ಬೆಳಗಾವಿ (ಸುವರ್ಣ ವಿಧಾನಸೌಧ) ಡಿ.12 www.bengaluruwire.com : ರಾಜ್ಯದಲ್ಲಿ ಬಡವರಿಗಾಗಿ ಜಾರಿಗೆ ತಂದಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು (Social Security Schemes) ಶ್ರೀಮಂತರು ಮತ್ತು ಅನರ್ಹರು ಲೂಟಿ ಮಾಡುತ್ತಿದ್ದಾರೆ. ಬರೋಬ್ಬರಿ 24.50 ಲಕ್ಷ ಅಕ್ರಮ ಫಲಾನುಭವಿಗಳು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಆದಾಯ ಪ್ರಮಾಣ ಪತ್ರಗಳನ್ನು (Income Certificates) ಮನಬಂದಂತೆ ನೀಡಲಾಗುತ್ತಿದ್ದು, ಇದು ಯೋಜನೆಗಳ ದುರ್ಬಳಕೆಗೆ ಮೂಲ ಕಾರಣವಾಗಿದೆ ಎಂದರು.
ಸರ್ಕಾರಿ ನೌಕರರು, ಐಟಿ ಪಾವತಿದಾರರಿಂದಲೂ ದೋಖಾ :
ಸಾಮಾಜಿಕ ಭದ್ರತಾ ಯೋಜನೆಗಳಿಗೆ ಆಧಾರ್ ಜೋಡಣೆ (Aadhaar Linking) ಮಾಡುವ ಸಂದರ್ಭದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ನಿಗದಿಪಡಿಸಿದ ವಯೋಮಿತಿಗಿಂತ ಕಡಿಮೆ ವಯಸ್ಸಿನವರು ಪಿಂಚಣಿ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ, 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು (IT Payers) ಮತ್ತು ಎಚ್.ಆರ್ ಎಂ.ಎಸ್ನಲ್ಲಿ (HRMS) ಮಾಹಿತಿಯಿರುವ ಸರ್ಕಾರಿ ನೌಕರರು ಕೂಡ ಬಡವರ ಸವಲತ್ತುಗಳನ್ನು ಕಬಳಿಸುತ್ತಿದ್ದಾರೆ ಎಂಬುದು ಪತ್ತೆಯಾಗಿದೆ.

ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಕೂಡಲೇ ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಆದಾಯ ಮಿತಿ ಹೆಚ್ಚಳ ಸದ್ಯಕ್ಕಿಲ್ಲ :
ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗೆ (Sandhya Suraksha Scheme) ಆದಾಯ ಮಿತಿಯನ್ನು ಬಿಪಿಎಲ್ ಕಾರ್ಡ್ ಮಾದರಿಯಲ್ಲಿ 1.2 ಲಕ್ಷ ರೂ.ಗೆ ಹೆಚ್ಚಿಸುವಂತೆ ಬೇಡಿಕೆಗಳಿವೆ. ಆದರೆ, ಸದ್ಯ ಗೃಹಲಕ್ಷ್ಮಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 32,000 ರೂ.ಗೂ ಹೆಚ್ಚು ಹಣ ಜಮೆಯಾಗುತ್ತಿದೆ. ಆದ್ದರಿಂದ, ರಾಜ್ಯದಲ್ಲಿ ಕುಟುಂಬದ ನಿಖರ ಆದಾಯ ನಿರ್ಧರಿಸುವ ವ್ಯವಸ್ಥೆ ಜಾರಿಗೆ ಬಂದ ಬಳಿಕವಷ್ಟೇ ಆದಾಯ ಮಿತಿ ಹೆಚ್ಚಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.




















