ಬೆಂಗಳೂರು, ಜೂ.13 www.bengaluruwire.com: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) 28ನೇ ಘಟಿಕೋತ್ಸವವನ್ನು ಜೂ.16 ರಂದು ಆಯೋಜಿಸಲಾಗಿದೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಶೈಕ್ಷಣಿಕ ಕಾರ್ಯಕ್ರಮ ನಡೆಯಲಿದೆ.
ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 72,741 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಶೈಕ್ಷಣಿಕ ಸಾಧನೆಗೈದ ಒಟ್ಟು 103 ವಿದ್ಯಾರ್ಥಿಗಳು 115 ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ವಿಶೇಷವಾಗಿ, ಬೆಂಗಳೂರಿನ ಪದ್ಮಶ್ರೀ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿ ಸ್ಪಂಧನ ಐ. ಅವರು 3 ಚಿನ್ನದ ಪದಕಗಳೊಂದಿಗೆ ಅತಿ ಹೆಚ್ಚು ಚಿನ್ನದ ಪದಕ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.
ವಿಶ್ವವಿದ್ಯಾಲಯವು ಈ ವರ್ಷ ಶೇಕಡಾ 89.22ರಷ್ಟು ಒಟ್ಟಾರೆ ಫಲಿತಾಂಶ ದಾಖಲಿಸಿದ್ದು, ಇದು ಆರೋಗ್ಯ ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿನ ವಿಶ್ವವಿದ್ಯಾಲಯದ ಗುಣಮಟ್ಟ ಹಾಗೂ ಸಾಧನೆಯನ್ನು ಎತ್ತಿ ತೋರಿಸುತ್ತದೆ.
ಘಟಿಕೋತ್ಸವದ ಅಧ್ಯಕ್ಷತೆಯನ್ನು ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯಮಂತ್ರಿಗಳಾದ

ಡಿ.ಕೆ. ಶಿವಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹಾಗೂ ಕುಲಪತಿಗಳಾದ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿರುವರು.
ಗೌರವ ಡಾಕ್ಟರೇಟ್ ಪ್ರದಾನ:
ಇದೇ ವಿಶೇಷ ಸಂದರ್ಭದಲ್ಲಿ ವೈದ್ಯಕೀಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರೊ. (ಡಾ.) ನೈಲಾಡಿ ಶ್ರೀಧರ ಶೆಟ್ಟಿ, ಡಾ. ಹರ್ಷಿಣಿಗಿ ವೀರಭದ್ರಪ್ಪ ಹಾಗೂ ಡಾ. ಎ.ಸಿ. ಷಣ್ಮುಗಂ ಅವರಿಗೆ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ‘ಡಾಕ್ಟರ್ ಆಫ್ ಸೈನ್ಸ್’ (Honoris Causa) ಪದವಿ ನೀಡಿ ಗೌರವಿಸಲಾಗುವುದು.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.





















