ಬೆಂಗಳೂರು, ಮಾ.20 www.bengaluruwire.com: ಶಿವಮೊಗ್ಗದ ಪ್ರಸಿದ್ಧ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ಗುರುವಾರ ತಡರಾತ್ರಿ ಸುಮಾರು 11.30ರ ವೇಳೆಗೆ ಅನಾರೋಗ್ಯಕ್ಕೀಡಾಗಿದ್ದ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ಮೃಗಾಲಯದ ಆವರಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ನೀರಾನೆ ದಾಳಿ ನಡೆಸಿದ್ದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಶುಕ್ರವಾರ) ಬೆಳಿಗ್ಗೆ 6.30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಸಚಿವರ ಸಂತಾಪ ಮತ್ತು ಪರಿಹಾರ ಘೋಷಣೆ:
“ಡಾ. ಸಮೀಕ್ಷಾ ಅವರ ಸಾವು ಅತ್ಯಂತ ದುರದೃಷ್ಟಕರ. ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು. ಈ ಕಷ್ಟದ ಸಮಯದಲ್ಲಿ ಸರ್ಕಾರ ಅವರ ಕುಟುಂಬದೊಂದಿಗೆ ನಿಲ್ಲಲಿದೆ,” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ನಿಯಮಾನುಸಾರ ಶೀಘ್ರವಾಗಿ ಪರಿಹಾರ ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತನಿಖೆಗೆ ಆದೇಶ ಮತ್ತು ಎಸ್ಒಪಿ ಪಾಲನೆ:
ಈ ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಲು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸಚಿವರು ಗಡುವು ನೀಡಿದ್ದಾರೆ. ಇನ್ನು ಮುಂದೆ ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಪಶುವೈದ್ಯರು ಕಡ್ಡಾಯವಾಗಿ ಪ್ರಮಾಣಿತ ಮಾನದಂಡ (SOP) ಪಾಲಿಸಬೇಕು ಎಂದು ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.




















