ಬೆಂಗಳೂರು, ಜೂ.29 www.bengaluruwire.com: ನಗರದ ಪಾದಚಾರಿ ಮಾರ್ಗಗಳನ್ನು (Footpath) ಸುಗಮ ಹಾಗೂ ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಇದೇ ಜುಲೈ 1 ರಿಂದ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ.
ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್ ಜಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಈ ವಿಶೇಷ ಕಾರ್ಯಾಚರಣೆ ನಡೆಯಲಿದ್ದು, ಸಾರ್ವಜನಿಕರು ಯಾವುದೇ ಅಡಚಣೆಯಿಲ್ಲದೆ ಪಾದಚಾರಿ ಮಾರ್ಗಗಳನ್ನು ಬಳಸಲು ಅನುವು ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ.
ಮೊದಲ ಹಂತದಲ್ಲಿ 90 ಕಿ.ಮೀ ಫುಟ್ಪಾತ್ ಅಭಿವೃದ್ಧಿ:

ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 6 ವಿಭಾಗಗಳಲ್ಲಿ ಈ ಕಾರ್ಯಾಚರಣೆ ಆರಂಭವಾಗಲಿದೆ. ಪ್ರಾರಂಭಿಕ ಹಂತದಲ್ಲಿ ಪ್ರತಿ ವಿಭಾಗದಲ್ಲಿ 15 ಕಿ.ಮೀ. ನಂತೆ ಒಟ್ಟು 90 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳನ್ನು ಗುರುತಿಸಿ, ಒತ್ತುವರಿ ತೆರವು ಮಾಡುವುದರ ಜೊತೆಗೆ ಸಮಗ್ರ ಅಭಿವೃದ್ಧಿಪಡಿಸಲು ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತ್ಯಾಜ್ಯ ಮುಕ್ತ ಹಾಗೂ ಸುರಕ್ಷಿತ ಪಾದಚಾರಿ ಮಾರ್ಗ:
ನಗರದ ಹಲವೆಡೆ ಪಾದಚಾರಿ ಮಾರ್ಗಗಳು ಒತ್ತುವರಿಯಾಗಿವೆ. ಅಲ್ಲದೆ, ತ್ಯಾಜ್ಯ ಬ್ಲ್ಯಾಕ್ ಸ್ಪಾಟ್ ಗಳು, ಕಟ್ಟಡ ತ್ಯಾಜ್ಯ ಹಾಗೂ ಇನ್ನಿತರ ಅವಶೇಷಗಳನ್ನು ಫುಟ್ಪಾತ್ಗಳ ಮೇಲೆ ಸುರಿಯುತ್ತಿರುವುದರಿಂದ ಪಾದಚಾರಿಗಳಿಗೆ ತೀವ್ರ ಅನಾನುಕೂಲವಾಗುತ್ತಿದೆ. ಇಂತಹ ಸ್ಥಳಗಳನ್ನು ತಕ್ಷಣವೇ ಗುರುತಿಸಿ, ಪಾದಚಾರಿಗಳಿಗೆ ಯಾವುದೇ ಅಡಚಣೆಯಾಗದಂತೆ ಅಭಿವೃದ್ಧಿಪಡಿಸುವಂತೆ ಸಭೆಯಲ್ಲಿ ಆಯುಕ್ತ ಜಗದೀಶ್ ಜಿ ತಾಕೀತು ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಪ್ರತಿ ವಿಭಾಗದಿಂದ ನಿರ್ವಹಣೆ ಹಾಗೂ ಸುಧಾರಣೆ ಅಗತ್ಯವಿರುವ ಪಾದಚಾರಿ ಮಾರ್ಗಗಳ ಪಟ್ಟಿಯನ್ನು ಸಿದ್ಧಪಡಿಸಿ ನೀಡುವಂತೆ ಎಲ್ಲಾ ಕಾರ್ಯನಿರ್ವಾಹಕ ಅಭಿಯಂತರರಿಗೆ ನಿರ್ದೇಶನ ನೀಡಲಾಗಿದೆ. ನಗರದ ಆರ್ಟೀರಿಯಲ್, ಸಬ್-ಆರ್ಟೀರಿಯಲ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವಾತಾವರಣ ಕಲ್ಪಿಸಲು ಕೇಂದ್ರ ನಗರ ಪಾಲಿಕೆ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಹೇಮಲತಾ, ಅಧೀಕ್ಷಕ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.





















