ಬೆಂಗಳೂರು, ಮೇ.16 www.bengaluruwire.com: ರಾಜ್ಯದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಅತ್ಯಂತ ಸಂತಸದ ಸುದ್ದಿಯೊಂದು ಸಿಕ್ಕಿದೆ. ಕರ್ನಾಟಕದಲ್ಲಿ ವೈದ್ಯಕೀಯ ಪದವಿ (MBBS) ಹಾಗೂ ಸ್ನಾತಕೋತ್ತರ ಪದವಿ (PG) ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೇ 15 ರಂದು ಅಂತಿಮ ಮುದ್ರೆ ಒತ್ತಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯಕ್ಕೆ ಹೆಚ್ಚುವರಿಯಾಗಿ ಒಟ್ಟು 1,122 ಯುಜಿ ಮತ್ತು ಪಿಜಿ ಸೀಟುಗಳು ಲಭ್ಯವಾಗಲಿವೆ. ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ, ಖಾಸಗಿ, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ಒಟ್ಟು 72 ವೈದ್ಯಕೀಯ ಕಾಲೇಜುಗಳಿವೆ. ಇವುಗಳಲ್ಲಿ 13,945 ಯುಜಿ ಹಾಗೂ 7,727 ಪಿಜಿ ಸೀಟುಗಳು ಲಭ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದ್ದಾರೆ.
ಇದೀಗ ಕೇಂದ್ರ ಸರ್ಕಾರದ “ಭಾರತದಲ್ಲಿನ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳ ಬಲವರ್ಧನೆ ಮತ್ತು ಮೇಲ್ದರ್ಜೆಗೇರಿಸುವಿಕೆ” ಯೋಜನೆಯಡಿ ಸೀಟುಗಳ ಹೆಚ್ಚಳಕ್ಕೆ ನಮ್ಮ ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರನ್ವಯ 11 ವೈದ್ಯಕೀಯ ಸಂಸ್ಥೆಗಳಲ್ಲಿ 550 ಎಂಬಿಬಿಎಸ್ (UG) ಸೀಟುಗಳು ಹಾಗೂ 23 ಸಂಸ್ಥೆಗಳಲ್ಲಿ 572 ಪಿಜಿ ಸೀಟುಗಳನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರತಿ ಸೀಟು ಹೆಚ್ಚಳಕ್ಕೆ ತಗಲುವ 1.5 ಕೋಟಿ ರೂಪಾಯಿ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ಭರಿಸಲಿವೆ. ಯುಜಿ ಸೀಟುಗಳ ಹೆಚ್ಚಳಕ್ಕಾಗಿ ಒಟ್ಟು 825 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ ಕೇಂದ್ರದ ಪಾಲು 495 ಕೋಟಿ ರೂ. ಹಾಗೂ ರಾಜ್ಯದ ಪಾಲು 330 ಕೋಟಿ ರೂ. ಆಗಿದೆ.

ಅದೇ ರೀತಿ ಪಿಜಿ ಸೀಟುಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ 20 ವೈದ್ಯಕೀಯ ಕಾಲೇಜುಗಳ 528 ಸೀಟುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಧನಸಹಾಯ ನೀಡಲಿವೆ. ಇನ್ನುಳಿದ 4 ಸ್ವತಂತ್ರ ಸ್ನಾತಕೋತ್ತರ ಸಂಸ್ಥೆಗಳ 44 ಪಿಜಿ ಸೀಟುಗಳಿಗೆ ಕೇಂದ್ರ ಸರ್ಕಾರವೇ ಶೇ. 100 ರಷ್ಟು ಸಂಪೂರ್ಣ ಧನಸಹಾಯ ನೀಡಲಿದೆ. ಈ ಪ್ರಕ್ರಿಯೆಯನ್ನು ಮುಂದುವರಿಸಲು ಶೀಘ್ರದಲ್ಲೇ ಒಪ್ಪಂದಕ್ಕೆ (MOU) ಸಹಿ ಹಾಕಲಾಗುವುದು ಮತ್ತು ಎಸ್ಎನ್ಎ-ಸ್ಪರ್ಶ್ (SNA-Sparsh) ಖಾತೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ (NEET-UG) ಪರೀಕ್ಷೆ ರದ್ದತಿಗೆ ಸಚಿವರ ಮತ್ತೊಮ್ಮೆ ಬಲವಾದ ಒತ್ತಾಯ:
ಈ ಮಹತ್ವದ ವೈದ್ಯಕೀಯ ಸೀಟುಗಳ ಹೆಚ್ಚಳದ ಬೆನ್ನಲ್ಲೇ, ರಾಜ್ಯ ಸರ್ಕಾರವು ವೈದ್ಯಕೀಯ ಪ್ರವೇಶಾತಿ ಪ್ರಕ್ರಿಯೆಯಲ್ಲಿನ ಮತ್ತೊಂದು ದೊಡ್ಡ ಸುಧಾರಣೆಗೆ ಧ್ವನಿ ಎತ್ತಿದೆ. 2026ನೇ ಸಾಲಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET-UG) ಸಂಪೂರ್ಣವಾಗಿ ರದ್ದುಪಡಿಸಬೇಕು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ನಡೆಸಲು ಮುಕ್ತ ಅವಕಾಶ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಬಲವಾಗಿ ಆಗ್ರಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅತ್ಯಂತ ಪಾರದರ್ಶಕ, ನ್ಯಾಯಸಮ್ಮತ ಮತ್ತು ವಿದ್ಯಾರ್ಥಿ ಸ್ನೇಹಿ ರೀತಿಯಲ್ಲಿ ಹಳೆಯ ಸಿಇಟಿ ವ್ಯವಸ್ಥೆಯನ್ನು ಪುನಃ ಜಾರಿಗೆ ತರಲು ಕೇಂದ್ರ ಸರ್ಕಾರ ಕೂಡಲೇ ಕಾನೂನುಬದ್ಧ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಕೆಇಎ ಮಾದರಿ ಅತ್ಯಂತ ವಿಶ್ವಾಸಾರ್ಹ ಮತ್ತು ಪಾರದರ್ಶಕ:
