ಬೆಂಗಳೂರು, ಆ.30 www.bengaluruwire.com : ಬಿಡಿಎ ನಾಡಪ್ರಭು ಕೆಂಪೇಗೌಡ ಬಡಾವಣೆಯ ಪ್ರಮುಖ ಆರ್ಟಿರಿಯಲ್ ರಸ್ತೆಗೆ ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಇತ್ತೀಚೆಗೆ ಪತ್ರ ಬರೆದಿದ್ದಾರೆ.
ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆಯು ಈ ಹಿಂದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿ, ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ 10.7 ಕಿ.ಮೀ ಉದ್ದದ 330 ಅಡಿ ಅಗಲದ ಪ್ರಮುಖ ಆರ್ಟಿರಿಯಲ್ ರಸ್ತೆಯನ್ನು ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮೇಲೆ ಹತ್ತುವ ಮತ್ತು ಇಳಿಯುವ ರಾಂಪ್ಗಳ ಮೂಲಕ ಸಂಪರ್ಕ ಕಲ್ಪಿಸುವಂತೆ ಕೋರಿತ್ತು.
ಈ ರಸ್ತೆಯು ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯ ನಡುವಿನ ಪ್ರಮುಖ ಕೊಂಡಿಯಾಗಿದ್ದು, ಇದು ಚಲ್ಲಘಟ್ಟ ಮೆಟ್ರೋ ನಿಲ್ದಾಣ, ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಇತರ ಪ್ರಮುಖ ಸ್ಥಳಗಳಿಗೆ ಸುಲಭ ಪ್ರವೇಶವನ್ನು ಒದಗಿಸುತ್ತದೆ.
ಪ್ರಸ್ತುತ, ವಾಹನ ಸವಾರರು ಕುಂಬಳಗೋಡು ಅಥವಾ ಬಿಡದಿಯಲ್ಲಿ ಮಾತ್ರ ಹೆದ್ದಾರಿಯನ್ನು ಪ್ರವೇಶಿಸಲು ಅಥವಾ ನಿರ್ಗಮಿಸಲು ಸಾಧ್ಯವಾಗುತ್ತಿದ್ದು, ಇದರಿಂದ ಸಾಕಷ್ಟು ಸುತ್ತು-ಬಳಸಿ, ಸಮಯ ವ್ಯರ್ಥ ಮತ್ತು ಇಂಧನ ನಷ್ಟವಾಗುತ್ತಿದೆ. ಅಲ್ಲದೆ, ನೇರ ಸಂಪರ್ಕ ಇಲ್ಲದೆ ಇರುವುದು ಈ ಪ್ರದೇಶದ ನಿವಾಸಿಗಳು, ಪ್ರಯಾಣಿಕರು ಮತ್ತು ತುರ್ತು ಸೇವೆಗಳಿಗೆ ಗಣನೀಯ ತೊಂದರೆ ಉಂಟುಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ, ಸಚಿವೆ ಶೋಭಾ ಕರಂದ್ಲಾಜೆ ಅವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು, ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲಿನಿಂದ ಕೆಳಗೆ ಇಳಿಯುವ ರಾಂಪ್ಗಳ ಮೂಲಕ ಆರ್ಟಿರಿಯಲ್ ರಸ್ತೆಯನ್ನು, ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನೇರವಾಗಿ ಸಂಪರ್ಕಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು.
ಅಂತಹ ಸಂಪರ್ಕವು ಪ್ರವೇಶ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಸರ್ವೀಸ್ ರಸ್ತೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಪ್ರದೇಶದ ನಿವಾಸಿಗಳು ಮತ್ತು ಸಂಸ್ಥೆಗಳಿಗೆ ಒಟ್ಟಾರೆ ಸುಗಮ ಸಂಚಾರಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದರು.
ಸಚಿವರ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಗಡ್ಕರಿ, ಈ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ಕ್ರಮವು ಬೆಂಗಳೂರಿನ ಈ ಪ್ರಮುಖ ಪ್ರದೇಶದಲ್ಲಿ ದೀರ್ಘಕಾಲದ ಸಂಚಾರ ಸಮಸ್ಯೆಯನ್ನು ಪರಿಹರಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.























