ಬೆಂಗಳೂರು, ಜು.20 www.bengaluruwire.com: ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ತಡೆಗಟ್ಟಲು ಪ್ರತಿಯೊಂದು ಕ್ಷೇತ್ರದ ಜನಪ್ರತಿನಿಧಿಗಳನ್ನು (ಶಾಸಕರು) ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ.
ಸೋಮವಾರ ಬೆಂಗಳೂರಿನ ‘ಆರೋಗ್ಯ ಸೌಧ’ದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು, ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸ್ಥಳೀಯ ಮಟ್ಟದ ಮೇಲ್ವಿಚಾರಣೆ ಅಗತ್ಯವಾಗಿರುವುದರಿಂದ, ಪ್ರತಿ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಈ ಸಮಿತಿಗಳು ನೆರವಾಗಲಿವೆ ಎಂದು ಸಚಿವರು ತಿಳಿಸಿದರು.
ಎಬೋಲಾ ಹರಡುವಿಕೆ ತಡೆಗೆ ಏರ್ಪೋರ್ಟ್ಗಳಲ್ಲಿ ಸ್ಕ್ರೀನಿಂಗ್:

ಜಾಗತಿಕ ಮಟ್ಟದಲ್ಲಿ ಎಬೋಲಾ (Ebola) ಸೋಂಕಿನ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆಫ್ರಿಕಾ ಖಂಡದ ದೇಶಗಳಾದ ಕಾಂಗೋ ಮತ್ತು ಉಗಾಂಡಾದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ (ಸ್ಕ್ರೀನಿಂಗ್) ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಖಾದರ್ ಅವರು ಹೇಳಿದರು.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಾಜ್ಯದಲ್ಲಿ ಮಲೇರಿಯಾ ಪ್ರಕರಣಗಳು ಶೇ 70ರಷ್ಟು ಹಾಗೂ ಡೆಂಗೀ ಪ್ರಕರಣಗಳು ಶೇ 33ರಷ್ಟು ಕಡಿಮೆಯಾಗಿವೆ ಎಂದು ಸಚಿವರು ಮಾಹಿತಿ ನೀಡಿದರು. ಮನೆಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಗತ್ಯವಿರುವ ಲ್ಯಾಬ್ ಟೆಕ್ನಿಷಿಯನ್ ಮತ್ತು ಫಾರ್ಮಸಿಸ್ಟ್ಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP) ಅಧಿಕೃತ ಡ್ಯಾಶ್ಬೋರ್ಡ್ ಅಂಕಿಅಂಶಗಳ ಪ್ರಕಾರ, 2026ರ ಮೇ 17 ರಿಂದ ಜುಲೈ 18 ರವರೆಗೆ ಒಟ್ಟು 283 ಪ್ರಯಾಣಿಕರನ್ನು ಎಬೋಲಾ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. ಈ ಪೈಕಿ ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ (0 Symptomatic) ಮತ್ತು 149 ಪ್ರಯಾಣಿಕರು 21 ದಿನಗಳ ಕಣ್ಗಾವಲು ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ರಾಜ್ಯದಲ್ಲಿನ ಕೋವಿಡ್ ಮತ್ತು ಜಲಜನ್ಯ ರೋಗಗಳ ಸ್ಥಿತಿಗತಿ:
ಆರೋಗ್ಯ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಇತರ ಸಾಂಕ್ರಾಮಿಕ ರೋಗಗಳ ಪ್ರಮಾಣ ನಿಯಂತ್ರಣದಲ್ಲಿದೆ:
ಕೋವಿಡ್-19: 2026ರ ಜನವರಿ 1 ರಿಂದ ಜುಲೈ 17 ರವರೆಗೆ ರಾಜ್ಯಾದ್ಯಂತ 4,550 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 166 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ (121) ವರದಿಯಾಗಿವೆ.
ಟೈಫಾಯ್ಡ್ ಹಾಗೂ ಕಾಲರಾ:
ಜಲಜನ್ಯ ರೋಗಗಳಾದ ಟೈಫಾಯ್ಡ್ಗೆ ಸಂಬಂಧಿಸಿದಂತೆ ಈ ವರ್ಷದ ಜೂನ್ ಅಂತ್ಯದವರೆಗೆ 132,414 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 14,766 ಪ್ರಕರಣಗಳು ದೃಢಪಟ್ಟಿವೆ. ಅದೇ ರೀತಿ 645 ಜನರನ್ನು ಕಾಲರಾ ಪರೀಕ್ಷೆಗೆ ಒಳಪಡಿಸಲಾಗಿದ್ದು ಕೇವಲ 4 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಹೆಪಟೈಟಿಸ್-ಎ 268 ಪ್ರಕರಣಗಳು ವರದಿಯಾಗಿವೆ.
ಆರೋಗ್ಯ ಇಲಾಖೆಯ ಮುಂಜಾಗ್ರತಾ ಕ್ರಮಗಳು:
ಋತುಮಾನದ ಜ್ವರ ಮತ್ತು ಇತರೆ ಕಾಯಿಲೆಗಳನ್ನು ಎದುರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಪಿಪಿಇ (PPE) ಕಿಟ್ಗಳು, ಎನ್-95 ಮಾಸ್ಕ್ಗಳು ಹಾಗೂ ಲೈಫ್-ಸೇವಿಂಗ್ ಔಷಧಗಳನ್ನು (Oseltamivir) ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ.
ಕುಡಿಯುವ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ ಕುಡಿಯಬೇಕು, ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಹಾಗೂ ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮಾಧ್ಯಮಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




















