ಬೆಂಗಳೂರು, ನ.9 www.bengaluruwire.com : ಸರಗೂರು ತಾಲೂಕಿನ ಸುತ್ತಮುತ್ತ ಪದೇ ಪದೆ ಜನರ ಮೇಲೆ ದಾಳಿ ನಡೆಸಿ, ಪ್ರಾಣಹಾನಿ ಮತ್ತು ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಒಂದು ಗಂಡು ಹುಲಿಯನ್ನು ಕೊನೆಗೂ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ ಮೂವರು ಅಮಾಯಕ ವ್ಯಕ್ತಿಗಳ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಇದೇ ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ, ಸೆರೆ ಹಿಡಿದ ಹುಲಿಯ ಡಿ.ಎನ್.ಎ. ಮಾದರಿ ಮತ್ತು ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಎರಡನ್ನೂ ಕೂಲಂಕುಷವಾಗಿ ಪರಿಶೀಲಿಸಿ, ಹೆಡಿಯಾಲ, ಮೊಳೆಯೂರು ಹಾಗೂ ನುಗು ಪ್ರದೇಶಗಳಲ್ಲಿ ಅಮೂಲ್ಯ ಜೀವ ಹಾನಿ ಮಾಡಿದ ಅದೇ ನರಭಕ್ಷಕ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಚಿವರು ಉನ್ನತಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಸಫಾರಿ ಸ್ಥಗಿತಗೊಳಿಸಿ ಕಾರ್ಯಾಚರಣೆಗೆ ಸಿಬ್ಬಂದಿ ನಿಯೋಜನೆ :

ಬಂಡಿಪುರ ಮತ್ತು ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿಗಳು ಮನುಷ್ಯರು ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚಾಗಿದ್ದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶಗಳಲ್ಲಿದ್ದ ಸಫಾರಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ಮೂಲಕ ಸಫಾರಿಗೆ ನಿಯೋಜನೆಯಾಗಿದ್ದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸಂಪೂರ್ಣವಾಗಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಿ ತೀವ್ರ ಕಾರ್ಯಾಚರಣೆ ನಡೆಸಲಾಗಿತ್ತು.
ವಯಸ್ಸಾದ ಹುಲಿಯಿಂದ ದಾಳಿ: ಕಾರಣ ಬಯಲು :
ಬಂಡಿಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಈ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸೆರೆ ಹಿಡಿಯಲಾದ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಅದರ ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳನ್ನು ಬೇಟೆಯಾಡಲು ಅಶಕ್ತವಾಗಿದ್ದ ಈ ಗಂಡು ಹುಲಿಯು ಸುಲಭವಾದ ಬೇಟೆಗಾಗಿ ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ ಎಂದು ಸಚಿವ ಖಂಡ್ರೆ ತಿಳಿಸಿದರು.
ಈ ಹುಲಿ ಸೆರೆ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ, ವನ್ಯಜೀವಿ ವಿಭಾಗದ ಎ.ಪಿ.ಸಿ.ಸಿ.ಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಇನ್ನು ಮುಂದೆ ವಸತಿ ಪ್ರದೇಶಗಳ ಬಳಿ ಹುಲಿಗಳ ಸಂಚಾರ ಇರುವ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ, ಸೆರೆ ಹಿಡಿದ ಈ ಹುಲಿಯಲ್ಲದೆ ಬೇರೆ ಯಾವುದೇ ಹುಲಿಗಳು ದಾಳಿ ನಡೆಸಿವೆಯೇ ಎಂಬುದನ್ನು ಸಹ ಪರಿಶೀಲಿಸಿ, ತೀವ್ರ ನಿಗಾ ವಹಿಸುವಂತೆ ಸಚಿವರು ಸೂಚಿಸಿದ್ದಾರೆ.






















