ಬೆಂಗಳೂರು, ಅ.17 www.bengaluruwire.com : ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 2024-25ರ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನಂತೆ, ಸರ್ಕಾರಿ ಸ್ವಾಮ್ಯದ ‘ಜನತಾ ಬಜಾರ್’ ಮೂಲಕ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ-2024-25ರ ವರದಿ ಮತ್ತು ಶಿಫಾರಸ್ಸುಗಳನ್ನು ಉಲ್ಲೇಖಿಸಿ ಆರ್. ಅಶೋಕ ಅವರು ಅಕ್ಟೋಬರ್ 10 ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವುದರ ಕುರಿತು ಗಮನ ಸೆಳೆದಿದ್ದಾರೆ.
ಶಿಫಾರಸ್ಸು ಪತ್ರದಲ್ಲಿ ಏನಿದೆ?:
ಪತ್ರದಲ್ಲಿ, ಸಮಿತಿಯು ತನ್ನ ವರದಿಯಲ್ಲಿ, “ಸರ್ಕಾರಿ ಸ್ವಾಮ್ಯದ ಜನತಾ ಬಜಾರ್ ಮತ್ತು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಹಭಾಗಿತ್ವದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಪೂರೈಸಲು ಕ್ರಮ ವಹಿಸಬೇಕು” ಎಂದು ಸ್ಪಷ್ಟವಾಗಿ ಶಿಫಾರಸ್ಸು ಮಾಡಿರುವುದನ್ನು ಆರ್.ಅಶೋಕ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

ಉತ್ತಮ ಗುಣಮಟ್ಟದ ಆಹಾರದ ಅಗತ್ಯ:
“ಅಂಗನವಾಡಿಗಳಲ್ಲಿನ ಮಕ್ಕಳಿಗೆ ಪೂರೈಸುವ ಆಹಾರ ಪದಾರ್ಥಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಆಹಾರದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಈ ಹಿನ್ನೆಲೆಯಲ್ಲಿ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮೂಲಕ ಗುಣಮಟ್ಟದ ಆಹಾರ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮೂಲಕವೇ ಉತ್ತಮ ಗುಣಮಟ್ಟದ ಪೌಷ್ಠಿಕ ಆಹಾರವನ್ನು ಪೂರೈಸಿ, ಮಕ್ಕಳ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.























