ಬೆಂಗಳೂರು, ಜು.24 www.bengaluruwire.com: ಶಿವಾಜಿನಗರ ಬಸ್ ನಿಲ್ದಾಣದ ಬಳಿ ದಶಕಗಳಿಂದ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ.
ಈ ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದರೂ, ಹಿಂದೆ ಸರಿಯದೆ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳನ್ನು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ವಿಕಾಸಸೌಧದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.
’ಬೆಂಗಳೂರು ವೈರ್’ ವರದಿ ಇಂಪ್ಯಾಕ್ಟ್:
ಶಿವಾಜಿನಗರ ಬಸ್ ನಿಲ್ದಾಣದ ಬಳಿ ಹಲವು ವರ್ಷಗಳಿಂದ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿ ಪೆಟ್ಟಿಗೆ ಅಂಗಡಿಗಳನ್ನು ನಿರ್ಮಿಸಲಾಗಿತ್ತು. ಇದರಿಂದ ಪಾದಚಾರಿಗಳಿಗೆ ಹಾಗೂ ಬಸ್ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯ ಕುರಿತು ಬೆಂಗಳೂರು ವೈರ್ (Bengaluru Wire) ರಿಯಾಲಿಟಿ ಚೆಕ್ ನಡೆಸಿತ್ತು. ಜುಲೈ 20ರಂದು ಜಿಪಿಎಸ್ ಆಧಾರಿತ ದೃಶ್ಯಗಳ ಸಮೇತ ಎಕ್ಸ್ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. ಇದನ್ನೂ ಓದಿ: https://bengaluruwire.com/2026/07/21/shivajinagar-footpath-eviction-bbmp-officials-attacked/

ಈ ವರದಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು ಜುಲೈ 21ರಂದು ಜೆಸಿಬಿ ಯಂತ್ರಗಳೊಂದಿಗೆ ತೆರವು ಕಾರ್ಯಾಚರಣೆಗೆ ಮುಂದಾದರು. ಈ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿತ್ತು. ಈ ಸುದ್ದಿ ಕೂಡಲೇ ರಾಷ್ಟ್ರೀಯ ಮಟ್ಟದ ಸುದ್ದಿವಾಹಿನಿಗಳಲ್ಲಿ ಬಿತ್ತರವಾಗಿ ಭಾರಿ ಸಂಚಲನ ಮೂಡಿಸಿತ್ತು. ಹಲ್ಲೆ ಪ್ರಕರಣದ ಬಗ್ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ 11 ಮಂದಿಯನ್ನು ಬಂಧಿಸಲಾಯಿತು.
ಇದಾದ ಬಳಿಕ, ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ಮುಂದುವರಿಸಿ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ತೆರವುಗೊಳಿಸಿದರು. ಜುಲೈ 22 ರಂದು ಕಾರ್ಯಾಚರಣೆ ನಡೆಸಿದ ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನು ನೋಡಿ: https://www.instagram.com/reel/DbDlZtOoxb6/?igsh=MW9vYjNuY2V5dGM2Mw==
ಅಧಿಕಾರಿಗಳ ಬೆಂಬಲಕ್ಕೆ ನಿಂತ ಸಚಿವರು ಹಾಗೂ ಮೇಲಧಿಕಾರಿಗಳು:
ಈ ಇಡೀ ಕಾರ್ಯಾಚರಣೆಯಲ್ಲಿ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಅಭಿವೃದ್ಧಿ ಆಯುಕ್ತ ವೆಂಕಟಾಚಲಪತಿ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಯ ಬೆಂಬಲಕ್ಕೆ ದೃಢವಾಗಿ ನಿಂತಿದ್ದರು.
ನಿಮ್ಮಂತಹ ಅಧಿಕಾರಿಗಳೇ ಸರ್ಕಾರಕ್ಕೆ ನಿಜವಾದ ಶಕ್ತಿ: ಕೃಷ್ಣ ಬೈರೇಗೌಡ
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
”ಸರ್ಕಾರ ಎಷ್ಟೇ ಯೋಜನೆ ರೂಪಿಸಿದರೂ, ಅದನ್ನು ಜನರಿಗೆ ತಲುಪಿಸಲು ನಿಷ್ಠಾವಂತ ಅಧಿಕಾರಿಗಳೇ ಅಡಿಪಾಯ. ಸಮಾಜಘಾತಕ ಶಕ್ತಿಗಳ ಜೀವ ಬೆದರಿಕೆಗೂ ಹೆದರದೆ, ಶಿವಾಜಿನಗರದ ಫುಟ್ಪಾತ್ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಮ್ಮ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಯೋಧರಿಗೆ ಅಭಿನಂದನೆಗಳು. ಇಂದು ನನ್ನ ಕಚೇರಿಯಲ್ಲಿ ಈ ಕರ್ತವ್ಯನಿಷ್ಠ ಅಧಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು. ನಿಮ್ಮಂತಹ ಅಧಿಕಾರಿಗಳೇ ನಮ್ಮ ಇಲಾಖೆಗೆ ಮತ್ತು ಸರ್ಕಾರಕ್ಕೆ ನಿಜವಾದ ಶಕ್ತಿ.” – ಕೃಷ್ಣ ಬೈರೇಗೌಡ, ಸಚಿವರು, ಗ್ರೇಟರ್ ಬೆಂಗಳೂರು ನಗರ ಅಭಿವೃದ್ಧಿ ಇಲಾಖೆ.
ಸನ್ಮಾನಿತರ ವಿವರ:
ಸಚಿವರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಳಕಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು:
ಆತಿಫ್ – ಕಾರ್ಯಾಪಲಕ ಅಭಿಯಂತರರು
ಮಾಧವರಾವ್ – ಸಹಾಯಕ ಕಾರ್ಯಪಾಲಕ ಅಭಿಯಂತರರು
ಸಾವಿತ್ರಿ – ಸಹಾಯಕ ಕಾರ್ಯಪಾಲಕ ಅಭಿಯಂತರರು
ರುಚಿತಾ – ಸಹಾಯಕ ಅಭಿಯಂತರರು
ಗೌತಮ್ – ಇಂಜಿನಿಯರ್
ಜೆಸಿಬಿ ಚಾಲಕನ ಪ್ರತಿನಿಧಿ
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಜಿಬಿಎ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಉಪಸ್ಥಿತರಿದ್ದರು.




















