ಬೆಂಗಳೂರು, ಏ.15 www.bengaluruwire.com: ಆದಿಚುಂಚನಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯ ಸ್ವಾಗತ ಕೋರಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ದೀರ್ಘಕಾಲದಿಂದ ಬಾಕಿ ಇರುವ ವಿವಿಧ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಸುದೀರ್ಘ ಮನವಿ ಪತ್ರ ಸಲ್ಲಿಸಿದರು.
ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮನವಿ:
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಕ್ಷಣದ ಅನುಮೋದನೆ ನೀಡಬೇಕು ಹಾಗೂ ಕಳಸಾ ಬಂಡೂರಿ (ಮಹದಾಯಿ) ಯೋಜನೆಗೆ ವನ್ಯಜೀವಿ ಮಂಡಳಿಯಿಂದ ಕ್ಲಿಯರೆನ್ಸ್ ಕೊಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ-3ನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾದ ₹5,300 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದರು.

ಬಾಕಿ ಇರುವ ಭಾರಿ ಅನುದಾನದ ಪಟ್ಟಿ:
ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಾದ ₹5,495 ಕೋಟಿ ಕಂದಾಯ ಕೊರತೆ ಅನುದಾನ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕಾಗಿ ವಿಶೇಷವಾಗಿ ₹6,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಸಿಎಂ ಒತ್ತಿ ಹೇಳಿದ್ದಾರೆ. ಜಲಜೀವನ್ ಮಿಷನ್ ಅಡಿಯಲ್ಲಿ ಕೇಂದ್ರದಿಂದ ಬರಬೇಕಾದ ₹17,554 ಕೋಟಿ ಪಾಲು ಹಾಗೂ ಗ್ರಾಮ ಪಂಚಾಯತ್ಗಳಿಗೆ ಬರಬೇಕಾದ ₹2,860 ಕೋಟಿ ಅನುದಾನದ ಬಗ್ಗೆಯೂ ಪ್ರಧಾನಿಗಳ ಗಮನ ಸೆಳೆದರು.
ಸಾರಿಗೆ ಮತ್ತು ಕೈಗಾರಿಕಾ ಬೇಡಿಕೆಗಳು:
ಕೋಲಾರದ ರೈಲ್ವೆ ಕೋಚ್ ಫ್ಯಾಕ್ಟರಿ ಆರಂಭ, ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಗೆ ಹಣಕಾಸಿನ ನೆರವು ನೀಡಲು ಮನವಿಯಲ್ಲಿ ಕೋರಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ಜಿಲ್ಲೆಯಲ್ಲೂ ಸಾರ್ವಜನಿಕ ವಲಯದ ಉದ್ದಿಮೆ (PSU) ಸ್ಥಾಪನೆ ಹಾಗೂ ರಾಯಚೂರಿನಲ್ಲಿ AIIMS ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ.
ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ:
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶೇ. 56ರಷ್ಟು ಮೀಸಲಾತಿಯನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಹಾಗೂ ಕೆಲವು ಹಿಂದುಳಿದ ವರ್ಗಗಳನ್ನು ಕೇಂದ್ರದ ಎಸ್ಟಿ (ST) ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಈ ಮನವಿ ಪತ್ರದ ಮೂಲಕ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.