ಕರ್ನಾಟಕವು ಕಳೆದ ಹಲವು ದಶಕಗಳಿಂದ ಕೆಇಎ ಪ್ರಾಧಿಕಾರದ ಮೂಲಕ ಅತ್ಯಂತ ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಿಕೊಂಡು ಬಂದ ಇತಿಹಾಸವನ್ನು ಹೊಂದಿದೆ. ರಾಜ್ಯದ ಈ ಸಿಇಟಿ ವ್ಯವಸ್ಥೆಯು ಗ್ರಾಮೀಣ, ಮಧ್ಯಮ ವರ್ಗದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಇದು ಕೇವಲ ಪರೀಕ್ಷೆಯಾಗಿರದೆ, ಶುದ್ಧ ಪ್ರತಿಭೆ ಮತ್ತು ಕಠಿಣ ಪರಿಶ್ರಮಕ್ಕೆ ಮನ್ನಣೆ ನೀಡುವ ಅತ್ಯಂತ ವಿಶ್ವಾಸಾರ್ಹ ಮಾದರಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.
ಆದರೆ, ಪ್ರಸ್ತುತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ‘ನೀಟ್’ ಪರೀಕ್ಷೆಯು ದೇಶಾದ್ಯಂತ ಭಾರೀ ವಿವಾದಗಳನ್ನು ಸೃಷ್ಟಿಸುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಯಿಸುವುದು, ಸಂಘಟಿತ ಅಕ್ರಮ ಜಾಲಗಳು, ಅಂಕಗಳ ತಿರುಚಾಟ ಹಾಗೂ ತಾಂತ್ರಿಕ ದೋಷಗಳು ನಿರಂತರವಾಗಿ ಕೇಳಿಬರುತ್ತಿವೆ. ಇವೆಲ್ಲವೂ ನೀಟ್ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಮಾನಸಿಕ ಒತ್ತಡ: ಕೇಂದ್ರದ ವೈಫಲ್ಯ:
ಇತ್ತೀಚಿನ ವರ್ಷಗಳಲ್ಲಿ ನೀಟ್ ಪರೀಕ್ಷೆಯ ಸುತ್ತ ನಡೆದಿರುವ ಸಾಲು ಸಾಲು ಅಕ್ರಮಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಮಾನಸಿಕ ಒತ್ತಡ, ಆತಂಕ ಹಾಗೂ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡಿದೆ. ರಾಷ್ಟ್ರ ಮಟ್ಟದಲ್ಲಿ ಇಷ್ಟು ದೊಡ್ಡ ಪರೀಕ್ಷೆಯನ್ನು ದೋಷರಹಿತವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಮತ್ತು ಎನ್ಟಿಎ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಕಟುವಾಗಿ ಟೀಕಿಸಿದರು.
ವೈದ್ಯಕೀಯ ಕ್ಷೇತ್ರವು ದೇಶದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿದೆ. ಇಂತಹ ಪವಿತ್ರ ಕ್ಷೇತ್ರಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಸಂಪೂರ್ಣ ಭ್ರಷ್ಟಾಚಾರರಹಿತವಾಗಿರಬೇಕು. ಈಗಾಗಲೇ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯಗಳ ಮೇಲೆ ಇಂತಹ ದೋಷಪೂರಿತ ಕೇಂದ್ರೀಕೃತ ವ್ಯವಸ್ಥೆಯನ್ನು ಬಲವಂತವಾಗಿ ಹೇರುವುದು ಸರಿಯಲ್ಲ.
ರಾಜ್ಯಗಳ ಭಾಷಾ ವೈವಿಧ್ಯತೆ, ಪಠ್ಯಕ್ರಮ ಮತ್ತು ವಿದ್ಯಾರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗಳನ್ನು ಆಯಾ ರಾಜ್ಯ ಸರ್ಕಾರಗಳೇ ಉತ್ತಮವಾಗಿ ಅರ್ಥಮಾಡಿಕೊಳ್ಳಬಲ್ಲವು.
ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಗಳ ಪಾತ್ರ ಮತ್ತು ಹಕ್ಕುಗಳನ್ನು ಗೌರವಿಸುವುದು ಭಾರತದ ಸಂವಿಧಾನದ ಫೆಡರಲ್ ವ್ಯವಸ್ಥೆಯ ಆತ್ಮವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್ ರದ್ದುಪಡಿಸಿ ಸಿಇಟಿ ಮರುಜಾರಿಗೆ ತರಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಅಧಿಕೃತ ಪತ್ರ ಬರೆದಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ಪರೀಕ್ಷಾ ಅವ್ಯವಸ್ಥೆಗಳ ಕಾರಣಕ್ಕೆ ಹಾಳುಮಾಡಲು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.



















