ನವದೆಹಲಿ, (www.bengaluruwire.com) : ಬಿಟ್-ಕಾಯಿನ್ ಹಾಗೂ ಹಣಕಾಸು ಸಂಸ್ಥೆಗಳ ವೆಬ್ ಸೈಟ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ, ಒಬ್ಬರನ್ನೊಬ್ಬರು ಕಾಲೆಳೆಯುವ ಹೇಳಿಕೆಗಳು ತಾರಕಕ್ಕೇರಿದೆ.
ಇನ್ನೊಂದೆಡೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಜನಧನ್ ಖಾತೆಯಿಂದ 6 ಸಾವಿರ ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿಯಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ತಮ್ಮ ನಾಯಕತ್ವವನ್ನು ಪರೋಕ್ಷವಾಗಿ ಸಮರ್ಥಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಹೇಳಿದ್ದಾರೆ.
ನವದೆಹಲಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ನೂರು ದಿನಗಳ ಆಡಳಿತದ ಕುರಿತು ಚರ್ಚೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿಗಳು ಹೆಚ್ಚು ಮಾತನಾಡಲು ಇಷ್ಟ ಪಡಲಿಲ್ಲ .

ಆದರೆ ತಾವೇ ಪ್ರಧಾನಿಗಳಿಗೆ ಈ ವಿಚಾರ ತಿಳಿಸಿದ್ದೇನೆ. ಆಗ ಅವರು ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ. ನಿಷ್ಠೆ ದಿಟ್ಟತನದಿಂದ ಜನಪರ ಕೆಲಸ ಮಾಡಿ. ಆಗ ಎಲ್ಲವೂ ಸರಿಹೋಗುತ್ತದೆ. ಸೋಲು ಗೆಲುವು ಇದ್ದೇ ಇರುತ್ತದೆ. ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ ಎಂದು ತಮಗೆ ಹೇಳಿರುವುದಾಗಿ ತಿಳಿಸಿದರು ಎಂದು ತಿಳಿಸಿದ್ದಾರೆ.
ಬಿಜೆಪಿ ಅಧ್ಯಕ್ಷರಿಗೆ 25 ಎಂಎಲ್ ಸಿ ಚುನಾವಣೆ ಅಭ್ಯರ್ಥಿ ಶೀಘ್ರ ಆಯ್ಕೆಗೆ ಮನವಿ :
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ನಾನು ಭೇಟಿ ಮಾಡಿದ್ದೆ. ಇತ್ತೀಚೆಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಂತಹ ವಿಷಯಗಳ ಕುರಿತು ವಿವರಗಳನ್ನು ಅವರಿಗೆ ನೀಡಿದೆ ಎಂದು ಬೊಮ್ಮಾಯಿ ಹೇಳಿದರು.
ವಿಧಾನಪರಿಷತ್ ಚುನಾವಣೆಗೆ 25 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಈ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸಬೇಕೆಂದು ಮನವಿ ಮಾಡಿಕೊಂಡೆ. ಇದರಿಂದ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ವಿವರಿಸಿದ್ದೇನೆ.
ರಾಜ್ಯದಲ್ಲಿ ಬಿಜೆಪಿ ನಾಯಕರ ನಾಲ್ಕು ತಂಡಗಳ ಪ್ರವಾಸದ ಕುರಿತು ಅವರು ಮಾಹಿತಿ ಪಡೆದಿದ್ದಾರೆ. ನಾವು ಉತ್ತರಪ್ರದೇಶ ಚುನಾವಣೆಯಲ್ಲಿ ತಲ್ಲೀನರಾಗಿ ದೇವೆ. ಆದರೂ ಕೂಡ ಕರ್ನಾಟಕ ನಮ್ಮ ಪಾಲಿಗೆ ಮಹತ್ವದ ರಾಜ್ಯ. ಹಾಗಾಗಿ ಒಂದು ದಿನ ಬಿಡುವು ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಅವರು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ನಾನು ಭೇಟಿ ಮಾಡಿದ್ದೆ. ಅವರ ಜೊತೆ ಹೆಚ್ಚು ಹೊತ್ತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಹೆಚ್ವು ಹೊತ್ತು ಚರ್ಚೆ ನಡೆದಿಲ್ಲ. ಬಿಟ್ ಕಾಯಿನ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇರುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿ ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ಘನತೆ ಹಾಳು ಮಾಡುತ್ತಿದೆ – ಡಿಕೆಶಿ :
‘ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ರೀತಿ ಕಾಂಗ್ರೆಸ್ ನಾಯಕರ ಘನತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ನಮ್ಮ ಬಳಿಯೂ ಕೆಲವು ಮಾಹಿತಿಗಳಿವೆ, ಸೂಕ್ತ ಸಮಯದಲ್ಲಿ ನಾವು ಮಾತನಾಡುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಡೀ ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಪ್ರಕರಣದ ವಿಚಾರಣೆಯನ್ನು ಇ.ಡಿ.ಗೆ ಹಸ್ತಾಂತರ ಮಾಡಲಾಗಿದೆ ಎಂಬುದು ಮುಖ್ಯಮಂತ್ರಿಗಳ ಹೇಳಿಕೆ. ಈಗ ಅವರು ಕೆಲವು ಕಾಂಗ್ರೆಸ್ ನಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಹಳೇ ಪ್ರಕರಣದವನ್ನು ಉಲ್ಲೇಖಿಸಿ ದಾರಿ ತಪ್ಪಿಸುತ್ತಿದ್ದಾರೆ. ಇದೇ ರೀತಿ ಹಲವು ವದಂತಿಗಳನ್ನು ಹರಿಯಬಿಡಲಾಗಿದೆ.
