ಬೆಂಗಳೂರು, ಸೆ.25 www.bengaluruwire.com: ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನಗಳ ಬೀಗ ಮುರಿದು ಚಿನ್ನಾಭರಣ ಹಾಗೂ ಕಾಣಿಕೆ ಹುಂಡಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಅವರಿಂದ ರೂ. 1 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಧನದಿಂದ ಬನಶಂಕರಿ ಮತ್ತು ಸದುಗುಂಟೆಪಾಳ್ಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ತಲಾ ಒಂದು ಪ್ರಕರಣ ಸೇರಿ ಒಟ್ಟು ಎರಡು ಪ್ರಕರಣಗಳು ಪತ್ತೆಯಾಗಿದೆ.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು:
ಬನಶಂಕರಿ ವಾಸಿ ಹಾಗೂ ವಿನಾಯಕ ದೇವಸ್ಥಾನದ ಮುಖ್ಯಸ್ಥರೊಬ್ಬರು ಆಗಸ್ಟ್ 29 ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 28 ರಂದು ದೇವಸ್ಥಾನದ ಬಾಗಿಲನ್ನು ಬೀಗ ಹಾಕಿ ಹೋಗಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಿದಾಗ ದೇವಸ್ಥಾನದ ಬಾಗಿಲ ಬೀಗ ಮುರಿದು, ದೇವರ ಮೂರ್ತಿಯಲ್ಲಿದ್ದ ಬೆಳ್ಳಿ ಆಭರಣಗಳು ಮತ್ತು ಹುಂಡಿಯ ಹಣ ಕಳವಾಗಿರುವುದು ಕಂಡುಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದರು.

ಹೇಗೆ ಕಳ್ಳರು ಪತ್ತೆಯಾದರು?:
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಖಚಿತ ಮಾಹಿತಿ ಆಧರಿಸಿ, ಸೆಪ್ಟೆಂಬರ್ 11 ರಂದು ಸಾರಕ್ಕಿ ಸಿಗ್ನಲ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ, ಆರೋಪಿಗಳು ದೇವಸ್ಥಾನ ಆಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಕಳವು ಮಾಡಿದ ಬೆಳ್ಳಿ ವಸ್ತುಗಳನ್ನು ಜೆ.ಪಿ. ನಗರದ ಜ್ಯೂವೆಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.
ಪೊಲೀಸರು ಮಾರನೇ ದಿನ, ಸೆಪ್ಟೆಂಬರ್ 12 ರಂದು, ಜೆ.ಪಿ. ನಗರದಲ್ಲಿರುವ ಜ್ಯುವೆಲರಿ ಅಂಗಡಿಯಿಂದ 744 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ, ಇದರ ಮೌಲ್ಯ ಸುಮಾರು ರೂ. 1,00,000 ಆಗಿದೆ. ಇದೇ ದಿನ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ್ ಭರಮಪ್ಪ ಜಗಲಾಸರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ವಿ ನಾರಾಯಣಸ್ವಾಮಿ ಅವರ ಉಸ್ತುವಾರಿಯಲ್ಲಿ, ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೋಟ್ರೇಶಿ ಬಿ.ಎಂ ಮತ್ತು ಅವರ ತಂಡ ಈ ಕಾರ್ಯಾಚರಣೆ ನಡೆಸುವಲ್ಲಿ ಯಶಸ್ವಿಯಾಗಿದೆ.























