ಬೆಂಗಳೂರು, ಮೇ.05 www.bengaluruwire.com: ರಾಜಧಾನಿಯಲ್ಲಿ ಕಳೆದ ಏಪ್ರಿಲ್ 29ರಂದು ಸುರಿದ ಭಾರೀ ಮಳೆಗೆ ಲೋಕಾಯುಕ್ತ ಕಚೇರಿ ಮುಂಭಾಗದ ಕೆ.ಆರ್. ವೃತ್ತದ ಅಂಡರ್ಪಾಸ್ ಜಲಾವೃತಗೊಂಡ ಬೆನ್ನಲ್ಲೇ, ಲೋಕಾಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2023ರಲ್ಲಿ ಇದೇ ಸ್ಥಳದಲ್ಲಿ ಸಾಫ್ಟ್ವೇರ್ ಉದ್ಯೋಗಿ ಭಾನುರೇಖಾ ಅವರು ಮೃತಪಟ್ಟಿದ್ದ ಕಹಿ ಘಟನೆ ಮರುಕಳಿಸುವ ಸಾಧ್ಯತೆಯಿದ್ದರೂ ಬಿಬಿಎಂಪಿ ಎಚ್ಚೆತ್ತುಕೊಳ್ಳದಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳಿಗೆ ತರಾಟೆ:
ಏ30 ರಂದುಲೋಕಾಯುಕ್ತರು, ಉಪಲೋಕಾಯುಕ್ತರು ಮತ್ತು ಎಡಿಜಿಪಿ ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಅಂಡರ್ಪಾಸ್ ನಿರ್ವಹಣೆಯ ವಿಚಾರವಾಗಿ ಬಿಬಿಎಂಪಿಯ ನೀರುಗಾಲುವೆ ವಿಭಾಗ ಮತ್ತು ರಸ್ತೆ ಮೂಲಸೌಕರ್ಯ ವಿಭಾಗದ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಜವಾಬ್ದಾರಿ ತಳ್ಳುತ್ತಿರುವುದು ಕಂಡುಬಂದಿದೆ. ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ನಡೆಗೆ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಮುಖರಿಗೆ ನೋಟಿಸ್ ಮತ್ತು ವಿಚಾರಣೆ:ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಲೋಕಾಯುಕ್ತರು ಸುದೀರ್ಘ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಹಾಗೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (GBA) ಮುಖ್ಯ ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಸೇರಿಸಲು ಸೂಚಿಸಿದ್ದಾರೆ. ಈ ಹಿರಿಯ ಅಧಿಕಾರಿಗಳಿಂದ ವರದಿ ಕೇಳಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 20, 2026ರಂದು ಮಧ್ಯಾಹ್ನ 12:30ಕ್ಕೆ ನಿಗದಿಪಡಿಸಲಾಗಿದೆ.























