ಬೆಂಗಳೂರು, ಮೇ.22 www.bengaluruwire.com: ರಾಜ್ಯಾದ್ಯಂತ ಬರೋಬ್ಬರಿ 50 ಸಾವಿರ ಕೋಟಿ ರೂಪಾಯಿ ಮೌಲ್ಯದ ಅರಣ್ಯ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಯಶವಂತಪುರ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ (MEI) ಸಂಸ್ಥೆಯ ಸಿಎಸ್ಆರ್ (CSR) ನಿಧಿ ಅಡಿಯಲ್ಲಿ, ಬಂಡೀಪುರ ಹಾಗೂ ಮಲೆಮಹದೇಶ್ವರ ಬೆಟ್ಟದ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ನಿರ್ಮಿಸಲಾದ ‘ಸುರಕ್ಷಾ ಕ್ಯಾಬಿನ್’ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಕುಮಾರ್ ಪುಷ್ಕರ್, ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್, ವ್ಯವಸ್ಥಾಪಕ ನಿರ್ದೇಶಕಿ ಸಿ.ಅನಿತಾ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬೆಂಗಳೂರಿನಲ್ಲೇ 10 ಸಾವಿರ ಕೋಟಿ ರೂ. ಮೌಲ್ಯದ ಒತ್ತುವರಿ ತೆರವು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, “ರಾಜ್ಯದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕೇವಲ ಬೆಂಗಳೂರು ನಗರ ವ್ಯಾಪ್ತಿಯಲ್ಲೇ 10 ಸಾವಿರ ಕೋಟಿ ರೂ. ಹಾಗೂ ರಾಜ್ಯಾದ್ಯಂತ ಒಟ್ಟು 50 ಸಾವಿರ ಕೋಟಿ ರೂ. ಬೆಲೆಬಾಳುವ ಒತ್ತುವರಿಯಾದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.
ಮಾನವ-ವನ್ಯಜೀವಿ ಸಂಘರ್ಷ: ಸಚಿವರ ಕಳವಳ
ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ ಸಚಿವರು, “ಹವಾಮಾನ ವೈಪರೀತ್ಯದಿಂದಾಗಿ ಮಳೆ, ಬೆಳೆ ಸರಿಯಾಗಿ ಆಗುತ್ತಿಲ್ಲ. ತಾಪಮಾನ 40ರಿಂದ 48 ಡಿಗ್ರಿವರೆಗೆ ತಲುಪುತ್ತಿರುವುದು ಆತಂಕಕಾರಿ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶಿಷ್ಟ ಜೀವವೈವಿಧ್ಯತೆಯಿದೆ. ಆದರೆ ಇತ್ತೀಚೆಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ದುಬಾರೆ ಆನೆ ಶಿಬಿರದ ಬಳಿ ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವುದು ಅತ್ಯಂತ ಶೋಚನೀಯ,” ಎಂದು ವಿಷಾದ ವ್ಯಕ್ತಪಡಿಸಿದರು.
ಬಂಡೀಪುರದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗಿದ್ದು, ದೇಶದಲ್ಲೇ ರಾಜ್ಯ 2ನೇ ಸ್ಥಾನದಲ್ಲಿದೆ. ಹಾಗೆಯೇ ಆನೆಗಳ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ, ಪ್ರತಿ ವರ್ಷ ಮಾನವ-ಪ್ರಾಣಿ ಸಂಘರ್ಷದಲ್ಲಿ 30-40 ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ ಎಂದರು.
ಅರಣ್ಯ ರಕ್ಷಣೆಗೆ ಎಂಇಐ ಸಂಸ್ಥೆಯ ಸಾಥ್:
ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, “ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ನಮ್ಮ ಸಂಸ್ಥೆಯ ಸಿ.ಎಸ್.ಆರ್. ನಿಧಿಯಡಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ನೀಡಲಾಗಿದೆ. ವನ್ಯಜೀವಿಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಣ್ಯ ಸಿಬ್ಬಂದಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸುರಕ್ಷಾ ಕ್ಯಾಬಿನ್ ನೀಡಲಾಗುತ್ತಿದೆ.
ಅಷ್ಟೇ ಅಲ್ಲದೆ, ಆನೆ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ನೆರವು, ಅರಣ್ಯಂಚಿನ ಶಾಲೆಗಳ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅರಣ್ಯ ಭೂಮಿ ಉಳಿಸುವಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಶ್ರಮ ಅಪಾರವಾಗಿದೆ,” ಎಂದು ಪ್ರಶಂಸಿದರು.




