ಬಿಟ್ ಕಾಯಿನ್ ಹಗರಣದಲ್ಲಿ ಹಲವು ಬಿಜೆಪಿ ನಾಯಕರ ಹೆಸರುಗಳಿವೆ :
ಪ್ರಧಾನ ಮಂತ್ರಿಗಳಿಗೆ ಜನಸಾಮಾನ್ಯರು ಬರೆದ ದೂರಿನ ಪತ್ರವನ್ನು ಓದಿದ್ದೇನೆ. ಅದರಲ್ಲಿ ಅನೇಕ ಬಿಜೆಪಿ ನಾಯಕರ ಹೆಸರುಗಳಿವೆ. ಅದು ನಿಜವೇ? ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ, ಇಲ್ಲವೇ? ಅವರ ಹೆಸರುಗಳನ್ನು ಬಹಿರಂಗ ಪಡಿಸಲಿ. ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಪೊಲೀಸ್ ಅಧಿಕಾರಿಗಳು ಈ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿರುವಾಗ, ಈ ವಿಚಾರವನ್ನು ಜನರ ಮುಂದೆ ಇಡುವುದು ಸರ್ಕಾರದ ಜವಾಬ್ದಾರಿ ಎಂದು ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಬೇಕಿದೆ :
ಬಿಜೆಪಿಯವರು ತಮ್ಮ ನಾಯಕರ ಹೆಸರು ಮುಚ್ಚಿಟ್ಟು, ಕಾಂಗ್ರೆಸ್ ನಾಯಕರ ಹೆಸರು ತಳುಕು ಹಾಕಲು ಪ್ರಯತ್ನಿಸುತ್ತಿದ್ದಾರೆ. ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಅದೇ ರೀತಿ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ಹೆಸರೂ ಹೊರಬರಬೇಕು. ಬಿಜೆಪಿ ನಾಯಕರು, ಮಂತ್ರಿಗಳೇ ಈ ವಿಚಾರವಾಗಿ ಮಾಧ್ಯಮಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರು, ಅವರ ಮಕ್ಕಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಬಿಜೆಪಿಯಲ್ಲಿ ಭಿನ್ನಮತ, ಆಂತರಿಕ ಜಗಳ ಸಾಮಾನ್ಯ. ಹೀಗಾಗಿ ನಮಗೆ ಕೇಳಿ ಬಂದಿರುವ ಬಿಜೆಪಿ ನಾಯಕರ ಹೆಸರುಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ತನಿಖೆ ಸರಿಯಾದ ಮಾರ್ಗದಲ್ಲಿ ನಡೆದು ನಮಗೆ ಸತ್ಯಾಂಶ ಹೊರಬರಬೇಕಿದೆ. ಆದರೆ ಬಿಜೆಪಿ ಈ ಪ್ರಕರಣದಲ್ಲಿ ತನ್ನ ನಾಯಕರನ್ನು ರಕ್ಷಿಸಿ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಹೊರಿಸುವ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಡಿಕೆಶಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಜನಧನ್ ಖಾತೆಗೂ ಕನ್ನ – 6 ಸಾವಿರ ಕೋಟಿ ರೂ. ಲಪಟಾಯಿಸಿರುವ ಶಂಕೆ :
ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಮಾಹಿತಿಯಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ‘ ಜನತಾ ಸಂಗಮದ ನಾಲ್ಕನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ ಎಂದರು.
ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?
ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು, ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಎಂದು ಪ್ರಶ್ನಿಸಿದರು.
ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟ ಎಂದಿದ್ದಾರೆ.
ಬಿಟ್ ಕಾಯಿನ್ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಸರ್ಕಾರದ ಪರ ವಕೀಲರು ಎಷ್ಟರ ಮಟ್ಟಿಗೆ ವಾದ ಮಂಡಿಸಿದ್ದಾರೆ ಎನ್ನುವುದೂ ಮುಖ್ಯ. ಇಲ್ಲಿ ಯಾರಿಂದ ಯಾರ ರಕ್ಷಣೆ ಆಗಿದೆ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
























