ಬೆಂಗಳೂರು, ಜೂ.05 www.bengaluruwire.com: ರಾಜ್ಯ ಸರ್ಕಾರವು ಮಹತ್ವದ ಆಡಳಿತಾತ್ಮಕ ಪುನರ್ರಚನೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಡಿಸಿ) ಐಎಎಸ್ ಅಧಿಕಾರಿ ಕಾಂತರಾಜು ಪಿ.ಎಸ್ ಅವರನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಈವರೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜಗದೀಶ ಜಿ. ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ.
ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾಂತರಾಜು ಪಿ.ಎಸ್. (2019ನೇ ಬ್ಯಾಚ್) ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಇನ್ನು, ಬೆಂಗಳೂರು ನಗರ ಡಿಸಿ ಆಗಿದ್ದ ಜಗದೀಶ ಜಿ. (2012ನೇ ಬ್ಯಾಚ್) ಅವರನ್ನು ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ ‘ಬೆಂಗಳೂರು ಕೇಂದ್ರ ನಗರ ಪಾಲಿಕೆಯ’ (Bengaluru Central City Corporation) ಆಯುಕ್ತರನ್ನಾಗಿ ನೇಮಿಸಲಾಗಿದೆ.
ಇತರ ಪ್ರಮುಖ ಐಎಎಸ್ ಅಧಿಕಾರಿಗಳ ವರ್ಗಾವಣೆ:
ಬೆಂಗಳೂರು ನಗರ ಜಿಲ್ಲಾಧಿಕಾರಿ ಬದಲಾವಣೆ ಜೊತೆಗೆ, ಇತರ ಕೆಲವು ಪ್ರಮುಖ ನಿಗಮ-ಮಂಡಳಿಗಳಿಗೂ ನೂತನ ಅಧಿಕಾರಿಗಳನ್ನು ನೇಮಿಸಲಾಗಿದೆ.

ಡಾ. ಮಂಜುಳಾ ಎನ್. (2002ನೇ ಬ್ಯಾಚ್): ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT/BT), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನು, ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಡಾ. ರಾಮ್ ಪ್ರಸಾತ್ ಮನೋಹರ್ ವಿ. (2010ನೇ ಬ್ಯಾಚ್): ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾಗಿದ್ದ ಇವರನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರನ್ನಾಗಿ (MD) ವರ್ಗಾವಣೆ ಮಾಡಲಾಗಿದೆ.
ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಜೂನ್ 05 ರಂದು ಈ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದ್ದಾರೆ.















