ಬೆಂಗಳೂರು, (www.bengaluruwire.com) :
ಕನ್ನಡದ ಮೊದಲ ಟಾಕಿ ಚಿತ್ರ ಮಾರ್ಚ್ ಮೂರರಂದು ಸತಿ ಸುಲೋಚನೆ ಬಿಡುಗಡೆಯಾದ ಈ ದಿನವನ್ನು ರಾಜ್ಯ ಸರ್ಕಾರ “ವಿಶ್ವ ಕನ್ನಡ ಸಿನಿಮಾ ದಿನ” ಎಂದು ಘೋಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಡಿಜಿಟಲ್ ಜಗತ್ತಿನಲ್ಲಿ ಕನ್ನಡ ಚಲನಚಿತ್ರಕ್ಕೆ ಸಾಕಷ್ಟು ಅವಕಾಶಗಳಿವೆ. ಕನ್ನಡ ಭಾಷಾ ಬೆಳವಣಿಗೆಗೆ ಕನ್ನಡ ಚಲನಚಿತ್ರ ಅತ್ಯಂತ ಪ್ರಭಾವಿ ಮಾಧ್ಯಮ. ಕನ್ನಡ ಚಿತ್ರರಂಗವನ್ನು ಉಳಿಸಲು ಹೊಸ ತಂತ್ರಜ್ಞಾನ ಬಳಕೆ ಹಾಗೂ ಸ್ಥಳೀಯ ಪ್ರತಿಭೆಗೆ ಅವಕಾಶ ಲಭಿಸಲು ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಕನ್ನಡ ಚಿತ್ರರಂಗ ಹಿರಿಯರ ಜೊತೆ ಸೇರಿ ಸೂಕ್ತ ಕ್ರಮ ಕೈಗೊಳ್ಳಲಿದೆ.
ದೇಶದಲ್ಲಿ ದೆಹಲಿ, ಕೋಲ್ಕತಾ, ಗೋವಾ, ಕೇರಳ, ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಆ ಪೈಕಿ ಬೆಂಗಳೂರು ಮೊದಲ ಸ್ಥಾನಕ್ಕೆ ಬರಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ನಡೆದರೆ ಕನ್ನಡ ಚಿತ್ರಗಳಿಗೆ ಅವಕಾಶ ಹೆಚ್ಚಲಿದೆ.
ಇದ್ದ ವ್ಯವಸ್ಥೆಯಲ್ಲಿಯೇ ಹಿಂದೆ ಕಪ್ಪುಬಿಳುಪು ಸಿನಿಮಾ ಮಾಡುತ್ತಿದ್ದರು. ಅದೇ ತಮಗೆ ಇಷ್ಟ. ಈಗ ಕಪ್ಪು ಬಿಳುಪಿನ ಎಫೆಕ್ಟ್ ಈಗಿನ ಸಿನಿಮಾಗಳಲ್ಲೂ ಆಗಾಗ ಬಳಕೆಯಾಗುತ್ತಿದೆ.


ನಟ ಪುನೀತ್ ರಾಜ್ ಕುಮಾರ್ ಗೆ ಸದ್ಯದಲ್ಲೆ ಕರ್ನಾಟಕ ರತ್ನ ಪ್ರಶಸ್ತಿ :
ನಮ್ಮನ್ನು ಅಗಲಿದ ನಟ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದರು. ಇಂಗ್ಲೀಷ್ ಕವಿ ಜಾನ್ ಕೀಡ್ಸ್, ಸ್ವಾಮಿ ವಿವೇಕಾನಂದರು ಸೇರಿದಂತೆ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದರು. ಅವರಲ್ಲಿ ಪುನೀತ್ ರಾಜ್ ಕುಮಾರ್ ಕೂಡ ಒಬ್ಬರು.
ರಾಜ್ಯ ಸರ್ಕಾರದಿಂದ ಈ ಹಿಂದೆ ಘೋಷಣೆ ಮಾಡಿದಂತೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ವಿತರಿಸಲಿದೆ. ಈ ಕಾರ್ಯಕ್ರಮದ ದಿನಾಂಕವನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ನಿರ್ಧಾರ ಮಾಡಲಿದ್ದೇವೆ.
2023-24ನೇ ಇಸವಿಯಲ್ಲಿ ಮೈಸೂರಿನಲ್ಲಿ ಚಲನಚಿತ್ರ ನಗರಿ ನಿರ್ಮಾಣಕ್ಕೆ ಚಾಲನೆ ನೀಡಲಿದ್ದೇವೆ. ತಾವು ಇಂದು ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ ನಾಳೆ ರಾಜ್ಯ 2022-23ನೇ ಸಾಲಿನ ಬಜೆಟ್, ಉಕ್ರೇನ್ ಬಿಕ್ಕಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿ ಅಸುನೀಗಿದ್ದಾನೆ. ಪರಿಸ್ಥಿತಿ ಹೀಗಿದ್ದರೂ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಸ್ಥಿತಿಯನ್ನು ಬಿಚ್ಚಿಟ್ಟರು.
ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ಚಿತ್ತೋತ್ಸವವನ್ನು ನಮ್ಮ ಅಧಿಕಾರಿಗಳ ಕಾರ್ಯಕ್ಷಮತೆಯಿಂದ ಕೇವಲ 35 ದಿನಗಳಲ್ಲಿ ಸಿನಿಮಾ ಹಬ್ಬ ಮಾಡುವ ಕಾರ್ಯಕ್ರಮ ಕಾರ್ಯಗತವಾಗಿದೆ ಎಂದು ಅಧಿಕಾರಿಗಳನ್ನು ಶ್ಲಾಘಿಸಿದರು.
ಜನಪ್ರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸ್ಮಾರಕ ನಿರ್ಮಾಣ ಭರವಸೆ :
ಇದಕ್ಕೂ ಮುನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ತಮ್ಮ ಪ್ರಾಸ್ತವಿಕ ಭಾಷಣದಲ್ಲಿ, ಕನ್ನಡದ ಜನಪ್ರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಹುಟ್ಟೂರಿನಲ್ಲಿ ಅವರ ಮನೆಯನ್ನು ಅಭಿವೃದ್ಧಿಪಡಿಸಿ ಪುಟ್ಟಣ್ಣ ಕಣಗಾಲ್ ಸ್ಮಾರಕ ನಿರ್ಮಿಸಬೇಕು. ಚಲನಚಿತ್ರ ಅಕಾಡೆಮಿಯಲ್ಲಿ ಅರ್ಧಕ್ಕೆ ನಿಂತ ಆಡಿಟೋರಿಯಮ್ ಪೂರ್ಣಗೊಳಿಸಲು ರಾಜ್ಯ ಸರ್ಕಾರ 15 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮನವಿ ಮಾಡಿದರು.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ನಾಳೆಯ ರಾಜ್ಯ ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಅಚ್ಚರಿಯ ಘೋಷಣೆ ಕಾದಿದೆ ಎಂದು ನಿರ್ಮಾಪಕ ಮತ್ತು ಸಚಿವ ಮುನಿರತ್ನ ಹೇಳಿದರು.
13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಂಚಭಾಷಾ ತಾರೆ ಡಾ.ಭಾರತಿ ವಿಷ್ಣುವರ್ಧನ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪ್ರಿಯದರ್ಶನ್, ನಟ ದರ್ಶನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹರ್ಷ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.






















