ಬೆಂಗಳೂರು, ನ.11 www.bengaluruwire.com : ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ ಲಾಲ್ ಕಿಲಾ (ಕೆಂಪುಕೋಟೆ) ಪ್ರದೇಶದಲ್ಲಿ ಸೋಮವಾರ ಸಂಜೆ ನಡೆದ ಭೀಕರ ಕಾರ್ ಸ್ಫೋಟದ ಹಿನ್ನೆಲೆಯಲ್ಲಿ, ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ತಕ್ಷಣದಿಂದಲೇ ಹೈ ಅಲರ್ಟ್ (High Alert) ಘೋಷಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಇಲಾಖೆಯು ಮಹತ್ವದ ಪ್ರದೇಶಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದೆ.
ಸೋಮವಾರ ಸಂಜೆ ನಡೆದ ದುರಂತದ ವಿವರ :
ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಚಾಂದಿನಿ ಚೌಕ್ನ ಲಾಲ್ ಕಿಲಾ ಸಮೀಪ ಸೋಮವಾರ ಸಂಜೆ 6.52ರ ಸುಮಾರಿಗೆ ಚಲಿಸುತ್ತಿದ್ದ ಹ್ಯುಂಡೈ ಐ-20 (Hyundai i20) ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.


ಸ್ಫೋಟದ ತೀವ್ರತೆಗೆ ಸಮೀಪದಲ್ಲಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಟ್ಟಡಗಳು ಅಲುಗಾಡುವಷ್ಟಿತ್ತು ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಯುಎಪಿಎ (UAPA) ಮತ್ತು ಸ್ಫೋಟಕ ಕಾಯ್ದೆ (Explosives Act) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಿಷೇಧಿತ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ (JEM) ಹಾಗೂ ಅನ್ಸಾರ್ ಗಜ್ವತ್-ಉಲ್-ಹಿಂದ್ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಉಗ್ರ ಸಂಘಟನೆಯ ಜಾಲವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಭೇದಿಸಿದ ಕಲವೇ ಗಂಟೆಗಳಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಈ ಕೃತ್ಯದ ಬಗ್ಗೆ ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಆಗ್ರಹಿಸಿವೆ.
“ದೆಹಲಿ ಸ್ಫೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚಿನ ಜಾಗರೂಕತೆಯನ್ನು ಕಾಯ್ದುಕೊಳ್ಳುವಂತೆ ನಾನು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದೇನೆ. ಜನದಟ್ಟಣೆ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಬಲಪಡಿಸಲು ಮತ್ತು ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬಿಗಿ ಭದ್ರತೆ :

ದೆಹಲಿಯ ಸ್ಫೋಟದ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ನಗರಾದ್ಯಂತ ಹೈ ಅಲರ್ಟ್ ಜಾರಿಗೊಳಿಸಲಾಗಿದೆ.
ಪ್ರಮುಖ ಸ್ಥಳಗಳಲ್ಲಿ ಭದ್ರತೆ: ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳು ಹಾಗೂ ಅಗತ್ಯ ಮೂಲಸೌಕರ್ಯ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರಮುಖ ಕೇಂದ್ರಗಳು: ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್ಗಳು ಮತ್ತು ವ್ಯವಹಾರಿಕ ಕೇಂದ್ರಗಳಲ್ಲೂ ಹೆಚ್ಚಿನ ನಿಗಾ ಇಡಲಾಗಿದೆ.
ಪೊಲೀಸರಿಗೆ ಸೂಚನೆ: ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು 24 ಗಂಟೆಗಳ ಕಾಲ ಮೇಲ್ವಿಚಾರಣೆ ನಡೆಸಲು ಸೂಚನೆ ನೀಡಲಾಗಿದೆ.
ಬಿರುಸುಗೊಂಡ ವಾಹನ ತಪಾಸಣೆ: ಭದ್ರತಾ ಸಿದ್ಧತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆಗಳ ಮೇಲೆ ಬ್ಯಾರಿಕೇಡ್ಗಳನ್ನು ಅಳವಡಿಸಿ, ಎಲ್ಲಾ ವಾಹನಗಳ ಸಮಗ್ರ ತಪಾಸಣೆ ನಡೆಸಲಾಗುತ್ತಿದೆ.
ಹೆಚ್ಚುವರಿ ತಂಡಗಳ ನಿಯೋಜನೆ: ಅನುಮಾನಾಸ್ಪದ ವ್ಯಕ್ತಿಗಳನ್ನು ಗುರುತಿಸಿ, ಪರಿಶೀಲಿಸಲು ಹೆಚ್ಚುವರಿ ಭದ್ರತಾ ತಂಡಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರಿಗೆ ಮನವಿ :
ಪರಿಶೀಲನಾ ಕ್ರಮಗಳ ವೇಳೆ ಸಾರ್ವಜನಿಕರು ಶಾಂತವಾಗಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ಮನವಿ ಮಾಡಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.




















