ಬೆಂಗಳೂರು, ಏ.04 www.bengaluruwire.com: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬರೆದ ಪತ್ರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ ಎಂದು ಕಿಡಿಕಾರಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, “ರಾಜ್ಯಪಾಲರು ತಮ್ಮ ಅಧಿಕಪ್ರಸಂಗವನ್ನು ನಿಲ್ಲಿಸದಿದ್ದರೆ ಗಂಟುಮೂಟೆ ಕಟ್ಟಿಕೊಂಡು ಹೋಗಬೇಕಾಗುತ್ತದೆ” ಎಂದು ಕಟುವಾಗಿ ಎಚ್ಚರಿಸಿದ್ದಾರೆ.
ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪತ್ರವೊಂದನ್ನು ಹಂಚಿಕೊಂಡಿರುವ ಅವರು, ರಾಜ್ಯಪಾಲರ ಹಸ್ತಕ್ಷೇಪವನ್ನು ಖಂಡಿಸಿದ್ದಾರೆ. “ನೀವು ಜನರಿಂದ ನೇರವಾಗಿ ಆಯ್ಕೆಯಾದ ಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಕಾರ್ಯನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಥವಾ ಸಾಂವಿಧಾನಿಕ ಅಧಿಕಾರವಿಲ್ಲ” ಎಂದು ನೇರವಾಗಿಯೇ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿಂದಿ ಸಾಮ್ರಾಜ್ಯಶಾಹಿ ಲಾಬಿ ಆರೋಪ:

ರಾಜ್ಯಪಾಲರು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದಾರೆ ಎಂದು ನಾರಾಯಣಗೌಡ ಆರೋಪಿಸಿದ್ದಾರೆ. “ನಿಮಗೆ ತೃತೀಯ ಭಾಷೆಯ ಮೇಲೆ ಅಷ್ಟೊಂದು ಪ್ರೇಮವಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲಿನ ಮಕ್ಕಳಿಗೆ ತ್ರಿಭಾಷಾ ನೀತಿಯಡಿ ಕನ್ನಡ ಕಲಿಸಲು ಹೇಳಿ. ಆ ಧೈರ್ಯ ನಿಮಗಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಮಾತನಾಡಬೇಡಿ” ಎಂದು ಸವಾಲು ಹಾಕಿದ್ದಾರೆ.
ರಾಜಭವನದ ಖರ್ಚು ಕನ್ನಡಿಗರದ್ದು:
ರಾಜ್ಯಪಾಲರ ಹುದ್ದೆಯನ್ನು ‘ರಾಜಶಾಹಿ ವ್ಯವಸ್ಥೆಯ ಪಳೆಯುಳಿಕೆ’ ಎಂದು ಕರೆದಿರುವ ಅವರು, “ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನದ ಐಷಾರಾಮಿ ವ್ಯವಸ್ಥೆ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ಸರಿಯಲ್ಲ. ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ಹಿಂಪಡೆಯಿರಿ” ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘದ ಮನವಿಗೆ ರಾಜ್ಯಪಾಲರು ಸ್ಪಂದಿಸಿರುವುದನ್ನು ಅವರು ‘ಕುತಂತ್ರ’ ಎಂದು ಕರೆದಿದ್ದಾರೆ. ಒಟ್ಟಾರೆ, ಎಸ್ಎಸ್ಎಲ್ಸಿ ಭಾಷಾ ನೀತಿಯ ಬದಲಾವಣೆ ಈಗ ರಾಜಭವನ ಮತ್ತು ಕನ್ನಡಪರ ಸಂಘಟನೆಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
“ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ ಎಚ್ಚರ”!!
“ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದೇ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಇದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ. ಹಿಂಬಾಗಿಲಿನಿಂದ ಆಡಳಿತ ನಡೆಸಲು ಪ್ರಯತ್ನಿಸಬೇಡಿ.”
– ಟಿ.ಎ. ನಾರಾಯಣಗೌಡ, ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ


















