ಬೆಂಗಳೂರು, ಜ.26 www.bengaluruwire.com : ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ 77ನೇ ಗಣರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಡಗರದಿಂದ ಆಚರಿಸಲಾಯಿತು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ನಡೆದ ಪ್ರಧಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಪರವಾದ ನಿಲುವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ವಿಶೇಷವೆಂದರೆ, ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಸಾಧನೆಗಳೇ ಮುಂಚೂಣಿಯಲ್ಲಿದ್ದು, ಕೇಂದ್ರದ ವಿರುದ್ಧದ ಟೀಕೆಗಳು ಕಂಡುಬರಲಿಲ್ಲ.
ಸಂವಿಧಾನದ ಆಶಯ ಮತ್ತು ಸಾಮಾಜಿಕ ನ್ಯಾಯ:
ಭಾರತದ ಪ್ರಜಾಪ್ರಭುತ್ವದ ಇತಿಹಾಸವನ್ನು ಸ್ಮರಿಸಿದ ರಾಜ್ಯಪಾಲರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘ಸಾಮಾಜಿಕ ಪ್ರಜಾಪ್ರಭುತ್ವ’ದ ಪರಿಕಲ್ಪನೆಯನ್ನು ಉಲ್ಲೇಖಿಸಿದರು. “ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಒಂದಕ್ಕೊಂದು ಬೆಸೆದುಕೊಂಡಿವೆ. ಇವುಗಳಲ್ಲಿ ಒಂದನ್ನು ಪ್ರತ್ಯೇಕಿಸಿದರೂ ಪ್ರಜಾಪ್ರಭುತ್ವ ಸೋಲುತ್ತದೆ,” ಎಂದು ಅಂಬೇಡ್ಕರ್ ಅವರ ಮಾತುಗಳನ್ನು ಪುನರುಚ್ಚರಿಸಿದರು. ಕರ್ನಾಟಕ ಸರ್ಕಾರವು ಈ ತತ್ವಗಳಡಿಯಲ್ಲಿ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮತ್ತು ಎಲ್ಲ ಸಮುದಾಯಗಳ ಧ್ವನಿಗೆ ಕಿವಿಯಾಗಲು ಶ್ರಮಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಯಶಸ್ಸು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ಯಾರಂಟಿ ಯೋಜನೆ’ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು, “ಸರ್ಕಾರವು ‘ಯೂನಿವರ್ಸಲ್ ಬೇಸಿಕ್ ಇನ್ಕಂ’ ತತ್ವದಡಿ ಜಾರಿಗೆ ತಂದಿರುವ ಈ ಯೋಜನೆಗಳಿಗಾಗಿ ಇದುವರೆಗೆ 1.13 ಲಕ್ಷ ಕೋಟಿ ರೂ. ವಿನಿಯೋಗಿಸಿದೆ. ಇದರಿಂದ 1.37 ಕೋಟಿ ಕುಟುಂಬಗಳು ನೇರ ಆರ್ಥಿಕ ಲಾಭ ಪಡೆದಿವೆ. ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದ್ದು, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ,” ಎಂದು ಅಭಿಪ್ರಾಯಪಟ್ಟರು. ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂಬ ಸಮೀಕ್ಷಾ ವರದಿಯನ್ನು ಅವರು ಹೆಮ್ಮೆಯಿಂದ ಪ್ರಸ್ತಾಪಿಸಿದರು.
ಬೆಂಗಳೂರು ಅಭಿವೃದ್ಧಿ ಮತ್ತು ಹೂಡಿಕೆ:
ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದ ಗೆಹ್ಲೋಟ್, ನಗರದಲ್ಲಿ ಸುಮಾರು 1.5 ಲಕ್ಷ ಕೋಟಿ ರೂ. ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಸೆಮಿ ಕಂಡಕ್ಟರ್, ಏರೋಸ್ಪೇಸ್ ಮತ್ತು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಕರ್ನಾಟಕ ಆದ್ಯ ತಾಣವಾಗಿದ್ದು, ಜಾಗತಿಕ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿವೆ ಎಂದು ತಿಳಿಸಿದರು.
ರೈತಪರ ಕಾಳಜಿ ಮತ್ತು ಕಂದಾಯ ಸುಧಾರಣೆ:
ರೈತರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಅವರು, ಮಳೆಯಿಂದ ಹಾನಿಯಾದ ಬೆಳೆಗಳಿಗೆ 2,250 ಕೋಟಿ ರೂ. ಪರಿಹಾರ ಹಾಗೂ 2,000 ಕೋಟಿ ರೂ.ಗೂ ಅಧಿಕ ವಿಮಾ ಮೊತ್ತವನ್ನು ರೈತರಿಗೆ ಒದಗಿಸಲಾಗಿದೆ ಎಂದರು. ಕಬ್ಬು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವ ಮೂಲಕ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಕಂದಾಯ ಇಲಾಖೆಯಲ್ಲಿನ ಡಿಜಿಟಲೀಕರಣ, ‘ಬಿ’ ಖಾತಾ ಪರಿವರ್ತನೆ ಮತ್ತು ತ್ವರಿತಗತಿಯಲ್ಲಿ ಪ್ರಕರಣಗಳ ಇತ್ಯರ್ಥದಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ:
ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ದೇಶದ ಅತಿದೊಡ್ಡ ಹಬ್ ಆಗಿ ಹೊರಹೊಮ್ಮುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಆರಂಭ, 300 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಮತ್ತು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸುಧಾರಣೆಗೆ ‘ಅಕ್ಷರ ಆವಿಷ್ಕಾರ’ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮೂಲಸೌಕರ್ಯ ಬಲಪಡಿಸಲಾಗುತ್ತಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸಲಾಗುತ್ತಿದೆ ಎಂದು ರಾಜ್ಯಪಾಲರು ವಿವರಿಸಿದರು.
ಒಟ್ಟಾರೆಯಾಗಿ, ರಾಜ್ಯವು ಕಾನೂನು ಸುವ್ಯವಸ್ಥೆ, ಐಟಿ-ಬಿಟಿ ಮತ್ತು ನವೋದ್ಯಮಗಳಲ್ಲಿ ಮುಂಚೂಣಿಯಲ್ಲಿದ್ದು, ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯವನ್ನು ಸರ್ಕಾರ ಎತ್ತಿಹಿಡಿದಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದರು.






















