ಬೆಂಗಳೂರು, ಜು.09 www.bengaluruwire.com: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (BUWJ)ವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಪತ್ರಿಕಾ ದಿನಾಚರಣೆ-2026 ಹಾಗೂ ಹಿರಿಯ ಪತ್ರಕರ್ತರಿಗೆ ಜು.11ರಂದು ಸನ್ಮಾನ ಸಮಾರಂಭ’ವನ್ನು ಹಮ್ಮಿಕೊಂಡಿದೆ.
ಬೆಳಗ್ಗೆ 11 ಗಂಟೆಗೆ ವಿಜಯನಗರದ ಹೊಸಹಳ್ಳಿಯಲ್ಲಿರುವ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಪ್ರಮುಖ ಗಣ್ಯರ ಉಪಸ್ಥಿತಿ ಮತ್ತು ಉದ್ಘಾಟನೆ:
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಿಜಯನಗರದ ಆದಿಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ಸದಸ್ಯರಿಗೆ ಗುರುತಿನ ಕಾರ್ಡ್ಗಳನ್ನು ವಿತರಿಸಲಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಶಾಸಕ ಹಾಗೂ ಮಾಜಿ ಸಚಿವ ಕೆ. ಗೋಪಾಲಯ್ಯ ಅವರು ಕಲಾ ತಂಡಗಳ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಸೋಮಶೇಖರ ಗಾಂಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಜಯವಾಣಿ ದಿನಪತ್ರಿಕೆಯ ಸಂಪಾದಕ ಕೆ.ಎನ್. ಚನ್ನೇಗೌಡ ದಿಕ್ಸೂಚಿ ನುಡಿಗಳನ್ನಾಡಲಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಿತನುಡಿಗಳನ್ನು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನು ಆಡಲಿದ್ದಾರೆ.
10 ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ:
ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ 10 ಹಿರಿಯ ಪತ್ರಕರ್ತರನ್ನು ವಿಧಾನಪರಿಷತ್ ಸದಸ್ಯ ಜವರಾಯಿಗೌಡ ಅವರ ಹಸ್ತದಿಂದ ಸನ್ಮಾನಿಸಲಾಗುವುದು. ಸನ್ಮಾನಿತರ ಪಟ್ಟಿ ಇಂತಿದೆ:
ಕೆ.ಎನ್. ನಾಗೇಶ್ ಕುಮಾರ್ – ಚಲನಚಿತ್ರ ಛಾಯಾಗ್ರಾಹಕರು
ಪ್ರಭುದೇವ ಶಾಸ್ತ್ರಿಮಠ – ಸಹಾಯಕ ಸಂಪಾದಕರು, ವಿಜಯವಾಣಿ
ರಂಗನಾಥ ಭಾರದ್ವಾಜ – ಮುಖ್ಯ ನಿರ್ಮಾಪಕರು, ಟಿವಿ9 ಕನ್ನಡ
ಕೀರ್ತಿ ಪ್ರಸಾದ್ – ವಿಶೇಷ ಪ್ರತಿನಿಧಿ, ವಿಜಯ ಕರ್ನಾಟಕ
ಮಧು ಎಂ. ಉತ್ತುವಳ್ಳಿ – ಔಟ್ಪುಟ್ ಎಡಿಟರ್, ನ್ಯೂಸ್18 ಕನ್ನಡ
ಐ.ಎಚ್.ಸಂಗಮದೇವ್ – ಹಿರಿಯ ಪತ್ರಕರ್ತರು
ಹೆಚ್. ಸಿ. ಶೋಭ – ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ
ಬಿ. ಎ. ಮಹೇಂದ್ರ – ಸಂಪಾದಕರು, ಸಂಜೆ ಸಮಾಚಾರ
ವೀರನ ಗೌಡ – ಉಪ ಸಂಪಾದಕರು, ಪೊಲೀಸ್ ನ್ಯೂಸ್
ಜಿ.ವಿ. ರಾಮರಾವ್ – ಪ್ರಧಾನ ಸಂಪಾದಕರು, ಅಮೂಲ್ಯವಾಣಿ
ಕಾರ್ಯಕ್ರಮದಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕ.ಕಾ.ಪ.ಸಂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಬೆಂಗಳೂರು ಘಟಕದ ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಮಾಯಣ್ಣ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಪತ್ರಕರ್ತ ಮಿತ್ರರು, ಛಾಯಾಗ್ರಾಹಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಆರ್.ರವೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.




















