ಬೆಂಗಳೂರು, ಜೂ.20 www.bengaluruwire.com: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಹಾಗೂ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಹೋರಾಟ ಬಿರುಸುಗೊಂಡು ರಾಷ್ಟ್ರದ ಗಮನ ಪಡೆದುಕೊಂಡಿದೆ. ಇದೇ ವೇಳೆ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ (ಜೂನ್ 21) ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ಅಂಚಿಪುರ ಗ್ರಾಮದಿಂದ ಈ ಪಾದಯಾತ್ರೆ ಆರಂಭವಾಗಲಿದೆ. ಅಂಚಿಪುರ ಕಾಲೊನಿ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಸೇರಿದಂತೆ 8 ಗ್ರಾಮಗಳ ಮೂಲಕ ಹಾದುಹೋಗಿ, ಅಂತಿಮವಾಗಿ ಹೊಸೂರಿನಲ್ಲಿ ಬೃಹತ್ ಬಹಿರಂಗ ಸಭೆಯೊಂದಿಗೆ ಈ ಹೋರಾಟ ಸಮಾರೋಪಗೊಳ್ಳಲಿದೆ. ಪಾದಯಾತ್ರೆಯಲ್ಲಿ ಸಾವಿರಾರು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಏನಿದು ಸಮಸ್ಯೆ? ರೈತರ ಆತಂಕವೇನು?:
ಬಿಡದಿ ಟೌನ್ಶಿಪ್ (Bidadi Township) ನಿರ್ಮಾಣಕ್ಕಾಗಿ ಸುತ್ತಮುತ್ತಲಿನ 518 ಎಕರೆ ಕೃಷಿ ಭೂಮಿಗೆ ಸರ್ಕಾರ ಈಗಾಗಲೇ ಅಂತಿಮ ಅಧಿಸೂಚನೆ (Final Notification) ಹೊರಡಿಸಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಬರೋಬ್ಬರಿ 7,481 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಸ್ಥಳೀಯ 755 ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಪ್ರತಿದಿನ 6 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಹೈನುಗಾರಿಕೆ, ರೇಷ್ಮೆ ಹಾಗೂ ತೋಟಗಾರಿಕಾ ಬೆಳೆಗಳು ನಾಶವಾಗಲಿವೆ. ಅಷ್ಟೇ ಅಲ್ಲದೆ, 10 ಲಕ್ಷಕ್ಕೂ ಹೆಚ್ಚು ಹಸಿರು ವೃಕ್ಷಗಳಿಗೆ ಕೊಡಲಿ ಪೆಟ್ಟು ಬೀಳಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

450 ದಿನಗಳ ನಿರಂತರ ಹೋರಾಟ:
“ನಮ್ಮ ಭೂಮಿ ನಮ್ಮ ಹಕ್ಕು. ರೈತರ ಬದುಕು ಮತ್ತು ಕೃಷಿ ಚಟುವಟಿಕೆಗಳನ್ನು ಉಳಿಸಲು ಈ ಹೋರಾಟ ಅನಿವಾರ್ಯವಾಗಿದೆ. ಕಳೆದ 450 ದಿನಗಳಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾದ ಹೋರಾಟವಲ್ಲ, ರೈತರ ಉಳಿವಿಗಾಗಿ ನಡೆಯುತ್ತಿರುವ ಪಕ್ಷಾತೀತ ಬಂಡಾಯ. ಸರ್ಕಾರ ತಕ್ಷಣವೇ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.
ರೈತ ಸಂಘಟನೆಗಳ ಬೆಂಬಲ:
“ನಮ್ಮ ನೆಲದ ಮೇಲೆ ನಮ್ಮದೇ ಅಧಿಕಾರ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹಾಗೂ ರೈತರಿಗೆ ನ್ಯಾಯ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಜೂನ್ 21ರಂದು ನಡೆಯುವ ಈ ಪಾದಯಾತ್ರೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು” ಎಂದು ನಿಖಿಲ್ ಕರೆ ನೀಡಿದ್ದಾರೆ. ಈ ಹೋರಾಟಕ್ಕೆ ವಿವಿಧ ರೈತ ಸಂಘಟನೆಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದು, ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.




















