ಬೆಂಗಳೂರು, ಆ.21 www.bengaluruwire.com: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ESA) ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸುವ ಮೂಲಕ ತಿರಸ್ಕರಿಸಲಿದೆ ಎಂದು ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯ ನಿಯಮ 69ರ ಅಡಿಯಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಹೆಚ್.ಡಿ. ತಮ್ಮಯ್ಯ ಹಾಗೂ ಬಿ.ಕೆ. ಸಂಗಮೇಶ್ ಅವರು ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಉತ್ತರಿಸಿದ ಸಚಿವರು, ಕೇಂದ್ರದ ಕರಡು ಅಧಿಸೂಚನೆಯಿಂದ ರಾಜ್ಯದ ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ನಿಲುವು ಕೈಗೊಳ್ಳಲಾಗಿದೆ ಎಂದರು.
ರಾಜ್ಯದ ನಿಲುವು ಮತ್ತು ವಿವರಗಳು:
ವ್ಯಾಪ್ತಿ: ಕಸ್ತೂರಿ ರಂಗನ್ ವರದಿ ಅನ್ವಯ ಕರ್ನಾಟಕದ 10 ಜಿಲ್ಲೆಗಳ ಒಟ್ಟು 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರ ಗುರುತಿಸಿದೆ.

ಆಕ್ಷೇಪಣೆಗೆ ಗಡುವು: ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ ಹೊರಡಿಸಿರುವ 7ನೇ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶವಿದ್ದು, ರಾಜ್ಯವು ಅಧಿಕೃತವಾಗಿ ವಿರೋಧ ದಾಖಲಿಸಲಿದೆ.
ಜನಜೀವನಕ್ಕೆ ರಕ್ಷಣೆ: ಕೃಷಿ, ತೋಟಗಾರಿಕೆ ಮತ್ತು ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಜನರನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.
ಹಿಂದಿನ ನಿರ್ಣಯ: ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ನಿರಾಕರಿಸಿ ಹೊರಡಿಸಲಾಗಿದ್ದ ಹಿಂದಿನ 6 ಕರಡು ಅಧಿಸೂಚನೆಗಳನ್ನೂ ರಾಜ್ಯ ಸಚಿವ ಸಂಪುಟ ಸಭೆಯು ಸಂಪೂರ್ಣವಾಗಿ ತಿರಸ್ಕರಿಸಿತ್ತು.
ಈ ಪ್ರದೇಶಗಳು ಈಗಾಗಲೇ ರಕ್ಷಿತ ಅರಣ್ಯಗಳ ವ್ಯಾಪ್ತಿಯಲ್ಲಿದ್ದು, ಹೆಚ್ಚುವರಿ ನಿರ್ಬಂಧಗಳು ಜನರ ಜೀವನೋಪಾಯಕ್ಕೆ ಧಕ್ಕೆ ತರುತ್ತವೆ ಎಂಬ ಕಾರಣಕ್ಕೆ ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. (AI ಚಿತ್ರ)
















