ಬೆಂಗಳೂರು, ಜು.02 www.bengaluruwire.com: ಗ್ರೇಟರ್ ಬೆಂಗಳೂರು (ಜಿಬಿಎ) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿಲ್ಲ; ಬದಲಾಗಿ ಪ್ರಮುಖ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಪಾದಚಾರಿ ಮಾರ್ಗಗಳ (Footpath) ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ ಎಂಬುದನ್ನು ಒತ್ತಿ ಹೇಳಿದರು.
ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿರುವ ಬೀದಿ ಬದಿ ವ್ಯಾಪಾರಿಗಳ ಜೊತೆಗೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಮತ್ತು ಇತರೆ ಅಡೆತಡೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಪಾದಚಾರಿಗಳ ಸುರಕ್ಷತೆಗೆ ಮೊದಲ ಆದ್ಯತೆ:

ಪಾದಚಾರಿ ಮಾರ್ಗಗಳಲ್ಲಿ ನಡೆಯಲು ಸಾಧ್ಯವಾಗದ ಕಾರಣ ಜನರು ರಸ್ತೆಗೆ ಇಳಿಯುತ್ತಿದ್ದಾರೆ. ಇದರಿಂದಾಗಿ ವಾಹನಗಳು ಡಿಕ್ಕಿ ಹೊಡೆದು ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಅಥವಾ ಗಾಯಗೊಂಡು ಹಾಸಿಗೆ ಹಿಡಿಯುತ್ತಿದ್ದಾರೆ. ಈ ದುರಂತಗಳನ್ನು ತಪ್ಪಿಸಲು ಸುಪ್ರೀಂ ಕೋರ್ಟ್ನ ಆದೇಶದನ್ವಯ ಒತ್ತುವರಿ ತೆರವು ಕಾರ್ಯಾಚರಣೆ ಅನಿವಾರ್ಯವಾಗಿದೆ ಎಂದು ಸಚಿವರು ವಿವರಿಸಿದರು.
ಕಾರ್ಯಾಚರಣೆಯ ಪ್ರಮುಖ ಅಂಶಗಳು:
ಶೇ. 20ರಷ್ಟು ರಸ್ತೆಗಳಲ್ಲಿ ಮಾತ್ರ ತೆರವು: ನಗರದ ಆರ್ಟಿರಿಯಲ್ (Arterial) ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಮಾತ್ರ ತೆರವು ಕಾರ್ಯಾಚರಣೆ ನಡೆಯಲಿದ್ದು, ಉಳಿದ ಶೇ. 80ರಷ್ಟು ವಾರ್ಡ್ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ತ್ವರಿತ ಅಭಿವೃದ್ಧಿ: ಒತ್ತುವರಿ ತೆರವುಗೊಂಡ ರಸ್ತೆಗಳಲ್ಲಿ ತಕ್ಷಣವೇ ಉತ್ತಮ ಗುಣಮಟ್ಟದ ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಸಾರ್ವಜನಿಕರ ಪರಿಶೀಲನೆ: ಕಾಮಗಾರಿ ಪೂರ್ಣಗೊಂಡ ನಂತರ ಸ್ಥಳೀಯ ನಾಗರಿಕರೊಂದಿಗೆ ಸೇರಿ ಪಾದಚಾರಿ ಮಾರ್ಗಗಳ ಪರಿಶೀಲನೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು.
ಜುಲೈ 10ರಿಂದ ಅನಾಥ ವಾಹನಗಳ ತೆರವು:
ರಸ್ತೆ ಬದಿಗಳಲ್ಲಿ ದೀರ್ಘಕಾಲದಿಂದ ನಿಂತಿರುವ ಅನಾಥ ವಾಹನಗಳನ್ನು ಜುಲೈ 10ರಿಂದ ತೆರವುಗೊಳಿಸಲು ಬೃಹತ್ ಅಭಿಯಾನ ಆರಂಭವಾಗಲಿದೆ. ಬಿಬಿಎಂಪಿ (BBMP) ಹಾಗೂ ಸಂಚಾರಿ ಪೊಲೀಸರ ಸಮನ್ವಯದಲ್ಲಿ ಈ ಕಾರ್ಯ ನಡೆಯಲಿದೆ. ಅದೇ ರೀತಿ, ಜುಲೈ 15ರ ನಂತರ ನಗರದಲ್ಲಿರುವ ಬೃಹತ್ ಕಟ್ಟಡ ತ್ಯಾಜ್ಯ (Debris) ಹಾಗೂ ಗಿಡಗಂಟಿಗಳನ್ನು ಮೆಟ್ರೋ ಹಾಗೂ ರೈಲ್ವೆ ಇಲಾಖೆಗಳ ಸಹಯೋಗದೊಂದಿಗೆ ತೆರವುಗೊಳಿಸುವ ಯೋಜನೆ ರೂಪಿಸಲಾಗಿದೆ.
ರ್ಯಾಂಪ್ಗಳ ತೆರವಿಗೆ ವಿಶೇಷ ಕಾರ್ಯಾಚರಣೆ:
ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಮುಂಭಾಗದಲ್ಲಿ ವಾಹನಗಳ ಪ್ರವೇಶಕ್ಕಾಗಿ ಪಾದಚಾರಿ ಮಾರ್ಗಗಳ ಮೇಲೆಯೇ ನಿರ್ಮಿಸಲಾಗಿರುವ ರ್ಯಾಂಪ್ಗಳಿಂದ (Ramps) ಜನಸಾಮಾನ್ಯರ ಓಡಾಟಕ್ಕೆ ಅಡ್ಡಿಯಾಗುತ್ತಿದೆ. ಮುಂದಿನ ಹಂತದಲ್ಲಿ ಇಂತಹ ರ್ಯಾಂಪ್ಗಳನ್ನು ತೆರವುಗೊಳಿಸಲು ವಿಶೇಷ ಕಾರ್ಯಾಚರಣೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಖಡಕ್ ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
”ಯಾರ ಜೀವನೋಪಾಯಕ್ಕೂ ತೊಂದರೆ ಉಂಟುಮಾಡುವುದು ಸರ್ಕಾರದ ಉದ್ದೇಶವಲ್ಲ. ಆದರೆ ಪಾದಚಾರಿ ಮಾರ್ಗ ಬಳಸಲು ಸಾಧ್ಯವಾಗದೆ ಜನರು ಪ್ರಾಣ ಕಳೆದುಕೊಳ್ಳುತ್ತಿರುವಾಗ ಸುಮ್ಮನೆ ಕೂರಲು ಸಾಧ್ಯವಿಲ್ಲ. ವಾಣಿಜ್ಯ ಕಟ್ಟಡದ ಮಾಲೀಕರು, ಅಂಗಡಿಗಳವರು ಸ್ವಯಂಪ್ರೇರಿತರಾಗಿ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಸಹಕರಿಸಬೇಕು”
– ಕೃಷ್ಣ ಬೈರೇಗೌಡ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ























