ಬೆಂಗಳೂರು, ಆ.22 www.bengaluruwire.com: ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ 2026ನೇ ಸಾಲಿನ ಪ್ರತಿಷ್ಠಿತ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ಗೆ (National Teachers Award) ಕರ್ನಾಟಕದ ಹೆಮ್ಮೆಯ ಶಿಕ್ಷಕಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ ಈ ಅತ್ಯುನ್ನತ ರಾಷ್ಟ್ರ ಪ್ರಶಸ್ತಿ ಒಲಿದುಬಂದಿದೆ.
ದೇಶಾದ್ಯಂತ ಒಟ್ಟು 48 ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ರತ್ನಕುಮಾರಿ ಅವರೂ ಒಬ್ಬರಾಗಿರುವುದು ಇಡೀ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಸೆಪ್ಟೆಂಬರ್ 5ರಂದು ರಾಷ್ಟ್ರಪತಿಗಳಿಂದ ಪ್ರದಾನ:

ನವದೆಹಲಿಯ ವಿಜ್ಞಾನ ಭವನದಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೆಚ್ಚುಗೆ:
ರತ್ನಕುಮಾರಿ ಅವರ ಸಾಧನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದು, ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. “ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ಶ್ರೀಮತಿ ರತ್ನಕುಮಾರಿ ಅವರು ನಮ್ಮ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ ಹಾಗೂ ಇಡೀ ರಾಜ್ಯವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಇವರ ಶೈಕ್ಷಣಿಕ ಕಾಯಕ ರಾಜ್ಯದ ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿ” ಎಂದು ಸಚಿವರು ಶ್ಲಾಘಿಸಿದ್ದಾರೆ.


















