ಬೆಂಗಳೂರು, ಏ.20 www.bengaluruwire.com: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಶಾಂತಿನಗರ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹಾಗೂ ಅವರ ಪುತ್ರರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಸೋಮವಾರ ಮುಂಜಾನೆ 6:30ರ ಸುಮಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಬಿಗಿ ಭದ್ರತೆಯೊಂದಿಗೆ ಆಗಮಿಸಿದ 12ಕ್ಕೂ ಹೆಚ್ಚು ಅಧಿಕಾರಿಗಳ ತಂಡ, ಅಶೋಕ್ ನಗರದಲ್ಲಿರುವ ಹ್ಯಾರಿಸ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು 17 ಕಡೆಗಳಲ್ಲಿ ತಪಾಸಣೆ ಕೈಗೊಂಡಿದೆ. ಶಾಸಕ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರು ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನೊಂದಿಗೆ ಆರ್ಥಿಕ ವ್ಯವಹಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಅಂತರರಾಷ್ಟ್ರೀಯ ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ ಕಳವು ಮಾಡಲಾಗಿದ್ದ ಕ್ರಿಪ್ಟೋಕರೆನ್ಸಿಯ ಹಣವು ನಲಪಾಡ್ ಅವರಿಗೆ ವರ್ಗಾವಣೆಯಾಗಿದೆಯೇ ಎಂಬ ಬಗ್ಗೆ ಇಡಿ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 6 ವರ್ಷಗಳಲ್ಲಿ ಇವರ ನಡುವೆ ಸುಮಾರು 4.5 ಕೋಟಿ ರೂ. ವಹಿವಾಟು ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಹ್ಯಾರಿಸ್ ಅವರ ನಿವಾಸ ಮಾತ್ರವಲ್ಲದೆ, ಹಗರಣದ ಪ್ರಮುಖ ಆರೋಪಿ ಶ್ರೀಕಿಯ ಜಯನಗರದ ನಿವಾಸ ಹಾಗೂ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಮೊಮ್ಮಗ ಮೊಹಮ್ಮದ್ ಹಕೀಬ್ ಅವರ ಮನೆಯ ಮೇಲೂ ದಾಳಿ ನಡೆದಿದೆ.

ಈ ಹಿಂದೆ ಸಿಸಿಬಿ ಮತ್ತು ಸಿಐಡಿ ನಡೆಸಿದ್ದ ತನಿಖೆಯ ಮಾಹಿತಿಯನ್ನಾಧರಿಸಿ, ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಸಿಐಆರ್ (ECIR) ದಾಖಲಿಸಿಕೊಂಡು ಈ ಸುದೀರ್ಘ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಸ್ತುತ ಶಾಸಕ ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ಅವರ ಸಮ್ಮುಖದಲ್ಲೇ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಡಿಜಿಟಲ್ ಪುರಾವೆಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.






















