ನವದೆಹಲಿ, ಏ.24 www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರಿನ ಸರ್ವತೋಮುಖ ಪ್ರಗತಿಗೆ ಅಡ್ಡಿಯಾಗಿರುವ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ಕಟ್ಟಡಗಳ ಎತ್ತರದ ನಿರ್ಬಂಧವನ್ನು ಸಡಿಲಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಈ ಕುರಿತು ಸುದೀರ್ಘ ಸಮಾಲೋಚನೆ ನಡೆಸಿ ಅಧಿಕೃತ ಮನವಿ ಪತ್ರ ಸಲ್ಲಿಸಿದರು. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಇಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ನಿಯಮಗಳು ತೊಡಕಾಗಿ ಪರಿಣಮಿಸಿವೆ ಎಂದು ಅವರು ವಿವರಿಸಿದರು.
20 ಕಿ.ಮೀ ವ್ಯಾಪ್ತಿಯ ನಿರ್ಬಂಧಕ್ಕೆ ಆಕ್ಷೇಪ:

ಮನವಿ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಹೆಚ್ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತಲ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ಅಧಿಕಾರಿಗಳು ಕಠಿಣ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಜಿ.ಎಸ್.ಆರ್ 751 (ಇ) ನಿಯಮದ ಪ್ರಕಾರ 15 ಕಿ.ಮೀ ವ್ಯಾಪ್ತಿಯಲ್ಲಿ 150 ಮೀಟರ್ ಎತ್ತರದ ಮಿತಿ ಇರಬೇಕು. ಆದರೆ, ರಕ್ಷಣಾ ಇಲಾಖೆಯು ಈ ಮಿತಿಯನ್ನು ಅನಗತ್ಯವಾಗಿ 20 ಕಿ.ಮೀ ವರೆಗೆ ವಿಸ್ತರಿಸಿದೆ. ಇದು ಬೆಂಗಳೂರಿನ ಹೃದಯ ಭಾಗದಲ್ಲಿರುವ ಅಭಿವೃದ್ಧಿ ಚಟುವಟಿಕೆಗಳಿಗೆ ಮಾರಕವಾಗಿದೆ ಎಂದು ಡಿಸಿಎಂ ಆತಂಕ ವ್ಯಕ್ತಪಡಿಸಿದರು.

ಜಾಗತಿಕ ನಗರಗಳ ಮಾದರಿ ಅನುಸರಿಸಲು ಮನವಿ:
ಸಿಂಗಾಪುರ, ಲಂಡನ್, ದುಬೈ ಮತ್ತು ಆಂಸ್ಟರ್ಡ್ಯಾಂನಂತಹ ನಗರಗಳಲ್ಲಿ ವಿಮಾನ ನಿಲ್ದಾಣಗಳ ಸುತ್ತಮುತ್ತ ಉದ್ಯೋಗ ಕೇಂದ್ರಗಳು ಮತ್ತು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಮೂಲಕ ನಗರದ ಪರಿವರ್ತನೆಗೆ ಪೂರಕವಾಗಿ ಬಳಸಿಕೊಳ್ಳಲಾಗುತ್ತಿದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸುರಕ್ಷತೆಯ ಜೊತೆಗೆ ಅಭಿವೃದ್ಧಿಗೂ ಆದ್ಯತೆ ನೀಡಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು.
ಈಗಾಗಲೇ ಈ ಕುರಿತು ನಾಗರಿಕ ವಿಮಾನಯಾನ ಮತ್ತು ರಕ್ಷಣಾ ಸಚಿವಾಲಯದ ವಿವಿಧ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, ಕೇಂದ್ರ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದ್ದಾರೆ. 150 ಮೀಟರ್ ಎತ್ತರದ ಮಿತಿಯನ್ನು 20 ಕಿ.ಮೀ ಬದಲಿಗೆ 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸುವುದು ನಗರದ ಬೆಳವಣಿಗೆಗೆ ಅತ್ಯಗತ್ಯವಾಗಿದೆ ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.





















