ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.09 www.bengaluruwire.com : ರಾಜಧಾನಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಹುದೊಡ್ಡ ನಿರಾಳತೆಯ ಸುದ್ದಿಯೊಂದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಗಳನ್ನು ಪರಿಗಣಿಸಿ, ಕೂಡಲೇ ಜಾರಿಗೆ ಬರುವಂತೆ ಹಳೆಯ ಪದ್ಧತಿಯಲ್ಲೇ ಇ-ಖಾತಾ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಅವರು ಸದನದಲ್ಲಿ ಭರವಸೆ ನೀಡಿದರು.
ಇಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಡಿಜಿಟಲ್ ದಾಖಲೀಕರಣ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಉದ್ದೇಶದಿಂದ ಸ್ವಯಂಚಾಲಿತ ಇ-ಖಾತಾ ಹಂಚಿಕೆ ವ್ಯವಸ್ಥೆಯನ್ನು ತರಲಾಗಿತ್ತು. ಆದರೆ, ಹೊಸ ಮಾದರಿಯಲ್ಲಿ ಖಾತಾ ಪಡೆಯಲು ಸಾರ್ವಜನಿಕರಿಗೆ ತಾಂತ್ರಿಕ ತೊಡಕುಗಳು ಹಾಗೂ ವಿಳಂಬವಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಗೊಂದಲ ನಿವಾರಿಸಲು ಈ ಹಿಂದೆ ಇದ್ದ ಸರಳವಾದ ಹಳೆಯ ಪದ್ಧತಿಯನ್ನೇ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ಬಾಕಿ ಇರುವ 31,274 ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಕಸ ವಿಲೇವಾರಿಗೆ ವೈಜ್ಞಾನಿಕ ಕಾಯಕಲ್ಪ
ಇದೇ ವೇಳೆ, ನಗರದ ಮತ್ತೊಂದು ಜ್ವಲಂತ ಸಮಸ್ಯೆಯಾದ ತ್ಯಾಜ್ಯ ನಿರ್ವಹಣೆ ಕುರಿತು ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಬೆಂಗಳೂರಿನಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಸುಮಾರು 5600 ರಿಂದ 8000 ಮೆಟ್ರಿಕ್ ಟನ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.
ನಗರದ ಕಸವನ್ನು ನಿರ್ವಹಿಸಲು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಎರಡು ಬೃಹತ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಸಿ ತ್ಯಾಜ್ಯದಿಂದ ಬಯೋಗ್ಯಾಸ್ ಮತ್ತು ಗೊಬ್ಬರ ತಯಾರಿಕೆ ಹಾಗೂ ಒಣ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ.
ವಿಶೇಷವಾಗಿ, ಮಂಗಳೂರಿನಲ್ಲಿ ಯಶಸ್ವಿಯಾಗಿರುವ ‘ಬ್ಲಾಕ್ ಸೋಲ್ಜರ್ ಫ್ಲೈ’ (Black Soldier Fly) ಎಂಬ ಕೀಟವನ್ನು ಬಳಸಿ ಕಸವನ್ನು ಗೊಬ್ಬರವಾಗಿಸುವ ತಂತ್ರಜ್ಞಾನದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಮೀಕ್ಷೆ ನಡೆಸಿ, ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ವೈಜ್ಞಾನಿಕವಾಗಿ ಇದನ್ನು ಬೆಂಗಳೂರಿನಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಒಟ್ಟಾರೆಯಾಗಿ, ಆಸ್ತಿ ಖಾತೆ ಗೊಂದಲಕ್ಕೆ ತೆರೆ ಎಳೆಯುವ ಜತೆಗೆ, ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ.























