ಬೀದರ್, ಏ.13 www.bengaluruwire.com: ಗಡಿ ನಾಡು ಬೀದರ್ನ ಝೀರಾ ಕನ್ವೆನ್ಸನ್ ಹಾಲ್ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು.
ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, “ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು,” ಎಂದು ಕಿವಿಮಾತು ಹೇಳಿದರು.
ಮಾಧ್ಯಮವೇ ವಿರೋಧ ಪಕ್ಷ: ಆರ್. ಅಶೋಕ:

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ,” ಎಂದು ಅಭಿಪ್ರಾಯಪಟ್ಟರು.
ಅಭಿವೃದ್ಧಿಗೆ ಮಾಧ್ಯಮಗಳ ಸಹಕಾರ ಅಗತ್ಯ: ಈಶ್ವರ ಖಂಡ್ರೆ:
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, “371ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು,” ಎಂದು ಮನವಿ ಮಾಡಿದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಪ್ರಶಸ್ತಿಗಳ ಸುರಿಮಳೆ:

ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 40 ಪತ್ರಕರ್ತರಿಗೆ ದತ್ತಿನಿಧಿ, ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ವಿಜಯ ಕರ್ನಾಟಕ ಪತ್ರಿಕೆಯ ನಾಲ್ವರು ಪತ್ರಕರ್ತರು, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ್ ಎಸ್.ಸಂಪ ಅವರು ಪ್ರಶಸ್ತಿಗೆ ಭಾಜನರಾಗಿದ್ದು ವಿಶೇಷವಾಗಿತ್ತು. ಬೆಂಗಳೂರಿನ ಹಿರಿಯ ಛಾಯಾಗ್ರಾಹಕ ಕೆ.ಎಸ್. ಗಣೇಶ್ ಅವರಿಗೆ ‘ಉತ್ತಮ ಸುದ್ದಿ ಛಾಯಾಗ್ರಾಹಕ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಮಾಹಿತಿ ಹಕ್ಕು ಕಾಯಿದೆ ಕುರಿತು ಗೋಷ್ಠಿ:
“ಪತ್ರಕರ್ತರಲ್ಲಿ ಓದು ಮತ್ತು ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ,” ಎಂದು ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಕಳವಳ ವ್ಯಕ್ತಪಡಿಸಿದರು. ಮತ್ತೊಬ್ಬ ಆಯುಕ್ತ ಬದ್ರುದ್ದೀನ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಬಿ. ವೆಂಕಟಸಿಂಗ್ ಅವರು ಪಾರದರ್ಶಕ ಆಡಳಿತಕ್ಕೆ ಆರ್ಟಿಐ ದಿಕ್ಸೂಚಿಯಾಗಿದೆ ಎಂದು ವಿಶ್ಲೇಷಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ್, ಶರಣು ಸಲಗರ, ಎಂಎಲ್ ಮಾರುತಿರಾವ್ ಮುಳೆ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.























