ಕರೂರು, ಸೆ.28 www.bengaluruwire.com : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿದೆ. ಮೃತರ ಪೈಕಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದಾರೆ.
ಈ ಭೀಕರ ದುರಂತವು ತಮಿಳುನಾಡು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪ್ರಾಣಾಪಾಯಕ್ಕೆ ಕಾರಣವಾದ ಘಟನೆಯಾಗಿದೆ. ದುರ್ಘಟನೆಯ ಕುರಿತ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ಸ್ಟಾಲಿನ್ ಸಂತಾಪ, ₹10 ಲಕ್ಷ ಪರಿಹಾರ ಘೋಷಣೆ :
ಕಾಲ್ತುಳಿತದ ಸುದ್ದಿ ತಿಳಿದ ತಕ್ಷಣ ತೀವ್ರ ಆಘಾತ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ಇಲ್ಲಿಯವರೆಗೆ 39 ಜನರು ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ, ಮತ್ತು ಭವಿಷ್ಯದಲ್ಲಿಯೂ ಇಂತಹ ದುರಂತ ಸಂಭವಿಸಬಾರದು” ಎಂದು ಭಾರವಾದ ಹೃದಯದಿಂದ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ :
ಘಟನೆಗೆ ನಿಖರ ಕಾರಣ ತಿಳಿಯಲು, ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ರಚಿಸಲು ಸಿಎಂ ಎಂ.ಕೆ. ಸ್ಟಾಲಿನ್ ಆದೇಶಿಸಿದ್ದಾರೆ. ಭಾನುವಾರ ಮೃತರ ಕುಟುಂಬಗಳೊಂದಿಗೆ ಸಂವಾದ ನಡೆಸಿ, ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಕೆ. ಸ್ಟಾಲಿನ್, “ಇದು ರಾಜಕೀಯ ಹೇಳಿಕೆ ಇಲ್ಲ, ಆಯೋಗದ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
ವಿಜಯ್ ಅವರ ಸಮಾವೇಶ ಕಾರ್ಯಕ್ರಮಕ್ಕೆ 10,000 ಜನರು ನಿರೀಕ್ಷಿಸಿದ್ದರು, ಆದರೆ ಸುಮಾರು 50,000 ಜನರು ಸೇರಿದ್ದರಿಂದ, ವಿಪರೀತ ಜನಸಂದಣಿಯಿಂದಾಗಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು ಎನ್ನಲಾಗಿದೆ. ರ್ಯಾಲಿಯ ಸಂಘಟಕರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.
ನಟ, ರಾಜಕೀಯ ಮುಖಂಡ ವಿಜಯ್ ಆಘಾತ; ‘ಮನಸ್ಸು ನುಚ್ಚುನೂರಾಗಿದೆ’ :
ದುರಂತದ ಕುರಿತು ಟಿ.ವಿ.ಕೆ. ಮುಖ್ಯಸ್ಥ ವಿಜಯ್ ಅವರು ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ. “ನನ್ನ ಹೃದಯ ನುಚ್ಚುನೂರಾಗಿದೆ. ವಿವರಿಸಲಾಗದ ದುಃಖ ಮತ್ತು ವೇದನೆಯಲ್ಲಿ ನರಳುತ್ತಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಸಂತಾಪಗಳು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಸಂತಾಪ :
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. (ವಿಡಿಯೋ ಕೃಪೆ : ANI)























