ಮೈಸೂರು, ಆ.09 www.bengaluruwire.com: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಯಾವುದೇ ಕಾರಣಕ್ಕೂ ಇನ್ನು ಮುಂದೆ ಟೋಲ್ ಕಟ್ಟಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ನೈಸ್ ಕಂಪನಿಯು ಕಳೆದ ಹಲವು ವರ್ಷಗಳಲ್ಲಿ ₹2,000 ಕೋಟಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಟೋಲ್ ರೂಪದಲ್ಲಿ ವಸೂಲಿ ಮಾಡಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಭಾನುವಾರ ಬೆಳಿಗ್ಗೆ ಮೈಸೂರಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಹೈಕೋರ್ಟ್ ಅಸಮಾಧಾನ ಹಾಗೂ ಅಕ್ರಮದ ಬಟಾಬಯಲು:

“ನೈಸ್ ಯೋಜನೆ ಕುರಿತು ರಾಜ್ಯ ಹೈಕೋರ್ಟ್ ಈಗಾಗಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಇದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ” ಎಂದು ಸ್ವತಃ ನ್ಯಾಯಾಲಯವೇ ಹೇಳಿದೆ. ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರೇ ನೈಸ್ ಕಂಪನಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಇಷ್ಟಾದರೂ ಈ ಸರ್ಕಾರಕ್ಕೆ ಇನ್ನೂ ಜ್ಞಾನೋದಯವಾಗಿಲ್ಲ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ:
ನೈಸ್ ರಸ್ತೆ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಬಾಲಿಶವಾಗಿವೆ ಎಂದು ಕುಮಾರಸ್ವಾಮಿ ಟೀಕಿಸಿದರು. “ಮಾಹಿತಿ ಇಲ್ಲದೆ ಬಾಯಿ ಚಪಲಕ್ಕೆ ಅವರು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಟೋಲ್ ಸಂಗ್ರಹ ಮಾಡುತ್ತಿಲ್ಲ, ಅದು ರಾಜ್ಯ ಸರ್ಕಾರದ ಅಧೀನದ ಯೋಜನೆ. ಅಲ್ಲಿ ಯಾರು ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬ ಕನಿಷ್ಠ ಅರಿವು ಕೂಡ ಅವರಿಗಿಲ್ಲ,” ಎಂದು ಕಟುವಾಗಿ ನುಡಿದರು.
ಸಿಎಂ ವಿರುದ್ಧ ಬಿಡದಿ ಭೂಮಿ ಲೂಟಿ ಆರೋಪ:
ಕಾಂಗ್ರೆಸ್ ನಾಯಕರು ಜನರನ್ನು ವಂಚಿಸುತ್ತಿದ್ದು, ಬಣ್ಣಬಣ್ಣದ ಜಾಹೀರಾತುಗಳನ್ನು ನೀಡಿ ಯಾಮಾರಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವರು ಸರ್ವನಾಶವಾಗಲಿದ್ದಾರೆ ಎಂದು ಎಚ್ಚರಿಸಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಗುಡುಗಿದರು.
“ಬಿಡದಿಯ ಭೂಮಿ ಫಲವತ್ತಾದ ಭೂಮಿ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿ ಹೇಳಲಾಗಿದೆ. 2007ರಲ್ಲೇ ಬಿಡದಿ ಟೌನ್ಶಿಪ್ ಯೋಜನೆಯನ್ನು ನಿಲ್ಲಿಸುವುದಾಗಿ ನಾನು ಸದನದಲ್ಲಿ ಹೇಳಿದ್ದೆ. ಆದರೆ ಅಂದು ಅದನ್ನು ವಿರೋಧಿಸಿದ್ದ ಇಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದೀಗ ಬಿಡದಿ ಭೂಮಿ ಲೂಟಿ ಮಾಡಲು ಹೊರಟಿದ್ದಾರೆ,” ಎಂದು ದಾಖಲೆಗಳ ಸಮೇತ ಆರೋಪಿಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಕೆಲ ಸಚಿವರನ್ನು ಕೇವಲ ತಮ್ಮನ್ನು ಹಾಗೂ ಜೆಡಿಎಸ್ ಪಕ್ಷವನ್ನು ನಿಂದಿಸಲೇಂದೇ ಇಟ್ಟುಕೊಳ್ಳಲಾಗಿದೆ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ ಎಂದು ಸಚಿವರು ಲೇವಡಿ ಮಾಡಿದರು.
ಚಾಮುಂಡೇಶ್ವರಿ ದರ್ಶನ ಹಾಗೂ ಮೈಲಾರಿ ಹೋಟೆಲ್ನಲ್ಲಿ ಉಪಹಾರ:
ಬಿಡದಿ ಪಾದಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ಮೈಸೂರಿನ ನಜರ್ಬಾದ್ನಲ್ಲಿರುವ ಪ್ರಸಿದ್ಧ ‘ಮೈಲಾರಿ ಹೋಟೆಲ್’ಗೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು, ಮಹಿಳೆಯರು ಹಾಗೂ ಮಕ್ಕಳು ಸಚಿವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಸಾರ್ವಜನಿಕರ ಪ್ರೀತಿಗೆ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದರು.




















