ಬೆಂಗಳೂರು, ಜೂ.16 www.bengaluruwire.com: ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಕೆ.ಆರ್. ಮಾರುಕಟ್ಟೆಯಲ್ಲಿ (KR Market) ಮಳಿಗೆಗಳ ಬಾಡಿಗೆಯನ್ನು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ನೀಡಬಾರದು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ವ್ಯಾಪಾರಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಾರುಕಟ್ಟೆಯ ತಲಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಬೇರೆ ಊರುಗಳಿಂದ ಹಣ್ಣು, ತರಕಾರಿ ತರುವ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರು ಹಾಗೂ ವ್ಯಾಪಾರಿಗಳ ಅಹವಾಲುಗಳನ್ನು ಆಲಿಸಿ ಮಾತನಾಡಿ, ರೈತರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವಿಶೇಷ ವಿನ್ಯಾಸದ (Design) ಮಾರಾಟ ಸ್ಥಳಗಳನ್ನು ಗುರುತಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಕುರಿತ ಅಂತಿಮ ಯೋಜನೆಯನ್ನು ಮುಖ್ಯ ಆಯುಕ್ತರು, ರೈತ ಮುಖಂಡರು ಹಾಗೂ ವ್ಯಾಪಾರಿಗಳೊಂದಿಗೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಕೆ.ಆರ್.ಮಾರುಕಟ್ಟೆಯಲ್ಲಿ ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಅಗ್ನಿ ಅವಘಡ ತಡೆಗೆ ‘ಫೈರ್ ಆಡಿಟ್’ ಮತ್ತು ಒತ್ತುವರಿ ತೆರವು:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ತಕ್ಷಣವೇ ‘ಅಗ್ನಿ ಪರಿಶೋಧನೆ’ (Fire Audit) ನಡೆಸಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನಗಳು ಸುಲಭವಾಗಿ ಸಂಚರಿಸಲು ಅನುವಾಗುವಂತೆ ಮಳಿಗೆಗಳ ಮುಂಭಾಗದ ಒತ್ತುವರಿ ಹಾಗೂ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗುವುದು. ಈ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಆಯುಕ್ತರು ಸ್ಪಷ್ಟಪಡಿಸಿದರು.
ಮಧ್ಯವರ್ತಿಗಳಿಗೆ ಹಣ ನೀಡಿದರೆ ಮಳಿಗೆ ಜಪ್ತಿ:
ಪಾಲಿಕೆಗೆ ಪಾವತಿಸಬೇಕಾದ ಬಾಡಿಗೆ ಶುಲ್ಕವನ್ನು ನೇರವಾಗಿ ನಗರ ಪಾಲಿಕೆಗೆ ಮಾತ್ರ ಪಾವತಿಸಬೇಕು. ಯಾವುದೇ ಮಧ್ಯವರ್ತಿಗಳು ಅಥವಾ ಅನಧಿಕೃತ ವ್ಯಕ್ತಿಗಳಿಗೆ ಹಣ ನೀಡಿದರೆ ಅದನ್ನು ಮಾನ್ಯ ಮಾಡುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಅಂಗಡಿ ಅಥವಾ ಮಳಿಗೆಯ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಮಳಿಗೆಯನ್ನು ಮುಚ್ಚಲಾಗುವುದು (Seize) ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತ ಮುಖಂಡರು ಮತ್ತು ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






















