ಬೆಂಗಳೂರು, ಆ.11 www.bengaluruwire.com: ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಮೂಲಸೌಕರ್ಯ ಕಾಮಗಾರಿಗಳಲ್ಲಿ ನಕಲಿ ಬಿಲ್ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಮಹತ್ವವನ್ನು ಒತ್ತಿ ಹೇಳಿದರು.
ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಇಲ್ಲ:
ಆಡಳಿತದಲ್ಲಿ, ಅದರಲ್ಲೂ ವಿಶೇಷವಾಗಿ ಸ್ಥಳೀಯ ಆಡಳಿತ ಮತ್ತು ನಗರಾಭಿವೃದ್ಧಿ ಯೋಜನೆಗಳಲ್ಲಿ ನಡೆಯುವ ಅವ್ಯವಹಾರಗಳನ್ನು ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ನಡೆಯುತ್ತಿದೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ ಬಿಲ್ ಮತ್ತು ದಾಖಲೆ ತಿದ್ದುವಿಕೆಗೆ ಕಡಿವಾಣ ಹಾಕಲು ಈಗಾಗಲೇ ಆಸ್ತಿ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭ್ರಷ್ಟಾಚಾರದ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಗುಡುಗಿದರು.

ಬೆಂಗಳೂರು ಆಡಳಿತ ಹಾಗೂ ಇ-ಖಾತೆ ವಿಸ್ತರಣೆ:
ರಾಜಧಾನಿ ಬೆಂಗಳೂರಿನಲ್ಲಿ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇ-ಖಾತೆ ವ್ಯವಸ್ಥೆಯನ್ನು ಉಲ್ಲೇಖಿಸಿದ ಅವರು, “ಬೆಂಗಳೂರಿನಲ್ಲಿ 25 ಲಕ್ಷ ಇ-ಖಾತೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಪಟ್ಟಾ ದಾಖಲೆಗಳನ್ನು ಉಚಿತವಾಗಿ ನೀಡಲಾಗಿದೆ. ಲಂಚವಿಲ್ಲದೆ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ಕೆಲಸ ನಮ್ಮ ಸರ್ಕಾರದ 6ನೇ ಗ್ಯಾರಂಟಿಯಾಗಿದೆ. ಮುಂದಿನ ಆರೆಳು ತಿಂಗಳಲ್ಲಿ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು” ಎಂದು ತಿಳಿಸಿದರು.
ಟೀಮ್ ಕರ್ನಾಟಕ ಮತ್ತು ಪ್ರಜಾಸೇವೆ:
“ನಾನು ಸೇರಿದಂತೆ ಮಂತ್ರಿಮಂಡಲ ಹಾಗೂ ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರೇ. ನಾವೆಲ್ಲರೂ ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದ ಅವರು, ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. ‘Sharing and caring’ ಮಂತ್ರವನ್ನು ಅನುಸರಿಸುವಂತೆ ಸಲಹೆ ನೀಡಿದ ಅವರು, ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸುವಂತೆ ನಿರ್ದೇಶನ ನೀಡಿದರು.
ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಿ:
ಬೆಂಗಳೂರು ಹಾಗೂ ರಾಜ್ಯದ ಪ್ರಗತಿ ಕೇವಲ ಸರ್ಕಾರದ ಸಾಧನೆಯಲ್ಲ, ಅದು ರಾಜ-ಮಹಾರಾಜರ ಕಾಲದಿಂದ ಬಂದ ಪರಿಶುದ್ಧ ಆಡಳಿತದ ಫಲ ಎಂದರು. “ಯಾರ ಒತ್ತಡಕ್ಕೂ ಮಣಿಯದೆ, ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಖುದ್ದಾಗಿ ಪರಿಶೀಲಿಸುತ್ತೇನೆ ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ಇಂತಹ ಸಭೆಗಳನ್ನು ನಡೆಸಿ ಪ್ರಗತಿ ಪರಿಶೀಲನೆ ಮಾಡಲಾಗುವುದು” ಎಂದು ಅವರು ಎಚ್ಚರಿಸಿದರು.
ಜೊತೆಗೆ, ಮತದಾರರ ಪಟ್ಟಿಯಿಂದ ಅರ್ಹರ ಹೆಸರು ತೆಗೆದು ಹಾಕುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಲು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಇದೇ ವೇಳೆ ನಿರ್ದೇಶನ ನೀಡಿದರು.




















