ಬೆಂಗಳೂರು, ಜು.03 www.bengaluruwire.com: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಬೆಸ್ಕಾಂ (BESCOM) ಸ್ಪಷ್ಟನೆ ನೀಡಿದೆ. ಯೋಜನೆಗಾಗಿ ಮಾಹಿತಿ ಸಂಗ್ರಹಿಸುವಾಗ ಫಲಾನುಭವಿಗಳ ಪ್ರವರ್ಗ (ಜಾತಿ) ಕುರಿತು ಮಾಹಿತಿ ನೀಡುವುದು ಖಡ್ಡಾಯವಲ್ಲ ಎಂದು ತಿಳಿಸಿದೆ.
ಜುಲೈ 1 ರಿಂದ ರಾಜ್ಯಾದ್ಯಂತ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್ಗಳು ಸೇವಾ ಸಿಂಧು (Seva Sindhu) ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷಣಾ ಪತ್ರದ ಮೂಲಕ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈ ವೇಳೆ ಫಲಾನುಭವಿಯ ಪ್ರವರ್ಗ ಅಥವಾ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಹಿತಿ ಕೇಳಲಾಗುತ್ತಿದ್ದು, ಇದು ಕೇವಲ ‘ಐಚ್ಛಿಕ’ವಾಗಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಗೊಂದಲಗಳಿಗೆ ತೆರೆ ಎಳೆದ ಬೆಸ್ಕಾಂ:
ಇತ್ತೀಚೆಗೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಜಾತಿ ಪ್ರಮಾಣಪತ್ರ ಖಡ್ಡಾಯವೇ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದವು. ಈ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಬೆಸ್ಕಾಂ, ಯಾವುದೇ ಕಡ್ಡಾಯ ನಿಯಮವಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದೆ.

ಮಾಹಿತಿ ನೀಡಲು ನಿರಾಕರಿಸುವ ಅವಕಾಶ:
ಒಂದು ವೇಳೆ ಫಲಾನುಭವಿಗಳಿಗೆ ತಮ್ಮ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ, ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ನಲ್ಲಿರುವ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಲಾಗಿದೆ.
ಗೃಹ ಜ್ಯೋತಿ ಸಹಾಯವಾಣಿ ವಿವರ:
ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಯಾವುದೇ ಕುಂದುಕೊರತೆಗಳಿದ್ದರೆ ಅಥವಾ ದೂರು ನೀಡಬೇಕಿದ್ದರೆ, ಬೆಸ್ಕಾಂ ಪ್ರತ್ಯೇಕ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ. ಈ ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಬೆಸ್ಕಾಂ ಸಹಾಯವಾಣಿ ಸಂಖ್ಯೆಗಳು:
9480816111, 9480816112, 9480816113, 9480816114






















