ಬೆಂಗಳೂರು, ಸೆ.11 www.bengaluruwire.com : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ತನ್ನ ಆಡಳಿತಾವಧಿಯಲ್ಲೇ ಈ ಕಾನೂನನ್ನು ಜಾರಿಗೆ ತಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸರ್ಕಾರವಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಆಯೋಗದ ಉಪ-ಕಾನೂನುಗಳಲ್ಲಿಯೂ ಇದಕ್ಕೆ ಅವಕಾಶ ನೀಡಲಾಗಿದೆ” ಎಂದು ತಿಳಿಸಿದರು.
ಜಿಬಿಎ ಕಾಯ್ದೆ ಜಾರಿಗೆ ತರುವಾಗ ತಾವು ಬಿಜೆಪಿಯ ಕಾಯ್ದೆಯನ್ನೇ ಮುಂದುವರಿಸಿದ್ದಾಗಿ ಶಿವಕುಮಾರ್ ಹೇಳಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಕಾನೂನು ಸಚಿವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದಾರೆ” ಎಂದು ಅವರು ವಿವರಿಸಿದರು.
ಇತರೆ ವಿಷಯಗಳ ಕುರಿತು ಶಿವಕುಮಾರ್ ಹೀಗೆ ಹೇಳಿದರು :

* ಮೆಟ್ರೋ ನಿಲ್ದಾಣದ ಹೆಸರು: ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವುದು ಒಂದು ಸಾಮಾನ್ಯ ಪ್ರಸ್ತಾವನೆ. ಈ ವಿಷಯವನ್ನು ನಾವು ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದರು.
* ಗೃಹ ಸಚಿವ ಪರಮೇಶ್ವರ್ ಭಾಗಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಶಿವಕುಮಾರ್ ಹೇಳಿದರು.
* ಖರ್ಗೆ ಅವರ ಹೇಳಿಕೆ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದ ಸಂದೇಶದ ಬಗ್ಗೆ ಮಾತನಾಡಿ, “ಯಾರಾದರೂ ಹುದ್ದೆ ಅಥವಾ ಜವಾಬ್ದಾರಿ ತೆಗೆದುಕೊಂಡರೆ ಅವರು ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಹೇಳಿದ್ದಾರೆ. ಪಕ್ಷ ಸಂಘಟನೆ ಮತ್ತು ಆಚಾರ-ವಿಚಾರಗಳನ್ನು ಜನರಿಗೆ ತಿಳಿಸಲು ಈ ಜವಾಬ್ದಾರಿಗಳು ಇವೆ” ಎಂದು ಸ್ಪಷ್ಟಪಡಿಸಿದರು.
* ಸಿ.ಟಿ. ರವಿ ವಿರುದ್ಧ ಎಫ್ಐಆರ್: ಮದ್ದೂರಿನಲ್ಲಿ ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ಕೇಳಿದಾಗ, “ಅವರ ಮಾತು, ಭಾಷೆ ಮತ್ತು ನಡತೆಯೇ ಅವರ ಸಂಸ್ಕೃತಿಯನ್ನು ತೋರುತ್ತದೆ” ಎಂದು ಶಿವಕುಮಾರ್ ಪ್ರತಿಕ್ರಿಯಿಸಿದರು.























