭವಿಷ್ಯದ ನೀತಿಗಳನ್ನು ರೂಪಿಸಲು ಆಧಾರವಾಗಲಿದೆ.

ಪೂರ್ವಸಿದ್ಧತೆಗಾಗಿ ಸೂಚನೆಗಳು :
ಸಮೀಕ್ಷೆಯಲ್ಲಿ ಭಾಗವಹಿಸುವವರು ಕೆಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ, ಮತ್ತು ವಿಕಲಚೇತನರಾಗಿದ್ದರೆ ಯುಐಡಿ (UID) ಕಾರ್ಡ್ ಅಥವಾ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಸಮೀಕ್ಷೆಯು ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯನ್ನು ಆಧರಿಸಿರುತ್ತದೆ ಮತ್ತು ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪ್ರಶ್ನೆಗಳು ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಆದಾಯ, ಕೌಶಲ್ಯ ತರಬೇತಿ ಅಗತ್ಯತೆ, ಕುಟುಂಬದ ಚರ ಮತ್ತು ಸ್ಥಿರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ, ಮತ್ತು ಕುಲಕಸುಬು ಮುಂತಾದ ಮಾಹಿತಿಗಳನ್ನು ಒಳಗೊಂಡಿರುತ್ತವೆ.
ಮೊಬೈಲ್ ಮತ್ತು ಆಧಾರ್ ಜೋಡಣೆ ಕಡ್ಡಾಯ :
ಸಮೀಕ್ಷೆಯಲ್ಲಿ ಇ-ಕೆವೈಸಿ (e-KYC) ಪ್ರಕ್ರಿಯೆಗಾಗಿ, ಪ್ರತಿ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆ ಅವರ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರುವುದು ಕಡ್ಡಾಯ. ಒಂದು ವೇಳೆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ, ಕುಟುಂಬದ ಪರವಾಗಿ ಉತ್ತರ ನೀಡುವ ಸದಸ್ಯರು ಫೋನ್ ಮೂಲಕ ಒಟಿಪಿ (OTP) ಪಡೆದು ಮಾಹಿತಿ ನೀಡಬಹುದು.
6 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಆಧಾರ್ ಕಡ್ಡಾಯವಾಗಿದ್ದು, ಆಧಾರ್ ಇಲ್ಲದಿದ್ದರೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆಯೊಂದಿಗೆ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಮೊಬೈಲ್ ಸಂಖ್ಯೆ ಆಧಾರ್ಗೆ ಲಿಂಕ್ ಆಗಿಲ್ಲದಿದ್ದರೆ, ತಕ್ಷಣವೇ ಲಿಂಕ್ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ನೋಂದಣಿ ಅವಕಾಶ :
ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು 63617-89579 ಈ ಸಂಖ್ಯೆಗೆ ವಾಟ್ಸಪ್ ಮೂಲಕ “Hi” ಎಂದು ಸಂದೇಶ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು ಅಥವಾ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
ಸಮೀಕ್ಷೆಗೆ 1.49 ಲಕ್ಷಕ್ಕೂ ಹೆಚ್ಚು ಶಿಕ್ಷಕರ ಬಳಕೆ :
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ರಾಜ್ಯಾದ್ಯಂತ 1.49 ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಬಳಸಿಕೊಳ್ಳಲಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯುವ ಈ ಸಮೀಕ್ಷೆಗೆ ಇತರ ಇಲಾಖೆಗಳ 75,064 ನೌಕರರನ್ನು ಸಹ ಬಳಸಲು ತೀರ್ಮಾನಿಸಲಾಗಿದೆ. ಶಿಕ್ಷಕರಿಗೆ ತರಬೇತಿ ನೀಡಲು 3030 ಮಾಸ್ಟರ್ ಟ್ರೇನರ್ಗಳನ್ನು ನೇಮಿಸಲಾಗಿದೆ.




















